ಕರ್ನಾಟಕ

karnataka

By

Published : Jan 25, 2021, 9:36 PM IST

ETV Bharat / state

ಆರೋಗ್ಯ ಸೇತು ಆ್ಯಪ್​ನಲ್ಲಿ ಬಳಕೆದಾರರ ಮಾಹಿತಿ ಹಂಚಿಕೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಕೇಂದ್ರ ಸರ್ಕಾರ ಮತ್ತು ಎನ್ಐಸಿ ನ್ಯಾಯಾಲಯಕ್ಕೆ ಸಮಾಧಾನಕರ ಪ್ರಮಾಣ ಪತ್ರ ಸಲ್ಲಿಸಿ ತೆರವುಗೊಳಿಸಲು ಮನವಿ ಮಾಡಬಹುದು ಎಂದು ಸ್ಪಷ್ಟಪಡಿಸಿ, ವಿಚಾರಣೆ ಮುಂದೂಡಿತು. ಇದೇ ವೇಳೆ ಆ್ಯಪ್ ಅವಳಡಿಸಿಕೊಂಡಿಲ್ಲ ಅಥವಾ ಬಳಕೆ ಮಾಡಿಲ್ಲ ಎಂಬ ಕಾರಣಕ್ಕೆ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿತು..

Representative Image
ಸಾಂಧರ್ಬಿಕ ಚಿತ್ರ

ಬೆಂಗಳೂರು :ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆದಾರರ ಖಾಸಗಿ ಮಾಹಿತಿಯನ್ನು ಸರ್ಕಾರಿ ಇಲಾಖೆಗಳು ಹಾಗೂ ಸಂಸ್ಥೆಗಳೊಂದಿಗೆ ಹಂಚಿಕೊಳ್ಳದಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಮಾಹಿತಿ ಕೇಂದ್ರಕ್ಕೆ(ಎನ್ಐಸಿ) ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಕೇಂದ್ರ ಸರ್ಕಾರ ಆರೋಗ್ಯ ಸೇತು ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಿದೆ ಎಂದು ಆಕ್ಷೇಪಿಸಿ ನಗರದ ಅನಿವರ್ ಅರವಿಂದ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಮೇಲ್ನೋಟಕ್ಕೆ ಸರ್ಕಾರ ಆರೋಗ್ಯ ಸೇತು ಆ್ಯಪ್ ಬಳಕೆದಾರರ ಮಾಹಿತಿಗಳನ್ನು ಹಂಚಿಕೊಳ್ಳಲು ಅವರಿಂದ ಯಾವುದೇ ಒಪ್ಪಿಗೆ ಪಡೆದುಕೊಂಡಂತೆ ಕಾಣುವುದಿಲ್ಲ.

ಹೀಗಾಗಿ ಗೌಪ್ಯತಾ ನೀತಿಯಂತೆ ಆ್ಯಪ್‌ನಿಂದ ಮಾಹಿತಿಯನ್ನು ಸಂಗ್ರಹಿಸಬಹುದಾಗಿದ್ದರೂ ಇಲಾಖೆಗಳ ನಡುವೆ ಹಂಚಿಕೊಳ್ಳುವಂತಿಲ್ಲ ಎಂದು ಅಭಿಪ್ರಾಯಪಟ್ಟು, ಆರೋಗ್ಯ ಸೇತು ಆ್ಯಪ್ ಬಳಕೆದಾರರ ಮಾಹಿತಿಯನ್ನು ಯಾವುದೇ ಸರ್ಕಾರಿ ಇಲಾಖೆ ಹಾಗೂ ಸಂಸ್ಥೆಯೊಂದಿಗೆ ಹಂಚಿಕೊಳ್ಳಬಾರದು ಎಂದು ಮಧ್ಯಂತರ ಆದೇಶ ಮಾಡಿತು.

ಅಲ್ಲದೇ, ಮಧ್ಯಂತರ ಆದೇಶವು ಮಾಹಿತಿ ಹಂಚಿಕೊಳ್ಳುವುದಕ್ಕಷ್ಟೇ ಸೀಮಿತವಾಗಿದ್ದು, ಕೇಂದ್ರ ಸರ್ಕಾರ ಮತ್ತು ಎನ್ಐಸಿ ನ್ಯಾಯಾಲಯಕ್ಕೆ ಸಮಾಧಾನಕರ ಪ್ರಮಾಣ ಪತ್ರ ಸಲ್ಲಿಸಿ ತೆರವುಗೊಳಿಸಲು ಮನವಿ ಮಾಡಬಹುದು ಎಂದು ಸ್ಪಷ್ಟಪಡಿಸಿ, ವಿಚಾರಣೆ ಮುಂದೂಡಿತು. ಇದೇ ವೇಳೆ ಆ್ಯಪ್ ಅವಳಡಿಸಿಕೊಂಡಿಲ್ಲ ಅಥವಾ ಬಳಕೆ ಮಾಡಿಲ್ಲ ಎಂಬ ಕಾರಣಕ್ಕೆ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿತು.

ಪ್ರಕರಣದ ಹಿನ್ನೆಲೆ :ಕೊರೊನಾ ಸೋಂಕು ನಿಯಂತ್ರಿಸಲು ಆರೋಗ್ಯ ಸೇತು ಮೊಬೈಲ್ ಆ್ಯಪ್ ರೂಪಿಸಲಾಗಿದ್ದು, ಇದನ್ನು ಎಲ್ಲರೂ ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ. ಆದರೆ, ಭಾರತದಲ್ಲಿ ಶೇ.35ರಷ್ಟು ವಯಸ್ಕ ಜನ ಮಾತ್ರ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾರೆ.

ಹೀಗಾಗಿ, ಆ್ಯಪ್‌ನ ಎಲ್ಲರೂ ಬಳಸಲು ಸಾಧ್ಯವಿಲ್ಲ. ಮುಖ್ಯವಾಗಿ ಕೇಂದ್ರ ಸರ್ಕಾರದ ಈ ನಿರ್ಧಾರ ವ್ಯಕ್ತಿಯ ಖಾಸಗಿತನದ ಹಕ್ಕಿಗೆ ವಿರುದ್ಧವಾಗಿದೆ. ಹಾಗೆಯೇ, ಆರೋಗ್ಯ ಸೇತು ಆ್ಯಪ್ ಮೂಲಕ ಬಳಕೆದಾರರ ಮಾಹಿತಿ ಸಂಗ್ರಹಿಸುವುದು ಅಸಾಂವಿಧಾನಿಕ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ABOUT THE AUTHOR

...view details