ಬೆಂಗಳೂರು: ಐಟಿ ಸಂಸ್ಥೆ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ಈ ಬೆಳವಣಿಗೆ ದೇಶ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, ಒಂದು ವೇಳೆ ಕಾಂಗ್ರೆಸ್ನವರಲ್ಲಿ ಹಣ ಇದ್ದರೆ ದಾಳಿ ಮಾಡಬೇಡಿ ಎಂದು ಹೇಳುವುದಕ್ಕೆ ಆಗುವುದಿಲ್ಲ. ಸಂವಿಧಾನ ಹಾಗೂ ಕಾನೂನು ತನ್ನ ಅಸ್ತಿತ್ವ ಉಳಿಸಿಕೊಂಡು ಕ್ರಮ ಜರುಗಿಸಿದರೆ ದೇಶಕ್ಕೆ ಒಳ್ಳೆಯದು. ಆದರೆ ಅದು ಆಗುತ್ತಿಲ್ಲ ಎಂದು ಕಿಡಿಕಾರಿದರು. ಅಲ್ಲದೆ,ಈ ರೀತಿ ಸ್ವಾಯತ್ತ ಸಂಸ್ಥೆಗಳನ್ನು ಪಕ್ಷಗಳು ಬಳಸಿಕೊಳ್ಳುವ ರೀತಿಯಿಂದ ಅವುಗಳ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತವೆ ಎಂದರು.