ಕರ್ನಾಟಕ

karnataka

ETV Bharat / state

ನೆಲವಾಗಿಲು ಗ್ರಾಮ ಸ್ಥಳಾಂತರ : ಹೈಕೋರ್ಟ್​ಗೆ ವಸ್ತುಸ್ಥಿತಿ ವರದಿ ಸಲ್ಲಿಕೆ - ನೆಲವಾಗಿಲು ಗ್ರಾಮ ಸ್ಥಳಾಂತರದ ಬಗ್ಗೆ ಹೈಕೋರ್ಟ್​ಗೆ ವಸ್ತುಸ್ಥಿತಿ ವರದಿ ಸಲ್ಲಿಕೆ

ಹೈಕೋರ್ಟ್‌ನ ಹಿಂದಿನ ನಿರ್ದೇಶನದಂತೆ ನೆಲವಾಗಿಲು ಗ್ರಾಮದ ನಿವಾಸಿಗಳನ್ನು ಸ್ಥಳಾಂತರ ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಹೆಚ್ ಸಿ ಶಿವಕುಮಾರ್ ಪೀಠಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿದರು. ನೆಲವಾಗಿಲು ಗ್ರಾಮದ ನಿವಾಸಿಗಳನ್ನು ಸ್ಥಳಾಂತರಿಸಲು ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ 34.14 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ..

high-court
ಹೈಕೋರ್ಟ್

By

Published : Jan 31, 2022, 3:15 PM IST

ಬೆಂಗಳೂರು :ಹಾವೇರಿ ಜಿಲ್ಲೆಯ ನೆಲವಾಗಿಲು ಗ್ರಾಮವನ್ನು ಅದೇ ಜಿಲ್ಲೆಯ ಕೊಡಿಯಾಲ ಗ್ರಾಮಕ್ಕೆ ಸ್ಥಳಾಂತರಿಸುವ ಕಾರ್ಯಕ್ಕೆ ಫಲಾನುಭವಿಗಳೇ ಅಡ್ಡಿಪಡಿಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ನೆಲವಾಗಿಲು ಗ್ರಾಮದಲ್ಲಿ ನೀರು ಮತ್ತು ಗಾಳಿ ಮಾಲಿನ್ಯವಾಗಿರುವ ಹಿನ್ನೆಲೆ ಅಲ್ಲಿನ ಗ್ರಾಮಸ್ಥರನ್ನು ಕೊಡಿಯಾಲ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರಕ್ಕೆ ಆದೇಶಿಸಬೇಕು ಎಂದು ರೇಣುಕಾ ಹಾಗೂ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಹೈಕೋರ್ಟ್‌ನ ಹಿಂದಿನ ನಿರ್ದೇಶನದಂತೆ ನೆಲವಾಗಿಲು ಗ್ರಾಮದ ನಿವಾಸಿಗಳನ್ನು ಸ್ಥಳಾಂತರ ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಹೆಚ್ ಸಿ ಶಿವಕುಮಾರ್ ಪೀಠಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿದರು. ನೆಲವಾಗಿಲು ಗ್ರಾಮದ ನಿವಾಸಿಗಳನ್ನು ಸ್ಥಳಾಂತರಿಸಲು ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ 34.14 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಒಟ್ಟು 478 ನಿವೇಶನ ರಚಿಸಿದ್ದು, 452 ನಿವೇಶನ ಹಂಚಿಕೆ ಮಾಡಲಾಗಿದೆ. ಅದರಲ್ಲಿ 18 ಜನ ನಿವೇಶನ ತಿರಸ್ಕರಿಸಿದ್ದಾರೆ. ಉಳಿದ 434 ನಿವೇಶನಗಳಲ್ಲಿ 52 ಫಲಾನುಭವಿಗಳೇ ಮನೆ ನಿರ್ಮಿಸಿಕೊಂಡು ವಾಸವಾಗಿದ್ದಾರೆ. ಸದ್ಯ ನಾಲ್ಕು ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಅಲ್ಲದೆ, ಸರ್ಕಾರವು 56 ಮನೆಗಳ ನಿರ್ಮಾಣ ಮಾಡಿದ್ದು, ಅದರಲ್ಲಿ 19 ಫಲಾನುಭವಿಗಳು ಬೇರೊಬ್ಬರಿಗೆ ಮಾರಾಟ ಮಾಡಿದ್ದಾರೆ. ಉಳಿದಂತೆ 378 ಫಲಾನುಭವಿಗಳು ಸ್ಥಳಾಂತರಕ್ಕೆ ವಿವಿಧ ಷರತ್ತು ಹಾಗೂ ಬೇಡಿಕೆ ಇಟ್ಟಿದ್ದಾರೆ. ತಮ್ಮ ಬೇಡಿಕೆ ಈಡೇರಿಸುವವರೆಗೂ ಸ್ಥಳಾಂತರಕ್ಕೆ ಒಪ್ಪುವುದಿಲ್ಲ ಎಂದಿದ್ದಾರೆ. ಜತೆಗೆ, ಪ್ರತಿಭಟನೆ ನಡೆಸುತ್ತಾ ಮನೆಗಳ ನಿರ್ಮಾಣ ಕಾರ್ಯವನ್ನು ನಿಲ್ಲಿಸಿದ್ದಾರೆ. ಅನೇಕ ಬಾರಿ ಸಂಧಾನ ನಡೆಸಿದ್ದರೂ, ಫಲಾನುಭವಿಗಳು ಒಪ್ಪುತ್ತಿಲ್ಲ. ಇದರಿಂದ ಸ್ಥಳಾಂತರ ಕಾರ್ಯ ಸ್ಥಗಿತಗೊಂಡಿದೆ. ಸರ್ಕಾರವೂ ಮನೆಗಳ ನಿರ್ಮಾಣಕ್ಕೆ ಸಿದ್ಧವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ವರದಿಯನ್ನು ತೀವ್ರವಾಗಿ ಆಕ್ಷೇಪಿಸಿದ ಅರ್ಜಿದಾರ ಪರ ವಕೀಲ ಎನ್ ಪಿ ಅಮೃತೇಶ್, ಸರ್ಕಾರ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪೀಠ, ಸರ್ಕಾರದ ವಸ್ತುಸ್ಥಿತಿ ವರದಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಅರ್ಜಿದಾರರು ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮೂರು ವಾರ ಮುಂದೂಡಿದೆ.

ನೆಲವಾಗಿಲು ಗ್ರಾಮಸ್ಥರನ್ನು ಕೊಡಿಯಾಲ ಗ್ರಾಮಕ್ಕೆ ಸ್ಥಳಾಂತರಿಸುವ ಸಂಬಂಧ ರಾಜ್ಯ ಸರ್ಕಾರ 1993ರಲ್ಲಿ ಆದೇಶ ಹೊರಡಿಸಿತ್ತು. ಆದರೆ, ಈವರೆಗೆ ಯಾವುದೇ ಕ್ರಮವಾಗಿಲ್ಲ ಎಂದು ಚಾಟಿ ಬೀಸಿದ್ದ ಹೈಕೋರ್ಟ್, ಪ್ರಕರಣ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಈ ಹಿಂದೆ ನಿರ್ದೇಶಿಸಿತ್ತು.

ಓದಿ:ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details