ಬೆಂಗಳೂರು : ನಾಗರಿಕರು ಚುನಾವಣಾ ಪ್ರಕ್ರಿಯೆಯಲ್ಲಿ ಸುಲಭವಾಗಿ ಭಾಗವಹಿಸಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಜಾರಿಗೆ ತಂದಿರುವ ಚುನಾವಣಾ ಸುಧಾರಣೆಗಳಿಗೆ ದೇಶಾದ್ಯಂತ ಚಾಲನೆ ನೀಡಲಾಗಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ತಿಳಿಸಿದರು.
ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಸುಧಾರಣೆಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಚುನಾವಣಾ ಸುಧಾರಣೆಗಳ ಕುರಿತು ರಾಜ್ಯದ ಜನತೆಗೆ ಅರಿವು ಮೂಡಿಸಬೇಕು. ಮೊದಲು ಸರ್ಕಾರಿ ನೌಕರರಾದ ನಾವು ಮತದಾರರ ಪಟ್ಟಿಯಲ್ಲಿ ಹೆಸರು ನಮೂದಿಸಬೇಕು. ನಂತರ ಜನತೆಗೆ ಪ್ರಚಾರ ಮಾಡಬೇಕು. ಆಧಾರ್ ಜೋಡಣೆಯಾದರೆ ಯಾರೂ ಮೋಸ ಮಾಡಲು ಸಾಧ್ಯವಿಲ್ಲ. ಮತದಾನ ನಮ್ಮ ಕರ್ತವ್ಯವಾಗಿದ್ದು, ಮತದಾನ ಮಾಡಲು ಪ್ರೇರಣೆ ಮಾಡಬೇಕು ಎಂದು ಹೇಳಿದರು.
ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಮಾತನಾಡಿ, ಚುನಾವಣಾ ಸುಧಾರಣೆಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಯುವ ಸಮುದಾಯಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಮೊದಲಿನಂತೆ ಜನವರಿ 1ರ ವರೆಗೂ ಹಾಗೂ 18 ವರ್ಷ ತುಂಬಿದ ನಂತರ ಸೇರ್ಪಡೆ ಮಾಡಲು ಕಾಯುವಂತಿಲ್ಲ. 17 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಮುಂಗಡ ಅರ್ಜಿ ಸಲ್ಲಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.
ಮತದಾರರ ನೋಂದಣಿ ಸರಳೀಕರಣ : ಆಗಸ್ಟ್ 1, 2022 ರಿಂದ ಮತದಾರರ ನೋಂದಣಿಗಾಗಿ ಹೊಸ ಸರಳೀಕರಿಸಿದ ಅರ್ಜಿ ನಮೂನೆಗಳು ಲಭ್ಯವಿದ್ದು, ಮತದಾರರ ಪಟ್ಟಿಯ ಹೆಸರು, ಇನ್ನಿತರ ತಿದ್ದುಪಡಿಗಳಿಗಾಗಿ ಹೊಸ ನಮೂನೆ 8 ಲಭ್ಯವಿದೆ. ಮತದಾರರ ಪಟ್ಟಿಗೆ ಸ್ವಯಂ ಪ್ರೇರಿತ ಆಧಾರ್ ಜೋಡಣೆ ಸೌಲಭ್ಯ ಕಲ್ಪಿಸಲಾಗಿದೆ.
ಒಂದೇ ತರಹದ ಹೆಸರು-ಫೋಟೋ ನಮೂದುಗಳನ್ನು ಹೊಂದಿರುವ ಮತದಾರರ ಪರಿಶೀಲನೆಗೆ ಆದ್ಯತೆ ನೀಡಲಾಗಿದೆ. ಮತದಾರರ ಪಟ್ಟಿಯನ್ನು ಖಾತರಿಪಡಿಸುವ ಉದ್ದೇಶದಿಂದ ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆಯನ್ನು ಆಗಸ್ಟ್ ನಿಂದ ಪ್ರಾರಂಭಿಸಲಾಗುವುದು ಎಂದರು.
ಪ್ರಸ್ತುತ ಜಾರಿಯಲ್ಲಿರುವ ಜನವರಿ 01ರ ಅರ್ಹತಾ ದಿನಾಂಕದ ಜೊತೆಗೆ 01ನೇ ಏಪ್ರಿಲ್, 01ನೇ ಜುಲೈ ಮತ್ತು 01ನೇ ಅಕ್ಟೋಬರ್ ರಂದು ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ಮತದಾರರ ಪಟ್ಟಿಯನ್ನು ಪ್ರತಿ ತ್ರೈಮಾಸಿಕದಲ್ಲಿ ಕಾರ್ಯಗತಗೊಳಿಸಲಾಗುವುದು. ಇದರಿಂದ ಆ ತ್ರೈಮಾಸಿಕದಲ್ಲಿ 18 ವರ್ಷ ತುಂಬುವ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಜೊತೆಗೆ ಮತದಾರರ ಭಾವಚಿತ್ರದ ಗುರುತಿನ ಚೀಟಿಯನ್ನು ಸಹ ವಿತರಿಸಲಾಗುವುದು.
ಪ್ರಸಕ್ತ 2023ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಏಪ್ರಿಲ್, 01ನೇ ಜುಲೈ ಮತ್ತು 01ನೇ ಅಕ್ಟೋಬರ್ 2022 ಕ್ಕೆ 18 ವರ್ಷ ತುಂಬುವ ಯುವ ಮತದಾರರನ್ನು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ.