ಕರ್ನಾಟಕ

karnataka

By

Published : Dec 16, 2022, 4:58 PM IST

Updated : Dec 16, 2022, 5:39 PM IST

ETV Bharat / state

ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಚಿತ್ರದ ಸಂಗೀತ ಬಳಕೆ ಪ್ರಕರಣ: ತನಿಖೆಗೆ ಹೈಕೋರ್ಟ್ ತಡೆ

ಕೆಜಿಎಫ್ 2 ಚಿತ್ರದ ಸಂಗೀತ ಬಳಕೆ ಪ್ರಕರಣ ರದ್ದುಕೋರಿ ಹೈಕೋರ್ಟ್​ ನ್ಯಾಯಪೀಠಕ್ಕೆ ಕಾಂಗ್ರೆಸ್ ಪಕ್ಷದ ಜೈರಾಮ್ ರಮೇಶ್, ಸುಪ್ರಿಯಾ ಶ್ರೀನೆಟೆ ಮತ್ತು ಸಂಸದ ರಾಹುಲ್ ಗಾಂಧಿ ಅವರು ಅರ್ಜಿ ಸಲ್ಲಿಸಿದ್ದರು.

high court
ಹೈಕೋರ್ಟ್

ಬೆಂಗಳೂರು: ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಚಿತ್ರದ ಸಂಗೀತ ಬಳಕೆ ಮಾಡಿಕೊಂಡು ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಕಾಂಗ್ರೆಸ್ ಪಕ್ಷದ ಸಂವಹನಾ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಾಮಾಜಿಕ ಜಾಲಾತಾಣಗಳ ವಿಭಾಗದ ಮುಖ್ಯಸ್ಥರಾದ ಸುಪ್ರಿಯಾ ಶ್ರೀನಾಟೆ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಿಂದ ವರ್ಚುವಲ್ ಆಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ನ್ಯಾಯಪೀಠ, ಪ್ರಕರಣ ಸಂಬಂಧ ನಡೆಯುತ್ತಿರುವ ತನಿಖೆಗೆ ಮುಂದಿನ ವಿಚಾರಣೆವರೆಗೂ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿ, ಸಂಗೀತ ಬಳಕೆ ಆರೋಪದಲ್ಲಿ ಈ ಹಿಂದೆ ನ್ಯಾಯಾಲಯಕ್ಕೆ ನೀಡಿದ ಭರವಸೆಯಿಂದ ಹಾಡಿನ ತುಣುಕುಗಳನ್ನು ಸಾಮಾಜಿಕ ಜಾಲಾತಾಣಗಳಿಂದ ತೆಗೆದು ಹಾಕಲಾಗಿದೆ. ಜತೆಗೆ, ಕೆಜಿಎಫ್ ಚಿತ್ರದ ದೃಶ್ಯಗಳನ್ನು ಬಳಕೆ ಮಾಡಿಕೊಂಡಿಲ್ಲ. ಯಾತ್ರೆಯ ದೃಶ್ಯಗಳಿಗೆ ಹಿನ್ನೆಲೆ ಸಂಗೀತ ಬಳಕೆ ಮಾಡಿಕೊಳ್ಳಲಾಗಿತ್ತು. ಪ್ರಸ್ತುತ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಯಾವುದೇ ಕಾಗ್ನಿಜಬಲ್ ಆರೋಪಗಳಿಲ್ಲ. ಆದರೆ, ವಿಡಿಯೋದಲ್ಲಿ ರಾಹುಲ್ ಗಾಂಧಿ ಅವರ ಮುಖ ಕಾಣುತ್ತದೆ ಎಂಬ ಕಾರಣಕ್ಕಾಗಿ ಅವರನ್ನು ಆರೋಪಿಯನ್ನಾಗಿಸಲಾಗಿದೆ. ಬೆಂಗಳೂರಿನಲ್ಲಿ ಯಾತ್ರೆ ನಡೆಯದಿದ್ದರೂ, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಹಕ್ಕ ಸ್ವಾಮ್ಯ ಉಲ್ಲಂಘನೆ ಆರೋಪವಿದ್ದರೂ, ಉದ್ದೇಶ ಪೂರ್ವಕವಾಗಿ ಐಪಿಸಿ ಸೆಕ್ಷನ್ 120ಬಿ(ಕ್ರಿಮಿನಲ್ ಪಿತೂರಿ), 403(ಆಸ್ತಿಯ ಅಪ್ರಾಮಾಣಿಕ ದುರುಪಯೋಗ) ಮತ್ತು 465(ನಕಲಿ) ಕಾಯುದೆಗಳು ಮತ್ತು ಮಾಹಿತಿ ಕಾಯಿದೆ ಅಡಿಯಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ವಾದಿಸಿದರು.

ದೂರದಾರರಾದ ಎಂಆರ್‌ಟಿ ಮ್ಯೂಸಿಕ್ ಪರ ವಾದ ಮಂಡಿಸಿ ಹಿರಿಯ ವಕೀಲ ಶ್ಯಾಮ್ ಸುಂದರ್, ನ್ಯಾಯಾಲಯದ ಆದೇಶದ ನಡುವೆಯೂ ಸಂಗೀತ ಬಳಕೆ ಮಾಡಿಕೊಂಡಿರುವ ತುಣುಕುಗಳನ್ನು ಅರ್ಜಿದಾರರ ಸಾಮಾಜಿಕ ಜಾಲಾತಾಣಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ. ಆ ರ‍್ಯಾಲಿಯಲ್ಲಿ ತಮ್ಮನ್ನು ವೈಭವೀಕರಿಸಿಕೊಳ್ಳಲು ದೂರುದಾರರ ಹಾಡಗಳನ್ನು ಬಳಕೆ ಮಾಡಿಕೊಂಡಿರಬಹುದು. ಆದರೆ, ಆ ಹಾಡನ್ನು ಬಳಸುವುದಕ್ಕೆ ಹಕ್ಕು ಸ್ವಾಮ್ಯ ಪಡೆದಿರುವವರಿಗೆ ಮಾತ್ರ ಅವಕಾಶವಿದೆ. ಇದು ಕೃತಿಸ್ವಾಮ್ಯ ಉಲ್ಲಂಘನೆ. ಕ್ರಿಮಿನಲ್ ಆರೋಪಗಳ ಕುರಿತು ತನಿಖೆಯಲ್ಲಿ ಹೊರ ಬರಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ತನಿಖೆಗೆ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿತು.

(ಇದನ್ನೂ ಓದಿ:ರಾಷ್ಟ್ರೀಯ ಕಾಂಗ್ರೆಸ್, ಭಾರತ್ ಜೋಡೋದ ಅಧಿಕೃತ ಟ್ವಿಟರ್ ಖಾತೆ ಅಮಾನತು ಆದೇಶ ರದ್ದು)

Last Updated : Dec 16, 2022, 5:39 PM IST

ABOUT THE AUTHOR

...view details