ಕರ್ನಾಟಕ

karnataka

ETV Bharat / state

ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ: ಪ್ರಕರಣದ 3ನೇ ಆರೋಪಿಗೆ ಜಾಮೀನು - ಈಟಿವಿ ಭಾರತ ಕನ್ನಡ

ಬಂಡೆ ಮಠ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎನ್ನಲಾದ ಪ್ರಕರಣದ ಮೂರನೇ ಆರೋಪಿ, ನಿವೃತ್ತ ಶಿಕ್ಷಕ ಮಹದೇವಯ್ಯಗೆ ಇಂದು ಹೈಕೋರ್ಟ್ ಜಾಮೀನು ನೀಡಿದೆ. ​

basavalinga swamiji
ಬಸವಲಿಂಗ ಸ್ವಾಮೀಜಿ

By

Published : Dec 27, 2022, 5:37 PM IST

Updated : Dec 27, 2022, 9:13 PM IST

ಬೆಂಗಳೂರು:ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೇಲೂರು ಹೋಬಳಿಯ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ನಿವೃತ್ತ ಶಿಕ್ಷಕ ಎಂ. ಮಹದೇವಯ್ಯ ಎಂಬುವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಮೂರನೇ ಆರೋಪಿಯಾದ ಮಹದೇವಯ್ಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ರಜಾಕಾಲದ ನ್ಯಾಯಪೀಠ ಈ ಆದೇಶ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಚಂದ್ರಮೌಳಿ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಮೃತ ಸ್ವಾಮೀಜಿ ಬರೆದ ಮರಣ ಪತ್ರದಲ್ಲಿ ಅರ್ಜಿದಾರರ ಹೆಸರು ಉಲ್ಲೇಖವಾಗಿಲ್ಲ. ಸ್ವಾಮೀಜಿ ಜೊತೆಗಿನ ಮಾತುಕತೆ ಕುರಿತ ದೃಶ್ಯಗಳನ್ನು ಒಳಗೊಂಡ ಪೆನ್‌ಡ್ರೈವ್ ಅನ್ನು ಎರಡನೇ ಆರೋಪಿಯಿಂದ ಪಡೆದು ನಾಲ್ಕನೇ ಆರೋಪಿಗೆ ನೀಡಿದ ಆರೋಪ ಮಹದೇವಯ್ಯ ಅವರ ಮೇಲಿದೆ ಅಂದ ಮಾತ್ರಕ್ಕೆ ಸ್ವಾಮೀಜಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧ ಕೃತ್ಯ ಎಸಗಿದಂತಾಗುವುದಿಲ್ಲ. ಆದ್ದರಿಂದ ಅರ್ಜಿದಾರರಿಗೆ ಜಾಮೀನು ನೀಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಜಾಮೀನು ನೀಡಿ ಆದೇಶಿಸಿದೆ.

ಷರತ್ತುಗಳು:ಒಂದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಪೂರ್ವಾನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂದು ಜಾಮೀನು ಮಂಜೂರಾತಿಗೆ ನ್ಯಾಯಾಲಯ ಷರತ್ತು ವಿಧಿಸಿದೆ.

ಪ್ರಕರಣದ ಹಿನ್ನೆಲೆ ಏನು? ಬಂಡೆಮಠದಬಸವಲಿಂಗ ಸ್ವಾಮೀಜಿ ತಮ್ಮ ಕೊಠಡಿಯಲ್ಲಿ 2022ರ ಅ.23ರಂದು ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದರು. ಮರು ದಿನ ಅ.24ರ ಬೆಳಗ್ಗೆ 7 ಗಂಟೆಗೆ ಘಟನೆ ಬೆಳಕಿಗೆ ಬಂದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಕುದೂರು ಠಾಣಾ ಪೊಲೀಸರು, ಮೃತ ಸ್ವಾಮೀಜಿಯ ಮರಣ ಪತ್ರ ಆಧರಿಸಿ ರೇಣುಕಾರಾಧ್ಯ (ಮೃತ್ಯುಂಜಯ ಸ್ವಾಮಿ), ಜೆ.ಚಂದ್ರು ಅಲಿಯಾಸ್ ನೀಲಾಂಬಿಕೆ, ನಿವೃತ್ತ ಶಿಕ್ಷ ಎಂ.ಮಹದೇವಯ್ಯ ಮತ್ತು ಸಹಾಯಕ ಪ್ರಾಧ್ಯಾಪಕ ಬಿ.ಸಿ. ಸುರೇಶ್ ಅವರನ್ನು ಬಂಧಿಸಿದ್ದರು.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಮತ್ತು ಅಪರಾಧಿಕ ಒಳಸಂಚು ರೂಪಿಸಿದ ಆರೋಪವನ್ನು ಬಂಧಿತರ ಮೇಲೆ ಹೊರಿಸಲಾಗಿತ್ತು. 2022ರ ಅ.30ರಿಂದ ನ್ಯಾಯಾಂಗ ಬಂಧನದಲ್ಲಿರುವ ಮಹದೇವಯ್ಯ, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಡಿ.9ರಂದು ರಾಮನಗರ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದರಿಂದ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ:ಯೆಜ್ಡಿ ಪದ, ಟ್ರೇಡ್ ಮಾರ್ಕ್​ ಬಳಸದಂತೆ ಕ್ಲಾಸಿಕ್ ಲೆಜೆಂಡ್ಸ್ ಪ್ರೈ.ಲಿ​.ಗೆ ಹೈಕೋರ್ಟ್​ ಸೂಚನೆ

Last Updated : Dec 27, 2022, 9:13 PM IST

ABOUT THE AUTHOR

...view details