ಕರ್ನಾಟಕ

karnataka

ವರ್ಗಾವಣೆ ಬೆದರಿಕೆ ಪ್ರಕರಣ: ವಿಶೇಷ ತನಿಖೆ ಕೋರಿದ್ದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

By

Published : Jul 25, 2022, 10:54 PM IST

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರ ಪ್ರಕರಣವೊಂದರ ಆರೋಪಿ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಹೆಚ್. ಪಿ ಸಂದೇಶ್ ಅವರು, ಎಸಿಬಿಯು ಸಮರ್ಪಕವಾಗಿ ತನಿಖೆ ನಡೆಸಿಲ್ಲ ಎಂದು ಭ್ರಷ್ಟಾಚಾರ ನಿಗ್ರಹದಳ ಮತ್ತು ಎಸಿಬಿಯ ಮುಖ್ಯಸ್ಥರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ನ್ಯಾಯಾಲಯ
ನ್ಯಾಯಾಲಯ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದ ವಿಚಾರಣೆ ವೇಳೆ ಎಸಿಬಿಯ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್. ಪಿ ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಎಸ್ ಐ ಟಿ ( ವಿಶೇಷ ತನಿಖಾ ತಂಡ ) ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾ ಮಾಡಿದೆ.

ತುಮಕೂರಿನ ನ್ಯಾಯವಾದಿ ರಮೇಶ್ ನಾಯಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠವು ಅರ್ಜಿಯು ವಿಚಾರಣೆಗೆ ಯೋಗ್ಯವಲ್ಲವೆಂದು ಅಭಿಪ್ರಾಯಿಸಿದೆ.

ಹೈಕೋರ್ಟ್​ನ ನ್ಯಾಯಮೂರ್ತಿಯವರನ್ನು ವರ್ಗಾವಣೆ ಮಾಡುವ ಅಧಿಕಾರ ಯಾರಿಗೆ ಇದೆ ಎಂದು ನಿಮಗೆ ತಿಳಿದಿಲ್ಲವೇ?. ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಗೆ ನ್ಯಾಯಾಧೀಶರ ವರ್ಗಾವಣೆ ಮಾಡುವ ಅಧಿಕಾರವಿಲ್ಲ. ಸಂವಿಧಾನದ ಪ್ರಕಾರ, ನ್ಯಾಯಾಂಗದ ಸ್ವಾತಂತ್ರ್ಯವು ಅತ್ಯಂತ ಪವಿತ್ರವಾಗಿದೆ ಎನ್ನುವುದು ಗೊತ್ತಿಲ್ಲವೆ ಎಂದು ವಿಭಾಗೀಯ ಪೀಠವು ಅರ್ಜಿದಾರರನ್ನು ಪ್ರಶ್ನಿಸಿದೆ.

ನ್ಯಾಯಮೂರ್ತಿಯವರನ್ನು ವರ್ಗಾವಣೆ ಮಾಡಿಸುವುದು ಇರಲಿ, ನ್ಯಾಯಾಂಗವನ್ನ ಇಂತಹವರಿಂದ ಮುಟ್ಟಲೂ ಸಹ ಸಾಧ್ಯವಿಲ್ಲ ಎಂದು ವಿಭಾಗೀಯ ಪೀಠವು ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಬೆದರಿಕೆಯೊಡ್ಡಿದ ಪ್ರಕರಣವನ್ನು ವಿಶೇಷ ತನಿಖಾ ತಂಡದ ತನಿಖೆಗೆ ವಹಿಸುವುದರ ಜೊತೆಗೆ ನ್ಯಾಯಮೂರ್ತಿ ಹೆಚ್. ಪಿ ಸಂದೇಶ್ ಅವರಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರ್ಟ್ ಗೆ ಮನವಿ ಮಾಡಲಾಗಿತ್ತು.

ನ್ಯಾಯಮೂರ್ತಿ ಹೆಚ್. ಪಿ ಸಂದೇಶ್ ಅವರಿಗೆ ವೈ, ವೈ ಪ್ಲಸ್‌, ಜಡ್, ಜಡ್ ಪ್ಲಸ್‌ ಅಥವಾ ಸೂಕ್ತ ಭದ್ರತೆ ಒದಗಿಸಲು ಸರ್ಕಾರಕ್ಕೆ ಆದೇಶ ನೀಡಬೇಕು. ಈ ರೀತಿಯ ವರ್ಗಾವಣೆ ಬೆದರಿಕೆಗಳು ಬಂದಾಗ ನ್ಯಾಯಮೂರ್ತಿಗಳು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಅಡ್ಡಿಯಾಗುತ್ತವೆ.

ಇದರಿಂದ, ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಿಸುವ ಹಾಗೂ ನ್ಯಾಯಾಂಗದ ಮೇಲಿನ ಜನರ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರ ಪ್ರಕರಣವೊಂದರ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಹೆಚ್. ಪಿ ಸಂದೇಶ್ ಅವರು, ಎಸಿಬಿಯು ಸಮರ್ಪಕವಾಗಿ ತನಿಖೆ ನಡೆಸಿಲ್ಲವೆಂದು ಭ್ರಷ್ಟಾಚಾರ ನಿಗ್ರಹದಳ ಮತ್ತು ಎಸಿಬಿಯ ಮುಖ್ಯಸ್ಥರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣಕ್ಕೆ ತಮಗೆ ಮೂರನೇ ವ್ಯಕ್ತಿ ಮೂಲಕ ವರ್ಗಾವಣೆಯ ಬೆದರಿಕೆ ಒಡ್ಡಲಾಗಿದೆ ಎನ್ನುವ ಸ್ಫೋಟಕ ಮಾಹಿತಿಯನ್ನ ನ್ಯಾಯಮೂರ್ತಿಗಳು ಹೈಕೋರ್ಟ್​ನ ಕಾರ್ಯಕಲಾಪದಲ್ಲಿಯೇ ಬಹಿರಂಗಪಡಿಸಿದ್ದರು. ನಂತರ ವರ್ಗಾವಣೆ ಬೆದರಿಕೆಯ ಬಗ್ಗೆ ಇತ್ತೀಚೆಗೆ ಲಿಖಿತ ಆದೇಶದಲ್ಲಿ ದಾಖಲು ಸಹ ಮಾಡಿದ್ದರು.

ಓದಿ:ಸಿದ್ದರಾಮಯ್ಯ ಕುಷ್ಟಗಿಯಲ್ಲಿ ಸ್ಪರ್ಧಿಸಿದರೂ ಸೋಲು : ಬಿ.ವೈ.ವಿಜಯೇಂದ್ರ

ABOUT THE AUTHOR

...view details