ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪಗೌಡರ ಅಧ್ಯಕ್ಷತೆಯಲ್ಲಿ ಜು.5ರಂದು ನಡೆಯಬೇಕಿದ್ದ ಸಂಘದ ಕಾರ್ಯಕಾರಿ ಸಮಿತಿ ಸಭೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿತು. ಸಂಘದ ಸದಸ್ಯರಾದ ಹಾಸನ ಜಿಲ್ಲೆಯ ಸಂಕ್ಲಾಪುರದ ಎಸ್.ಎಸ್. ರಘುಗೌಡ, ಸೇರಿದಂತೆ ನಾಲ್ವರು ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿತು. ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಕೆಂಚಪ್ಪಗೌಡ ನೇತೃತ್ವದ ಸಮಿತಿ ಕರೆದಿದೆ ಎನ್ನಲಾಗುವ 2023ರ ಜುಲೈ 5ರ ಕಾರ್ಯಕಾರಿ ಸಮಿತಿಯ ಸಭೆ ಬಗ್ಗೆ ಆಡಳಿತ ಮಂಡಳಿಯ ಇತರೆ ಸದಸ್ಯರಿಗೆ ಯಾವುದೇ ಪೂರ್ವ ನೋಟಿಸ್ ನೀಡಿಲ್ಲ. ಹೀಗಾಗಿ, ಈ ಸಭೆಯನ್ನು ಮುಂದೂಡಬೇಕು ಎಂದು ಕೋರಿದರು.
ಪ್ರತಿವಾದಿಗಳ ಪರ ವಾದ ಮಂಡಿಸಿ ವಕೀಲರು, ಸಭೆಯನ್ನು ಮುಂದೂಡುವಂತೆ ಹೈಕೋರ್ಟ್ ಮೆಟ್ಟಿಲೇರಿರುವ ಮೇಲ್ಮನವಿದಾರರ ಮೂಲ ಉದ್ದೇಶವೇ ಬೇರೆ ಇದೆ. ಸಂಘವು ನೂರು ವರ್ಷಗಳಿಗೂ ಹೆಚ್ಚಿನ ಇತಿಹಾಸದ ಹೆಗ್ಗಳಿಕೆ ಹೊಂದಿದ್ದು ಹಲವಾರು ಶೈಕ್ಷಣಿಕ ವಿದ್ಯಾಸಂಸ್ಥೆಗಳು, ಸಾವಿರಾರು ನೌಕರರು ಇದ್ದಾರೆ. ಕಳೆದ ಮೂರು ತಿಂಗಳಿಂದ ಸಭೆ ನಡೆದಿಲ್ಲ. ಹೀಗಾಗಿ, ಸಂಘದ ದೈನಂದಿನ ಚಟುವಟಿಕೆಗಳ ನಿರ್ವಹಣೆಗಾಗಿ ಸಭೆ ನಡೆಯುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.