ಕರ್ನಾಟಕ

karnataka

By

Published : Jun 23, 2021, 7:32 PM IST

Updated : Jun 23, 2021, 8:01 PM IST

ETV Bharat / state

ಹಾರಂಗಿ ಜಲಾಶಯದ ಹೂಳು ತೆಗೆಯುವ ಟೆಂಡರ್ ದಾಖಲೆ ಕೇಳಿದ ಹೈಕೋರ್ಟ್

ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳನ್ನು ಹೊರ ತೆಗೆಯಲು 130 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಟೆಂಡರ್ ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

high court
ಹೈಕೋರ್ಟ್

ಬೆಂಗಳೂರು: ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳನ್ನು ಹೊರ ತೆಗೆಯಲು 130 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಟೆಂಡರ್ ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಹಾರಂಗಿ ಜಲಾಶಯದ ವೈಜ್ಞಾನಿಕ ನಿರ್ವಹಣೆ ಕೋರಿ ಕೊಡಗಿನ ನಂದ ಬೆಳ್ಳಿಯಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಕಾವೇರಿ ನೀರಾವರಿ ನಿಗಮದ ಪರ ವಕೀಲರು ವಾದ ಮಂಡಿಸಿ, ಕಳೆದ ಜನವರಿಯಲ್ಲಿ ಜಲಾಶಯದ ಹೂಳೆತ್ತುವ ಕಾಮಗಾರಿಗೆ ಟೆಂಡರ್ ಕರೆಯಲಾಗಿತ್ತು, ಆದರೆ ತಾಂತ್ರಿಕವಾಗಿ ಯಾರೂ ಅರ್ಹರು ಸಿಗದ ಕಾರಣ, ಅದನ್ನು ರದ್ದುಪಡಿಸಿ ಹೊಸದಾಗಿ ಟೆಂಡರ್ ಕರೆಯಲಾಗಿದೆ ಎಂದರು. ಅಲ್ಲದೇ, ಹೊಸ ಟೆಂಡರ್ ಅನ್ನು ಜೂ.14ರಂದು ಕರೆಯಲಾಗಿದ್ದು, ಟೆಂಡರ್ ಸಲ್ಲಿಕೆಗೆ ಜೂನ್ 29ಕ್ಕೆ ಕೊನೆಯ ದಿನಾಂಕವಾಗಿದೆ. ಆನಂತರ ಟೆಂಡರ್ ಅಂತಿಮಗೊಳಿಸಿ ಆದಷ್ಟು ಶೀಘ್ರ ಕಾಮಗಾರಿ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಕೊಡಗು ಸುತ್ತ-ಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಈಗ ಹೂಳೆತ್ತುವ ಕಾರ್ಯ ಕೈಗೊಳ್ಳುವುದು ಸರಿಯಲ್ಲ ಮತ್ತು ಆ ಕಾರ್ಯ ನಿರ್ವಹಿಸಲಾಗದು ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಮತ್ತೊಮ್ಮೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ

ವಾದ ಪ್ರತಿವಾದ ದಾಖಲಿಸಿಕೊಂಡ ಪೀಠ ಜಲಾಶಯದಲ್ಲಿನ ಹೂಳೆತ್ತುವ ಸಂಬಂಧ ಕರೆಯಲಾಗಿರುವ ಟೆಂಡರ್ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿತು.

Last Updated : Jun 23, 2021, 8:01 PM IST

ABOUT THE AUTHOR

...view details