ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಸದಸ್ಯ ಸ್ಥಾನಕ್ಕೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ.ಮರಿಸ್ವಾಮಿ ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ, ಹೈಕೋರ್ಟ್ಗೆ ಮೆಮೊ ಸಲ್ಲಿಸಿದೆ.
ಜಿ.ಮರಿಸ್ವಾಮಿ ನೇಮಕ ಪ್ರಶ್ನಿಸಿ ಚಿಕ್ಕಬಳ್ಳಾಪುರದ ಆಂಜನೇಯ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ಪೀಠ, ಅವರಿಗೆ ಸದಸ್ಯರಾಗಲು ಇರುವ ಅರ್ಹತೆ ಕುರಿತು ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಅಲ್ಲದೇ ನ್ಯಾಯಾಲಯದ ಆದೇಶ ಉಲ್ಲಂಘಿಸಿ ನೇಮಕ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಇದಕ್ಕೆ ವಿವರಣೆ ನೀಡುವಂತೆ ತಾಕೀತು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಕೆಎಸ್ಪಿಸಿಬಿ ಸದಸ್ಯ ಸ್ಥಾನಕ್ಕೆ ಮರಿಸ್ವಾಮಿ ಅವರನ್ನು ನಾಮನಿರ್ದೇಶನ ಮಾಡಿದ್ದ ಆದೇಶ ಹಿಂಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅಧೀನ ಕಾರ್ಯದರ್ಶಿ ಫೆ. 9ರಂದು ಅದೇಶ ಹೊರಡಿಸಿದ್ದಾರೆ. ಈ ಆದೇಶ ಪ್ರತಿಯನ್ನು ಮೊಮೊ ಜೊತೆಗೆ ಸರ್ಕಾರ, ಹೈಕೋರ್ಟ್ಗೆ ಸಲ್ಲಿಸಿದೆ. ಅರ್ಜಿ ವಿಚಾರಣೆ ಫೆ. 19ರಂದು ನಿಗದಿಯಾಗಿದೆ.
ಕೆಎಸ್ಪಿಸಿಬಿ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿ ಮತ್ತು ಸದಸ್ಯರನ್ನು ನೇಮಕ ಮಾಡಬೇಕಾದರೆ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 2020ರ ಅ. 8ರಂದು ನಿರ್ದೇಶಿಸಿತ್ತು. ಅದರಂತೆ ಮರಿಸ್ವಾಮಿ ನೇಮಿಸುವ ಮುನ್ನ ಹೈಕೋರ್ಟ್ ಅನುಮತಿ ಪಡೆಯಬೇಕಿತ್ತು. ಆದರೆ, ಸರ್ಕಾರ ಕೋರ್ಟ್ ಅನುಮತಿ ಪಡೆಯದೆ ಮರಿಸ್ವಾಮಿ ಅವರನ್ನು ಸದಸ್ಯರಾಗಿ ನಾಮನಿರ್ದೇಶನ ಮಾಡಿತ್ತು.
ಈ ಸಂಬಂಧ ಅರಣ್ಯ ಮತ್ತು ಪರಿಸರ ಇಲಾಖೆ ಅಧೀನ ಕಾರ್ಯದರ್ಶಿ 2020ರ ಡಿ. 30ರಂದು ಅಧಿಸೂಚನೆ ಹೊರಡಿಸಿದ್ದರು.