ಕರ್ನಾಟಕ

karnataka

By

Published : Oct 1, 2022, 9:40 PM IST

ETV Bharat / state

ಮದ್ಯಪಾನ ಮಾಡಿ ವಾಹನ ಚಲಾವಣೆ: ನ್ಯಾಯಾಲಯದಲ್ಲಿ ಮಾತ್ರ ದಂಡ ಪಾವತಿ.. ಹೈಕೋರ್ಟ್​ ಸೂಚನೆ

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಸಂಬಂಧ ನ್ಯಾಯಾಲಯದಲ್ಲಿ ಮಾತ್ರ ದಂಡ ಪಾವತಿಸಬೇಕು, ಈ ಬಗ್ಗೆ ಪೊಲೀಸ್ ಸಿಬ್ಬಂದಿ ಒತ್ತಾಯಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.

high-court-quashed-the-case-without-evidence
ಪೊಲೀಸರು ದಾಖಲಿಸಿದ್ದ ಸಾಕ್ಷ್ಯರಹಿತ ಆರೋಪ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು:ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದನ್ನು ಪ್ರಶ್ನಿಸಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬುದಾಗಿ ಸಾಕ್ಷ್ಯರಹಿತ ಆರೋಪದಲ್ಲಿ ಬಿಹಾರ ಮೂಲದ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಬಿಹಾರ ರಾಜ್ಯದ ಪಾಟ್ನಾ ಮೂಲದ ಪ್ರಿಯಾಂಶು ಕುಮಾರ್ ಮತ್ತು ಅಲೋಕ್ ಕುಮಾರ್ ಎಂಬುವರು ಸಲ್ಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ, ತನಿಖಾಧಿಕಾರಿಗಳು ಅರ್ಜಿದಾರರ ಆರೋಪ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಹೀಗಾಗಿ ಆರೋಪ ಸತ್ಯ ಎಂದು ತಿಳಿಯಲು ಸಾಧ್ಯವಿಲ್ಲ ಎಂಬುದಾಗಿ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪಗಳಲ್ಲಿ ನ್ಯಾಯಾಲಯದಲ್ಲಿ ಮಾತ್ರ ದಂಡ ಪಾವತಿಸಬೇಕು ಎಂಬುದಾಗಿ ಸಂಚಾರಿ ಪೊಲೀಸ್ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಉಲ್ಲಂಘಿಸಿ ತನಿಖಾಧಿಕಾರಿಗಳು ಅರ್ಜಿದಾರರಿಂದ ದಂಡ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಇದು ನಿಯಮ ಬಾಹಿರ ಎಂದು ಕೋರ್ಟ್ ಹೇಳಿದೆ.

ಜೊತೆಗೆ, ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರನ್ನು ಪರಿಶೀಲನೆಗೊಳಪಡಿಸುವ ಸಂದರ್ಭದಲ್ಲಿ ಸಂಪೂರ್ಣ ಘಟನೆ ಚಿತ್ರೀಕರಣ ಮಾಡಬೇಕು. ಈ ಪ್ರಕರಣದಲ್ಲಿ ವಿಡಿಯೋ ಚಿತ್ರೀಕರಣ ಮಾಡಿಲ್ಲ. ಅಲ್ಲದೇ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬುದಾಗಿ ತನಿಖಾಧಿಕಾರಿಗಳು ಹೇಳಿದ್ದರೂ, ಅದಕ್ಕೆ ಯಾವುದೇ ಸಾಕ್ಷಿಗಳನ್ನು ಒದಗಿಸಿಲ್ಲ ಎಂದಿದೆ.

ಅಲ್ಲದೆ, ಸಾರ್ವಜನಿಕರ ನೆರವಿನಿಂದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಹೇಳಿದ್ದಾರೆ. ಆದರೆ, ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷಿದಾರರ ಹೇಳಿಕೆ ದಾಖಲಿಸಿಲ್ಲ, ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ. ಸಾಕ್ಯಾಧಾರಗಳು ಇಲ್ಲದಿದ್ದಾಗ ಆರೋಪಗಳನ್ನು ಹೊರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟು ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ ಏನು?: 2017ರ ಏಪ್ರಿಲ್ 9ರಂದು ರಾತ್ರಿ ಕಾರ್ಯನಿರ್ವಹಿಸುತ್ತಿದ್ದ ಹೆಚ್‌ಎಎಲ್ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗೆ, ದೊಡ್ಡನೆಕ್ಕುಂದಿ ಎಂಬಲ್ಲಿ ಕೆಲವು ಕಿಡಿಗೇಡಿಗಳು ಕಾರೊಂದನ್ನು ಜಖಂಗೊಳಿಸಿರುವುದಾಗಿ ಕರೆ ಬಂದಿತ್ತು. ತಕ್ಷಣ ಹೋಯ್ಸಳ ವಾಹನದಲ್ಲಿ ಸ್ಥಳಕ್ಕೆ ತೆರಳಿದ್ದ ಪೊಲೀಸರು, ದ್ವಿಚಕ್ರವಾಹನದಲ್ಲಿ ಸಂಶಯಾಸ್ಪದವಾಗಿ ತೆರಳುತ್ತಿದ್ದ ಅರ್ಜಿದಾರ ಆಲೋಕ್ ಕುಮಾರ್‌ನನ್ನು ಪ್ರಶ್ನಿಸಿದ್ದರು.

ಈ ವೇಳೆ ಮದ್ಯಪಾನ ಮಾಡಿದ್ದ ಆಲೋಕ್ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಹೋಗಲು ಮುಂದಾಗಿದ್ದರು. ಜೊತೆಗೆ, ಕರೆ ಮಾಡಿ ತಮ್ಮ ಸ್ನೇಹಿತ ಪ್ರಿಯಾಂಶುಗೆ ಸ್ಥಳಕ್ಕೆ ಆಗಮಿಸಲು ಮನವಿ ಮಾಡಿದ್ದರು. ಈ ಸಂದರ್ಭದಲ್ಲಿ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆಯಲು ಮುಂದಾದಾಗ ಪ್ರಿಯಾಂಶು ಕುಮಾರ್ ಪೊಲೀಸರ ಕಪಾಳಕ್ಕೆ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಈ ಸಂದರ್ಭದಲ್ಲಿ ಸಾರ್ವಜನಿಕರ ನೆರವಿನಿಂದ ಆರೋಪಿಗಳನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ಸೀಜ್ ಮಾಡಲಾಗಿತ್ತು ಎಂಬುದಾಗಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಜೊತೆಗೆ, ಈ ಸಂಬಂಧ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದನ್ನೂ ಓದಿ:ಬಿಗ್​ಬಾಸ್​ ಶೋನಲ್ಲಿ ಅಶ್ಲೀಲತೆ ಪ್ರದರ್ಶನ.. ಕಾರ್ಯಕ್ರಮದ ವಿರುದ್ಧ ಆಂಧ್ರ ಹೈಕೋರ್ಟ್ ಗರಂ

ABOUT THE AUTHOR

...view details