ಕರ್ನಾಟಕ

karnataka

ETV Bharat / state

9-10ನೇ ತರಗತಿ ಪುನಾರಂಭಿಸಲು ಮಾರ್ಗಸೂಚಿ ಪ್ರಕಟ; ನಿತ್ಯವೂ ಅರ್ಧ ದಿನ ಭೌತಿಕ ಕ್ಲಾಸ್

ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭಿಸುವ ಸಂಬಂಧ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ನಿತ್ಯವೂ ಅರ್ಧ ದಿನ-ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸಲು ಸೂಚಿಸಿದೆ.

By

Published : Aug 16, 2021, 6:43 PM IST

Guidelines for 9 and 10th classes
ಮಾರ್ಗಸೂಚಿ ಪ್ರಕಟ

ಬೆಂಗಳೂರು:ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಶಾಲೆಗಳನ್ನು ಪುನಾರಂಭಿಸಲು ಸರ್ಕಾರ ಮುಂದಾಗಿದೆ. ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭಿಸುವ ಸಂಬಂಧ ಸರ್ಕಾರ ಇಂದು ಮಾರ್ಗಸೂಚಿ ಹೊರಡಿಸಿದೆ.

ಈ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿನ ಕೋವಿಡ್ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿನ 9ನೇ ಮತ್ತು 10ನೇ ತರಗತಿಗಳನ್ನು ಆಗಸ್ಟ್ 23ರಿಂದ ಪ್ರತಿದಿನ ಅರ್ಧ ದಿನ-ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸಲು ಸೂಚಿಸಿದೆ.

ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯವಾಗಿದೆ. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19ರ ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲ ಎಂಬುದನ್ನು ದೃಢೀಕರಿಸಬೇಕು ಎಂದು ತಿಳಿಸಲಾಗಿದೆ.

ಭೌತಿಕವಾಗಿ ತರಗತಿಗಳನ್ನು ನಡೆಸಲು ಅವಶ್ಯಕ ದೈಹಿಕ ಅಂತರ ಕಾಪಾಡುವ ದೃಷ್ಟಿಯಿಂದ ಶಾಲಾ ಹಂತಗಳಲ್ಲಿ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಿಕ್ಷಕರ ಸಂಖ್ಯೆಯನ್ನು ಆಧರಿಸಿ 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳನ್ನು 15 ರಿಂದ 20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿಕೊಂಡು ಭೌತಿಕ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.

ಶಾಲೆ ನಡೆಯುವ ಅವಧಿ:

ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1:30ವರೆಗೆ ತರಗತಿ.

ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12:50ರವರೆಗೆ ಕ್ಲಾಸ್​.

ಮಾರ್ಗಸೂಚಿಯಲ್ಲಿ ಏನಿದೆ?:

  • 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ನೀರು, ಉಪಹಾರವನ್ನು ತರುವಂತೆ ಸೂಚನೆ ನೀಡಬೇಕು.
  • ಕುಡಿಯುವ ನೀರಿನ ಅವಶ್ಯಕತೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
  • ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್‌ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು.
  • ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್‌ಲೈನ್/ ಇತರೆ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಬೇಕು.
  • ಊಟದ ವಿರಾಮದ ನಂತರ ಅಪರಾಹ್ನ ಪ್ರೌಢ ಶಾಲೆಗಳ ಶಿಕ್ಷಕರು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರ್ಯಾಯ ವಿಧಾನದಲ್ಲಿ ಬೋಧನೆ ಮತ್ತು ಕಲಿಕೆ ಪ್ರಕ್ರಿಯೆಗಳನ್ನು ನಡೆಸಬೇಕು.
  • ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶಾಲಾ ಸುರಕ್ಷತೆ, ಮಕ್ಕಳ ಸುರಕ್ಷತೆಗಾಗಿ ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಉಪನಿರ್ದೇಶಕರು(ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಕ್ರಮವಹಿಸಲು ಸೂಚಿಸಿದೆ.

ABOUT THE AUTHOR

...view details