ಕರ್ನಾಟಕ

karnataka

ETV Bharat / state

ಪಿಎಸ್​ಐ ನೇಮಕಾತಿ ಹಗರಣ: ಇಂದು ಹೈಕೋರ್ಟ್​ ತೀರ್ಪು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರ - PSI recruitment scam verdict

PSI recruitment scam: ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ತೀರ್ಪನ್ನು ಇಂದು ಹೈಕೋರ್ಟ್ ಪ್ರಕಟಿಸಲಿದೆ. ಪಿಎಸ್​ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

PSI recruitment scam verdict
ಪಿಎಸ್​ಐ ನೇಮಕಾತಿ ಹಗರಣದ ತೀರ್ಪು

By ETV Bharat Karnataka Team

Published : Nov 10, 2023, 7:05 AM IST

Updated : Nov 10, 2023, 8:27 AM IST

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.

ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್​​ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ, ಶುಕ್ರವಾರ ಮಧ್ಯಾಹ್ನ ತೀರ್ಪು ಹೊರಹಾಕಲಿದೆ.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಇದಕ್ಕೆ ಪಿಎಸ್​ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿದ್ದರು. ಬಳಿಕ ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪಿಎಸ್​ಐ ನೇಮಕಾತಿಗೆ ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆ.27ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಆ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ. ವಿಭಾಗೀಯ ಪೀಠವು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಇಂದು ಹೈಕೋರ್ಟ್ ನೀಡುವ ಮಹತ್ವದ ತೀರ್ಪಿಗಾಗಿ ಪಿಎಸ್​ಐ ಆಕಾಂಕ್ಷಿತರು, ಅಭ್ಯರ್ಥಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ತೀರ್ಪಿನ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ: ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆ; ಮೀಸಲು ನಿಗದಿಗೆ ಅಂತಿಮ ಗಡುವು ನೀಡಿದ ಹೈಕೋರ್ಟ್

ಮರು ಪರೀಕ್ಷೆ ನಡೆಸಬಹುದು ಎಂದಿದ್ದ ಹೈಕೋರ್ಟ್:ಅರ್ಜಿ ಕುರಿತು ಆಗಸ್ಟ್​ನಲ್ಲಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಿಎಸ್​ಐ ಮರು ಪರೀಕ್ಷೆ ನಡೆಸಬಹುದು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು.

ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಸೇರಿ ಹಲವರನ್ನು ಸಿಐಡಿ ಬಂಧಿಸಿ ವಿಚಾರಣೆ ನಡೆಸಿತ್ತು. ಅಕ್ರಮ ಎಸಗಿ ಪರೀಕ್ಷೆಯಲ್ಲಿ ಪಾಸ್ ಆಗಿ ಪಿಎಸ್​ಐ ಆಗಿ ಆಯ್ಕೆಯಾಗಿದ್ದವರನ್ನು ಮತ್ತು ಅಕ್ರಮಕ್ಕೆ ಸಹಾಯ ಮಾಡಿದ್ದವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಚುನಾವಣಾ ಅಖಾಡಕ್ಕಿಳಿದ ಪಿಎಸ್ಐ ಪರೀಕ್ಷೆ ಹಗರಣದ ಆರೋಪಿ.. 6.5 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ ಆರ್​ಡಿಪಿ

Last Updated : Nov 10, 2023, 8:27 AM IST

ABOUT THE AUTHOR

...view details