ಕರ್ನಾಟಕ

karnataka

ETV Bharat / state

ಶಬ್ದಮಾಲಿನ್ಯ ನಿಯಮಗಳ ಜಾರಿಗೆ ವಿಳಂಬ: ಡಿಜಿಪಿ ವಿರುದ್ಧ ಹೈಕೋರ್ಟ್ ಗರಂ - ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

ರಾಜ್ಯದಲ್ಲಿ ರಾಜಕೀಯ ಸಮಾವೇಶಗಳು, ಧಾರ್ಮಿಕ ಕೇಂದ್ರಗಳು, ವಾಹನಗಳಿಂದ ಶಬ್ದ ಮಾಲಿನ್ಯ ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

high-court
ಹೈಕೋರ್ಟ್

By

Published : Jul 23, 2021, 5:38 PM IST

ಬೆಂಗಳೂರು:ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಸಂಬಂಧ ಪೊಲೀಸ್ ಠಾಣೆಗಳಿಗೆ ಎಷ್ಟು ಶಬ್ದ ಮಾಲಿನ್ಯ ಮಾಪಕಗಳ ಅಗತ್ಯವಿದೆ ಎಂಬ ಕುರಿತು ಸೂಕ್ತ ಪ್ರಮಾಣಪತ್ರ ಸಲ್ಲಿಸದ ರಾಜ್ಯ ಪೊಲೀಸ್ ಮಹಾನಿರ್ದೇಶಕರ ವಿರುದ್ದ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ರಾಜಕೀಯ ಸಮಾವೇಶಗಳು, ಧಾರ್ಮಿಕ ಕೇಂದ್ರಗಳು, ವಾಹನಗಳಿಂದ ಶಬ್ದ ಮಾಲಿನ್ಯ ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು, ಹೈಕೋರ್ಟ್​ನ ಹಿಂದಿನ ನಿರ್ದೇಶನದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರ ಪ್ರಮಾಣಪತ್ರವನ್ನು ಪೀಠಕ್ಕೆ ಸಲ್ಲಿಸಿದರು. ಪ್ರಮಾಣ ಪತ್ರದಲ್ಲಿ ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ ಇತರೆಡೆ 176 ಪೊಲೀಸ್ ಠಾಣೆಗಳಿವೆ. ಅಷ್ಟೂ ಠಾಣೆಗಳಿಗೆ ಶಬ್ಧ ಮಾಲಿನ್ಯ ಅಳೆಯುವ ಮಾಪಕಗಳ ಅಗತ್ಯವಿದೆ. ಆದರೆ, ಅವುಗಳನ್ನು ಡಿಸೆಂಬರ್ ವೇಳೆಗೆ ಹಂತ ಹಂತವಾಗಿ ಖರೀದಿಸಲಾಗುವುದು ಎಂದು ತಿಳಿಸಿದರು.

ಡಿಜಿಪಿ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ ಪೀಠ, ಎಷ್ಟು ಮಾಪಕಗಳ ಅಗತ್ಯವಿದೆ ಎಂಬುದನ್ನು ಸ್ಪಷ್ಟವಾಗಿ ಹೇಳುವಂತೆ ಕಳೆದ ವಿಚಾರಣೆ ವೇಳೆಯೇ ಸೂಚಿಸಿದ್ದೆವು. ಆದರೂ ನಿಖರ ಮಾಹಿತಿ ನೀಡಿಲ್ಲ. ಹೀಗೆ ವರ್ತಿಸಿದರೆ ಶಬ್ದ ಮಾಲಿನ್ಯ ತಡೆ ನಿಯಮಗಳನ್ನು ಜಾರಿಗೊಳಿಸುವುದು ಯಾವಾಗ? ಬೆಂಗಳೂರಿನ ಎಲ್ಲ 107 ಠಾಣೆಗಳಿಗೆ ಶಬ್ದ ಮಾಲಿನ್ಯ ಅಳೆಯುವ ಮಾಪಕಗಳನ್ನು ಖರೀದಿಸಲಾಗಿದೆ. ಇಲ್ಲಿ ಪ್ರಾಯೋಗಿಕವಾಗಿ ಬಳಕೆ ಮಾಡಿದ ನಂತರ ನೀವು ರಾಜ್ಯದ ಇತರೆ ಪೊಲೀಸ್ ಠಾಣೆಗಳಿಗೆ ಖರೀದಿಸುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿತು.

ಅಲ್ಲದೆ, ಇದೇ ವರ್ತನೆ ಮುಂದುವರಿಸಿದರೆ ಡಿಜಿಪಿಯನ್ನು ನ್ಯಾಯಾಲಯಕ್ಕೆ ಬರಲು ಸೂಚಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು. ಕೊನೆಯಲ್ಲಿ, ಈ ಸಂಬಂಧ ಡಿಜಿಪಿ ಜೊತೆ ಸಮಾಲೋಚಿಸಿ ವಿವರ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿತು.

ಇದನ್ನೂ ಓದಿ:ಅಂಕೋಲಾದಲ್ಲಿ ನೋಡ ನೋಡುತ್ತಿದ್ದಂತೆ ಧರೆಗುರುಳಿದ ಮನೆ..

ABOUT THE AUTHOR

...view details