ಕರ್ನಾಟಕ

karnataka

By

Published : Feb 25, 2022, 3:53 PM IST

ETV Bharat / state

ಅಗ್ರಿ ಗೋಲ್ಡ್ ವಂಚನೆ: ರಾಮನಗರ ಉಪವಿಭಾಗಾಧಿಕಾರಿ ಹಾಜರಿಗೆ ಹೈಕೋರ್ಟ್ ಆದೇಶ

ಮಂಗಳೂರಿನ ಅಗ್ರಿಗೋಲ್ಡ್ ಗ್ರಾಹಕರು ಮತ್ತು ಏಜೆಂಟರ್​​​ ಕಲ್ಯಾಣ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ, ​​ರಾಮನಗರ ಉಪವಿಭಾಗಾಧಿಕಾರಿ ಮುಂದಿನ ವಿಚಾರಣೆ ಹಾಜರಾಗಬೇಕು ಎಂದು ತಿಳಿಸಿದೆ.

High Court order to attend Ramnagar sub division officer in agri gold fraud case
ರಾಮನಗರ ಉಪವಿಭಾಗಾಧಿಕಾರಿ ಹಾಜರಿಗೆ ಹೈಕೋರ್ಟ್ ಆದೇಶ

ಬೆಂಗಳೂರು:ಅಗ್ರಿಗೋಲ್ಡ್ ಸಂಸ್ಥೆ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಬಂಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿರುವ ರಾಮನಗರ ಉಪವಿಭಾಗಾಧಿಕಾರಿ ಮುಂದಿನ ವಿಚಾರಣೆ ಹಾಜರಾಗಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಮಂಗಳೂರಿನ ಅಗ್ರಿಗೋಲ್ಡ್ ಗ್ರಾಹಕರು ಮತ್ತು ಏಜೆಂಟರ್​​​ ಕಲ್ಯಾಣ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ವಿಚಾರಣೆ ನಡೆಸಿತು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಸಚಿನ್ ವಾದ ಮಂಡಿಸಿ, ಇದೊಂದು ಬಹುರಾಜ್ಯ ಹಗರಣವಾಗಿದ್ದು, ಎಲ್ಲ ಪ್ರಕರಣಗಳ ವಿಚಾರಣೆಗೆ ಒಂದೇ ನ್ಯಾಯಾಲಯ ಸ್ಥಾಪಿಸಲು ನಿರ್ದೇಶಿಸುವಂತೆ ಕೋರಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿತ್ತು. ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ ಎಂದರು.

ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಈ ಹಿಂದೆ ರಾಮನಗರ ಉಪವಿಭಾಗಾಧಿಕಾರಿ ಕಚೇರಿ ಮಾಹಿತಿಯಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಲಾಗಿತ್ತು. ಆದರೆ, ಈ ಕುರಿತಂತೆ ಪರಿಶೀಲಿಸಿದಾಗ ಸುಪ್ರೀಂಕೋರ್ಟ್​ಗೆ ಯಾವುದೇ ಅರ್ಜಿ ಸಲ್ಲಿಸಿರುವುದು ತಿಳಿದು ಬಂದಿಲ್ಲ ಎಂದರು.

ಇದಕ್ಕೆ ಬೇಸರ ವ್ಯಕ್ತಪಡಿಸಿದ ಪೀಠ, ಅಧಿಕಾರಿಯ ತಪ್ಪು ಮಾಹಿತಿಯಿಂದಾಗಿ ಪ್ರಕರಣವನ್ನು ನಾಲ್ಕು ಬಾರಿ ಮುಂದೂಡಲಾಗಿದೆ. ಇದರಿಂದಾಗಿ ಅರ್ಜಿ ವಿಚಾರಣೆಯೂ 6 ತಿಂಗಳು ವಿಳಂಬವಾಗಿದೆ. ಆದ್ದರಿಂದ ತಪ್ಪು ಮಾಹಿತಿ ನೀಡಿದ ರಾಮನಗರ ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಮಾರ್ಚ್.10ಕ್ಕೆ ಮುಂದೂಡಿತು.

ಕಳೆದ ವರ್ಷ ಜುಲೈ 6ರಂದು ನಡೆದಿದ್ದ ಅರ್ಜಿ ವಿಚಾರಣೆ ವೇಳೆ ಸಕ್ಷಮ ಪ್ರಾಧಿಕಾರದ ಅಧಿಕಾರಿ, ಅಗ್ರಿಗೋಲ್ಡ್ ಕಂಪನಿಯ ಅವ್ಯವಹಾರ ಕರ್ನಾಟಕವೂ ಸೇರಿದಂತೆ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿಯೂ ಕಂಡು ಬಂದಿದೆ. ಅಲ್ಲಿಯೂ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಕಂಪನಿಗೆ ಸೇರಿದ ಒಟ್ಟು 290 ಆಸ್ತಿಗಳನ್ನು ತೆಲಂಗಾಣ ಸರ್ಕಾರ ಜಪ್ತಿ ಮಾಡಿರುವುದಾಗಿ ತಿಳಿದು ಬಂದಿದೆ.

ಕಂಪನಿಯಲ್ಲಿ ಅಂದಾಜು 32 ಲಕ್ಷ ಹೂಡಿಕೆದಾರರಿದ್ದು, ರಾಜ್ಯದ 8.8 ಲಕ್ಷ ಹೂಡಿಕೆದಾರರು ವಿವಿಧ ಶಾಖೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಆದ್ದರಿಂದ ಈ ಎಲ್ಲ ಪ್ರಕರಣಗಳ ವಿಚಾರಣೆಗೆ ಒಂದು ನೋಡಲ್ ರಾಜ್ಯ ಎಂಬಂತೆ ಪರಿಗಣಿಸಿ ಒಂದೇ ನ್ಯಾಯಾಲಯ ಸ್ಥಾಪನೆಗೆ ಕೋರಿ ಸುಪ್ರೀಂಕೊರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದರು. ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರಿಂದ ಮತ್ತು ಅದನ್ನೇ ಪುನರುಚ್ಚಾರ ಮಾಡಿದ್ದರಿಂದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಹಲವು ಬಾರಿ ಮುಂದೂಡಿತ್ತು.

ಇದನ್ನೂ ಓದಿ: ಉಕ್ರೇನ್​ನಲ್ಲಿ ಸಿಲುಕಿದ ಆನೇಕಲ್​ ವಿದ್ಯಾರ್ಥಿ: ಪೋಷಕರಿಗೆ ಧೈರ್ಯ ತುಂಬಿದ ಶಾಸಕ ಬಿ ಶಿವಣ್ಣ

For All Latest Updates

TAGGED:

ABOUT THE AUTHOR

...view details