ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕಂದಾಯ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಗಂಭೀರ ಚರ್ಚೆ ನಡೆಯಿತು.
ಸಬ್ ರಿಜಿಸ್ಟ್ರಾರ್ ಕಚೇರಿಯ ಆನ್ಲೈನ್ ಸೇವೆಗಳನ್ನು ಹೆಚ್ಚಾಗಿ ಬಳಕೆ ಮಾಡಿಕೊಂಡರೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಬರಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸಲಹೆ ನೀಡಿದರು. ಇದಕ್ಕೂ ಮುನ್ನ ಪ್ರಶ್ನೋತ್ತರ ವೇಳೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರಶ್ನೆ ಕೇಳಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಉಪ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ಭ್ರಷ್ಟಾಚಾರವೂ ಮುಗಿಲು ಮುಟ್ಟಿದೆ ಎಂದು ಆರೋಪಿಸಿದರು. ಇದಕ್ಕೆ ಉತ್ತರ ನೀಡಿದ ಸಚಿವ ಅಶೋಕ್, ಉಪ ನೋಂದಣಿ ಕಚೇರಿಗಳಲ್ಲಿ ಬಹಳಷ್ಟು ವರ್ಷಗಳಿಂದ ಮಧ್ಯವರ್ತಿಗಳ ಹಾವಳಿ ಇದ್ದು, ಭ್ರಷ್ಟಾಚಾರ ನಡೆಯುತ್ತಿದೆ ಎಂದು ಒಪ್ಪಿಕೊಂಡರಲ್ಲದೆ, ಆನ್ಲೈನ್ ಸೇವೆಯನ್ನು ಹೆಚ್ಚಾಗಿ ಬಳಸಿದರೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಬರಲಿದೆ ಎಂದು ಅಭಿಪ್ರಾಯಪಟ್ಟರು.
ಕಂದಾಯ ಇಲಾಖೆಯ 54 ಸೇವೆಗಳನ್ನು ಸಕಾಲದ ವ್ಯಾಪ್ತಿಗೆ ತರಲಾಗಿದೆ. ಬಹುತೇಕ ಸೇವೆಗಳು ಆನ್ಲೈನ್ನಲ್ಲಿ ಲಭ್ಯ ಇವೆ. ಅದನ್ನು ಬಳಸಿಕೊಂಡರೆ ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಲಿದೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ನಮ್ಮ ಸರ್ಕಾರದ ಅವಧಿಯಲ್ಲಿ ಕೆಲ ಉಪ ನೋಂದಣಿ ಕಚೇರಿಗಳಲ್ಲಿ ಮಾತ್ರ ಆನ್ಲೈನ್ ಸೇವೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಅದು ಉತ್ತಮ ಎನಿಸಿದರೆ ರಾಜ್ಯದ ಎಲ್ಲಾ ಕಚೇರಿಗಳಿಗೂ ವಿಸ್ತರಣೆ ಮಾಡಿ ಎಂದು ಸಲಹೆ ನೀಡಿದರು.