ಬೆಂಗಳೂರು:ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಪಕ್ಷವನ್ನು ಆಶೀರ್ವದಿಸಿದ ಜನತೆಗೆ ಮಾಜಿ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದ್ದಾರೆ. ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.