ಬೆಂಗಳೂರು: ರಾಜಧಾನಿ ಬೆಂಗಳೂರು ನಗರವನ್ನು ಹೊರತುಪಡಿಸಿ ಎರಡನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಶಕ್ತಿಶಾಲಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಟ್ಟಿದ್ದು, ಅದಕ್ಕೆ ಪೂರಕವಾದ ಹೊಸ ಐಟಿ ನೀತಿಯನ್ನು (2020-25) ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಗುರುವಾರ ಬೆಂಗಳೂರು ಟೆಕ್ ಸಮ್ಮಿಟ್ಗೆ ಪೂರ್ವಭಾವಿಯಾಗಿ ಐಟಿ ಕ್ಷೇತ್ರ ಅಭಿವೃದ್ಧಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ, 2020-2025ರ ನೂತನ ಐಟಿ ನೀತಿಯನ್ನು ಬಿಡುಗಡೆ ಮಾಡಿದರು.
ರಾಜ್ಯದ ವಿವಿಧ ನಗರಗಳಲ್ಲಿ ಐಟಿ ಕಂಪನಿಗಳ ಸ್ಥಾಪನೆ, ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು, ಮಾನವ ಸಂಪನ್ಮೂಲ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಹಲವಾರು ಅಂಶಗಳನ್ನು ಐಟಿ ನೀತಿ ಒಳಗೊಂಡಿದ್ದು, ಇದರಿಂದ ನಮ್ಮ ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಡಿಸಿಎಂ ಹೇಳಿದರು. ಈಗಾಗಲೇ ಎರಡನೇ ಹಂತದ ನಗರಗಳಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಪ್ರಯತ್ನಗಳು ನಡೆದಿವೆ. ಮುಖ್ಯವಾಗಿ ಇನ್ಫೋಸಿಸ್ ಕಂಪನಿ ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರು ನಗರಗಳಿಗೆ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸುವ ದೊಡ್ಡ ಪ್ರಯತ್ನ ಮಾಡಿತು. ಇದೇ ರೀತಿಯ ಪ್ರಯತ್ನಗಳು ಮುಂದಿನ ದಿನಗಳಲ್ಲಿ ರಚನಾತ್ಮಕ ವೇಗ ಪಡೆಯಲಿವೆ ಎಂದರು.
ಮೂಲ ಸೌಕರ್ಯಕ್ಕೆ ಒತ್ತು:
ಸದ್ಯಕ್ಕೆ 5ಜಿ ಹೊಸ್ತಿಲಲ್ಲಿ ಇದ್ದೇವೆ. ಆದರೆ 4ಜಿಯನ್ನೇ ರಾಜ್ಯದ ಮೂಲೆ ಮೂಲೆಗೂ ತಲುಪಿಸುವ ಪ್ರಯತ್ನ ಇನ್ನೂ ಆಗಬೇಕಿದೆ. ಕನೆಕ್ಟಿವಿಟಿ ಎನ್ನುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಟೆಲಿಕಾಂ ಸೇವೆಗಳ ಪರಧಿಯನ್ನು ವಿಸ್ತರಿಸಬೇಕು. ಈಗಷ್ಟೇ ರಾಷ್ಟ್ರೀಯ ಶಿಕ್ಷಣ ನೀತಿಯೂ ಜಾರಿಗೆ ಬರುತ್ತಿರುವುದರಿಂದ ನೆಟ್ವರ್ಕಿಂಗ್ ಅತ್ಯಗತ್ಯವಾಗಿದೆ ಎಂದು ಡಾ. ಅಶ್ವತ್ಥ ನಾರಾಯಣ ಹೇಳಿದರು.
ಈಗ ಬಿಯಾಂಡ್ ಬೆಂಗಳೂರು ಉಪಕ್ರಮದಿಂದ ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಮತ್ತು ಶಿವಮೊಗ್ಗ ನಗರಗಳತ್ತ ಟೆಲಿಕಾಂ, ಎಲೆಕ್ಟ್ರಾನಿಕ್ ಸಿಸ್ಟಮ್ ವಿನ್ಯಾಸ ಹಾಗೂ ಅಭಿವೃದ್ಧಿ (ಇಎಸ್ಡಿಎಂ) ಹಾಗೂ ಐಟಿ ಕಂಪನಿಗಳನ್ನು ಕಳಿಸಿ ಇಡೀ ರಾಜ್ಯದಲ್ಲಿ ಎಲ್ಲೆಡೆ ಇಂತಹ ಸಂಸ್ಥೆಗಳ ಅಸ್ತಿತ್ವ ಇರುವಂತೆ ನೋಡಿಕೊಳ್ಳಲು ಸರ್ಕಾರ ಬಲವಾಗಿ ಯತ್ನಿಸುತ್ತಿದೆ ಎಂದರು.
ವರ್ಕ್ ಫ್ರಮ್ ಎನಿವೇರ್:
ಕೋವಿಡ್ ಬಂದ ಮೇಲೆ ನಮ್ಮೆಲ್ಲರ ಸಾಂಪ್ರದಾಯಿಕ ಪರಿಕಲ್ಪನೆಗಳೆಲ್ಲ ಬದಲಾಗಿಬಿಟ್ಟಿವೆ. ಸೋಂಕು ಬರುವುದಕ್ಕೂ ಮೊದಲು ವರ್ಕ್ ಫ್ರಮ್ ಹೋಮ್ ಎನ್ನುವುದು ವಿರಳವಾಗಿ ಬಳಸುವ ಪದವಾಗಿತ್ತು. ಕೋವಿಡ್ ನಂತರ ಇದು ಸರ್ವೇಸಾಮಾನ್ಯ ಎನಿಸಿತು. ಈಗ ಇನ್ನೂ ಮುಂದೆ ಹೋಗಿ ವರ್ಕ್ ಫ್ರಮ್ ಎನಿವೇರ್ ಆಗಿದೆ. ಇದಕ್ಕೆ ಅತ್ಯುತ್ತಮ ನೆಟ್ವರ್ಕಿಂಗ್, ಕನೆಕ್ಟಿವಿಟಿ ಮಾಡಿದರೆ ಹೆಚ್ಚಿನ ಫಲಶ್ರುತಿಯನ್ನು ಕಾಣಬಹುದು ಎಂದು ಡಿಸಿಎಂ ಹೇಳಿದರು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರಗೆ ಅಂದರೆ ರಾಜ್ಯದ ಉದ್ದಗಲಕ್ಕೂ ಹೂಡಿಕೆಗೆ ಅತ್ಯುತ್ತಮ ಅವಕಾಶಗಳಿವೆ. ಒಂದೆಡೆ ಶೈಕ್ಷಣಿಕ ಕ್ಷೇತ್ರಕ್ಕೆ ಶಕ್ತಿ ತುಂಬುತ್ತಾ ಮತ್ತೊಂದೆಡೆ ಐಟಿ ಕ್ಷೇತ್ರವನ್ನು ವಿಸ್ತರಿಸುತ್ತಾ ಹೋದರೆ ಅತ್ಯುತ್ತಮ ಸಾಧನೆ ಮಾಡಬಹುದು. ಈಗಾಗಲೇ ಐಟಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವೂ ಮತ್ತಷ್ಟು ಮುಂದೆ ಸಾಗಲಿದೆ. ಈ ನಿಟ್ಟಿನಲ್ಲಿ ಜಾರಿಗೆ ಬರುತ್ತಿರುವ ನೂತನ ಐಟಿ ನೀತಿಯು ಈ ಕ್ಷೇತ್ರದ ವಿಕೇಂದ್ರೀಕರಣಕ್ಕೆ ಶಕ್ತಿ ತುಂಬುತ್ತದೆ ಎಂದರು.
ಕೋವಿಡ್ ಪಿಡುಗನ್ನು ಟೆಕ್ನಾಲಜಿಯಿಂದಲೇ ಪರಿಣಾಮಕಾರಿಯಾಗಿ ಎದುರಿಸಿದ್ದೇವೆ. ಹೀಗಾಗಿ ಮುಂದುವರಿದ ದಿನಗಳಲ್ಲಿ ಇಂತಹ ಕಂಪನಿಗಳೆಲ್ಲವೂ ಬೆಂಗಳೂರಿನಲ್ಲೇ ಬೀಡು ಬಿಡುವುದು ಸರಿಯಲ್ಲ. ವೈಜ್ಞಾನಿಕವಾಗಿ ಎಲ್ಲಾ ಕ್ಷೇತ್ರಗಳನ್ನು ಎರಡನೇ ಹಂತದ ನಗರಗಳಿಗೆ ವಿಕೇಂದ್ರೀಕರಿಸಬೇಕು ಎಂಬುದು ನೂತನ ಐಟಿ ನೀತಿಯ ಆಶಯ ಎಂದು ಅವರು ಹೇಳಿದರು.
ಹೊರಗೆ ಉತ್ತಮ ಅವಕಾಶಗಳಿವೆ: