ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿಯು ಸಂತ್ರಸ್ತೆಯನ್ನೇ ವಿವಾಹ ಆಗಿರುವುದನ್ನು ಪರಿಗಣಿಸಿದ ಹೈಕೋರ್ಟ್, ಆರೋಪಿ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಿದೆ. ಅತ್ಯಾಚಾರ ಎಸಗಿದ್ದ ಸಂತ್ರಸ್ತೆಯನ್ನು ವಿವಾಹವಾದ ಬಳಿಕವೂ ತನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ ಪೊಲೀಸರ ಕ್ರಮ ಆಕ್ಷೇಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ರದ್ಧತಿಗೆ ಕೋರಿದ್ದ. ವಿಚಾರಣೆಗೆ ಸಂತ್ರಸ್ತೆ ಹಾಜರಾಗಿ ದೂರು ಹಿಂಪಡೆಯುವುದಾಗಿ ತಿಳಿಸಿದರೆ, ಸಂತ್ರಸ್ತೆಯನ್ನು ವಿವಾಹವಾಗುತ್ತೇನೆ. ಜೀವನಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಭರವಸೆಯನ್ನು ನೀಡಿದ್ದ. ಜೊತೆಗೆ, ಈ ಸಂಬಂಧ ಆರೋಪಿಯು ಪ್ರಮಾಣಪತ್ರ ಸಲ್ಲಿಸಿದ್ದ.
ಇದೆಲ್ಲವನ್ನು ಪರಿಗಣಿಸಿದ ಹೈಕೋರ್ಟ್, ಆರೋಪಿ ವಿರುದ್ಧದ ಅತ್ಯಾಚಾರ, ಹಣ ವಸೂಲಿ ಮತ್ತು ಜೀವ ಬೆದರಿಕೆ ಪ್ರಕರಣವನ್ನು ರದ್ದುಪಡಿಸಿದೆ. ಹಾಗೆಯೇ, ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಯಾವುದೇ ರೀತಿ ತೊಂದರೆ ನೀಡಬಾರದು ಎಂದು ಆರೋಪಿಗೆ ಸೂಚಿಸಿ, ಪ್ರಕರಣವನ್ನು ಮುಕ್ತಾಯಗೊಳಿಸಿದೆ. ನಗರದ ಯುವತಿಯೊಬ್ಬರು 2022ರ ಅಕ್ಟೋಬರ್ನಲ್ಲಿ ಪೊಲೀಸರಿಗೆ ದೂರು ನೀಡಿ, ತನ್ನ ಸ್ನೇಹಿತ ಹುಟ್ಟುಹಬ್ಬದ ಆಚರಣೆ ನಿಮಿತ್ತ ಮನೆಗೆ ಆಹ್ವಾನಿಸಿದ್ದ. ಆಗ ಕುಡಿದು ಬಂದಿದ್ದ ಆರೋಪಿ, ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಿದ್ದರು. ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಮತ್ತು ಹಣ ವಸೂಲಿ ಸೇರಿದಂತೆ ಇನ್ನಿತರ ಆರೋಪಗಳಡಿ ಎಫ್ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಅತ್ಯಾಚಾರ ಆರೋಪಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರನ ಪರ ವಕೀಲ ಸಿ.ಎನ್. ರಾಜು ವಾದ ಮಂಡಿಸಿ, ಸಂತ್ರಸ್ತೆ ಮತ್ತು ಅರ್ಜಿದಾರರು ಪರಸ್ಪರ ಪ್ರೀತಿಸುತ್ತಿದ್ದರು. ಭಿನ್ನಾಭಿಪ್ರಾಯದಿಂದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆಕೆಗೆ 32 ವರ್ಷವಾಗಿದ್ದು, ದೂರು ದಾಖಲಿಸಿದ ನಂತರ ಪೊಲೀಸರ ಮುಂದೆ ಹಾಜರಾಗಿ ದೂರು ಹಿಂಪಡೆಯಲಾಗುವುದು ಎಂದು ತಿಳಿಸಿದ್ದರು. ಅದಕ್ಕೆ ಪೊಲೀಸರು ಒಪ್ಪಿರಲಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ಆ ನಂತರ ಸಂತ್ರಸ್ತೆ ಮತ್ತು ಆರೋಪಿ ಮದುವೆಯಾಗಿದ್ದು, ಪೊಲೀಸ್ ಠಾಣೆಗೆ ತೆರಳಿ ದೂರು ಹಿಂಪಡೆಯುವಾಗಿ ತಿಳಿಸಿದ್ದರು. ಹೀಗಿದ್ದರೂ ಪೊಲೀಸರು ಮಾತ್ರ ದೂರುದಾರಳ ಹೇಳಿಕೆ ದಾಖಲಿಸದೆ, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಸದ್ಯ ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮದುವೆಯಾಗಿ ನೆಮ್ಮದಿಯಿಂದ ಸಂಸಾರ ನಡೆಸುತ್ತಿದ್ದಾರೆ. ಪ್ರಕರಣ ಹಿಂಪಡೆಯಲು ಇಬ್ಬರೂ ಜಂಟಿ ಪ್ರಮಾಣ ಪತ್ರ ಸಲ್ಲಿಸಿದ್ದು, ಅದನ್ನು ಪುರಸ್ಕರಿಸಿ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿ ನ್ಯಾಯಪೀಠವು ಪ್ರಕರಣ ಮುಕ್ತಾಯಗೊಳಿಸಿದೆ.