ಬೆಂಗಳೂರು: ಕೊರೊನಾ ಸೋಂಕಿಗೆ ಸಿಲುಕಿ ಗದಗ ಜಿಲ್ಲೆಯ ಮುಂಡರಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ್ ಮೃತಪಟ್ಟಿರುವುದಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಸಂತಾಪ ಸೂಚಿಸಿದ್ದು, ಕೊರೊನಾ ವಾರಿಯರ್ಗೆ ನೀಡುವ ಪರಿಹಾರವನ್ನು ಮೃತರ ಕುಟುಂಬಕ್ಕೆ ತಲುಪಿಸಲಾಗುತ್ತದೆ ಎಂದಿದ್ದಾರೆ.
ಮುಂಡರಗಿ ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿರುವುದು ದುರಾದೃಷ್ಟಕರ. ಮೃತ ಆರೋಗ್ಯಾಧಿಕಾರಿ ಕೋವಿಡ್ ಕಾರ್ಯಾಚರಣೆಯಲ್ಲಿ ಸಕ್ರಿಯರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಅವರ ಕುಟುಂಬಕ್ಕೆ ಸಿಗಬೇಕಾದ ಎಲ್ಲಾ ಪರಿಹಾರ ಮತ್ತು ಸವಲತ್ತುಗಳನ್ನು ಆದಷ್ಟೂ ಬೇಗ ಒದಗಿಸಿ ಕೊಡಲಾಗುವುದು ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಬಸವರಾಜು ಅವರು ಕೊರೊನಾ ಸೋಂಕಿನಿಂದ ದೈವಾಧೀನರಾಗಿರುವುದು ಅತ್ಯಂತ ನೋವಿನ ಸಂಗತಿ. ದೇವರು ಅವರ ಕುಟುಂಬಕ್ಕೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ.