ಕರ್ನಾಟಕ

karnataka

ETV Bharat / state

ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದು ಕೋರಿ ಪಿಐಎಲ್ : ಮನವಿ ತಿರಸ್ಕರಿಸಿದ ಹೈಕೋರ್ಟ್​ - PIL appeal

ಈ ಸಂಕಷ್ಟದ ನಡುವೆ 25ರಿಂದ ಆರಂಭಗೊಳ್ಳಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ರದ್ದು ಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

High Court rejected PIL appeal
ಸಂಗ್ರಹ ಚಿತ್ರ

By

Published : May 27, 2020, 9:26 PM IST

ಬೆಂಗಳೂರು:ಕೊರೊನ ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ವೇಳೆ ಪರೀಕ್ಷೆಯನ್ನು ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್, ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಸೂಚಿಸಿದೆ.

ರಾಜ್ಯದಲ್ಲಿ ಕೊರೊನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ವಕೀಲ ಲೋಕೇಶ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎಎಸ್ ಓಕಾ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.‌ ಕೆಲಕಾಲ ಅರ್ಜಿದಾರರ ಪರ ವಕೀಲರು ಮತ್ತು ಸರ್ಕಾರದ ಪರ ವಕೀಲರ ವಾದ ಆಲಿಸಿದ ಪೀಠ, ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಲಿಖಿತ ಮಾಹಿತಿ ನೀಡಿ, ಜೂ. 25ರಿಂದ ಆರಂಭವಾಗಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ನಡೆಸುವ ವೇಳೆ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್, ಸ್ಯಾನಿಟೈಸರ್, ಆರೋಗ್ಯ ತಪಾಸಣೆ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಹೈಕೋರ್ಟ್​ (ಸಂಗ್ರಹ ಚಿತ್ರ)

ಸಾಮಾಜಿಕ ಅಂತರವನ್ನು ಕಾಯ್ದುಕೊಂಡೇ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ರಾಜ್ಯದಿಂದ ಹೊರ ಹೋಗಿರುವ ನೆರೆರಾಜ್ಯಗಳ ಮತ್ತು ಕಂಟೇನ್ಮೆಂಟ್ ಪ್ರದೇಶದ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿದೆ. ಒಂದು, ವೇಳೆ ಇವರು ಪರೀಕ್ಷೆಗೆ ಹಾಜರಾಗದಿದ್ದರೆ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಿ ಅದನ್ನು ಅವರ ಮೊದಲ ಪ್ರಯತ್ನವಾಗಿ ಪರಿಗಣಿಸುತ್ತೇವೆ ಎಂದು ಸರ್ಕಾರದ ಪರ ವಕೀಲರು ವಿವರಿಸಿದರು.

ಸರ್ಕಾರಿ ವಕೀಲರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೀಠ, ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತು. ಜೊತೆಗೆ ಪರೀಕ್ಷೆಗಳನ್ನು ನಡೆಸುವ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಮತ್ತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಜೂ. 25ರಿಂದ ಆರಂಭಗೊಳ್ಳಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ರದ್ದು ಪಡಿಸಬೇಕು. ಒಂದು ವೇಳೆ ಪರೀಕ್ಷೆ ನಡೆದಲ್ಲಿ ರಾಜ್ಯದ 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕು. ಈ ವೇಳೆ, ಕೊರೊನಾ ವೈರಸ್ ಮತ್ತಷ್ಟು ವ್ಯಾಪಿಸುವ ಸಾಧ್ಯತೆ ಇದೆ. ಹೀಗಾಗಿ ಮಹಾರಾಷ್ಟ್ರ ಪಂಜಾಬ್ ಮತ್ತು ಮಧ್ಯಪ್ರದೇಶ ಸರ್ಕಾರಗಳ ರೀತಿಯಲ್ಲಿ ರಾಜ್ಯದಲ್ಲಿಯೂ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ನಡೆಸದಂತೆ ರಾಜ್ಯಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ABOUT THE AUTHOR

...view details