ಕರ್ನಾಟಕ

karnataka

By

Published : Jan 27, 2022, 8:30 PM IST

ETV Bharat / state

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ ಪ್ರಕರಣ: ನ್ಯಾಯಾಧೀಶರಿಂದ ವಿವರಣೆ ಕೇಳಿದ ಹೈಕೋರ್ಟ್

ರಾಯಚೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್​​​ ಭಾವಚಿತ್ರವನ್ನು ಧ್ವಜಾರೋಹಣ ಸ್ಥಳದಿಂದ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​​ ವರದಿ ಕೇಳಿದೆ.

High Court asking explanation about insulting of Ambedkar photo
ರಾಯಚೂರಲ್ಲಿ ಅಂಬೇಡ್ಕರ್ ಭಾವಚಿತ್ರ ಎತ್ತಿಸಿದ ಪ್ರಕರಣದ ವಿವರಣೆ ಕೇಳಿದ ಹೈಕೋರ್ಟ್

ಬೆಂಗಳೂರು: ರಾಯಚೂರಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗಣರಾಜ್ಯೋತ್ಸವದ ದಿನ ಧ್ವಜಾರೋಹಣಕ್ಕೆ ಮುನ್ನ ಸ್ಥಳದಲ್ಲಿ ಇರಿಸಿದ್ದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ನ್ಯಾಯಾಧೀಶರು ಎತ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ವರದಿ ಕೇಳಿದೆ.

ಈ ಕುರಿತು ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಟಿ.ಜಿ. ಶಿವಶಂಕರೇಗೌಡ ಅವರು ಮಾಹಿತಿ ನೀಡಿದ್ದು, ಘಟನೆ ಸಂಬಂಧ ವಾಸ್ತವಿಕ ಸಂಗತಿಗಳನ್ನು ಅರಿಯಲು ವರದಿ ಕೇಳಲಾಗಿದೆ. ವರದಿ ಪರಿಶೀಲಿಸಿ ಹೈಕೋರ್ಟ್‌ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ನ್ಯಾಯಾಂಗ ಇಲಾಖೆಯ ಕಾರ್ಯಕ್ರಮದಲ್ಲಿ ಇಡುವುದಕ್ಕೆ ಸಂಬಂಧಿಸಿದಂತೆ ಪೂರ್ಣ ಪೀಠವು ಹಿಂದೆಯೇ ಗೊತ್ತುವಳಿ ಅಂಗೀಕರಿಸಿದೆ. ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ನ್ಯಾಯಾಂಗ ಇಲಾಖೆಯ ಕಾರ್ಯಕ್ರಮದಲ್ಲಿ ಇಡುವುದಕ್ಕೆ ಸಂಬಂಧಿಸಿದ ವಿಚಾರ ಪೂರ್ಣ ಪೀಠದ ಮುಂದೆ ಪರಿಗಣನೆಗೆ ಬಾಕಿ ಇದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಸರ್ಕಾರದ ಸುತ್ತೋಲೆಗಳನ್ನು ನ್ಯಾಯಾಂಗ ಅಳವಡಿಸಿಕೊಂಡ ಮೇಲೆ ಅದು ಇಲ್ಲಿಗೆ ಅನ್ವಯಿಸುತ್ತದೆ. ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಹೈಕೋರ್ಟ್‌ ಪೂರ್ಣಪೀಠವು ಈ ಪ್ರಕ್ರಿಯೆ ಕೈಗೊಳ್ಳುತ್ತದೆ. ಆ ಬಳಿಕ ಸಂಬಂಧಪಟ್ಟ ಎಲ್ಲರಿಗೂ ಸುತ್ತೋಲೆ ರವಾನಿಸಲಾಗುತ್ತದೆ ಎಂದು ರಿಜಿಸ್ಟ್ರಾರ್ ಜನರಲ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್​ಗೆ ಅಪಮಾನ ಆರೋಪ ಪ್ರಕರಣ: ರಾಯಚೂರು ಜಿಲ್ಲಾ ನ್ಯಾಯಾಧೀಶರ ಸ್ಪಷ್ಟನೆ ಹೀಗಿದೆ..

ಗಣರಾಜ್ಯೋತ್ಸವದ ದಿನ ಧ್ವಜಾರೋಹಣ ಸಮಾರಂಭದಲ್ಲಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಇರಿಸಲಾಗಿತ್ತು. ಆದರೆ ರಾಯಚೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್​​​ ಭಾವಚಿತ್ರವನ್ನು ಧ್ವಜಾರೋಹಣ ಸ್ಥಳದಿಂದ ತೆಗೆಸಿದರು ಎಂಬ ಆರೋಪ ಕೇಳಿಬಂದಿತ್ತು. ಆ ಮೂಲಕ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆದಿವೆ.

ನ್ಯಾಯಾಧೀಶರಿಂದ ಸ್ಪಷ್ಟನೆ: ಈ ಕುರಿತಂತೆ ವಿವಾದ ಭುಗಿಲೇಳುತ್ತಿದ್ದಂತೆ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಸ್ಪಷ್ಟನೆಯನ್ನು ಸಹ ಕೊಟ್ಟಿದ್ದರು. ಇದು ಕೇವಲ ವದಂತಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್​ ಬಗ್ಗೆ ನನಗೂ ಅಪಾರ ಗೌರವ ಇದೆ ಎಂದು ಸ್ಪಷ್ಟನೆ ನೀಡಿದ್ದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details