ಕರ್ನಾಟಕ

karnataka

ETV Bharat / state

ಸೋಂಕಿತರ ಚಿಕಿತ್ಸೆಗೆ ಸರ್ಕಾರಿ ದರ ಒಪ್ಪದ ಖಾಸಗಿ ಆಸ್ಪತ್ರೆಗಳ ಜೊತೆ ಮಾತುಕತೆ ನಡೆಸಿ: ಎಚ್.ಕೆ.ಪಾಟೀಲ್ - ಸಿಎಂ ಯಡಿಯೂರಪ್ಪ

ಕೊರೊನಾ ವೈರಸ್ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಹೊಣೆಗಾರಿಕೆಯನ್ನು ಮತ್ತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಸಿಎಂಗೆ ಪತ್ರ ಬರೆದಿದ್ದಾರೆ.

HK patil
HK patil

By

Published : Jun 26, 2020, 5:29 PM IST

ಬೆಂಗಳೂರು:ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಪಡಿಸಿರುವ ದರಗಳನ್ನು ಒಪ್ಪಿಕೊಂಡಿರುವುದಿಲ್ಲ. ಇಂಥ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತಕ್ಷಣವೇ ಭಾರತೀಯ ವೈದ್ಯ ಸಂಘ ಜೊತೆಗೆ ಸಭೆ ನಡೆಸಿ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳನ್ನು ಕರೆದು ತಕ್ಷಣವೇ ಸಮಸ್ಯೆ ಬಗೆಹರಿಸಬೇಕು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಮಹಾಮಾರಿ ಕೊರೊನಾ ವೈರಸ್ ಸಂಬಂಧ ರಾಜ್ಯ ಸರ್ಕಾರ ಮಹತ್ವದ ಹೊಣೆಗಾರಿಕೆಯನ್ನು ಮತ್ತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಈ ಜವಾಬ್ದಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಸರ್ಕಾರ ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಮತ್ತು ಸಮಯೋಚಿತ ಜನಪರ ನಿರ್ಧಾರಗಳನ್ನು ಕಾಲಕಾಲಕ್ಕೆ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ವಿಶ್ವದಾದ್ಯಂತ ಮಹಾಮಾರಿ ಕೊರೊನಾ ವೈರಸ್ (ಕೋವಿಡ್-19) ನಿಂದ ಪರಿಸ್ಥಿತಿ ಆಘಾತಕಾರಿ ಹಂತ ತಲುಪುತ್ತಿದೆ. ಕರ್ನಾಟಕದಲ್ಲಿಯೂ ಸಹ ಅತ್ಯಂತ ಗಂಭೀರವಾದ ಪರಿಸ್ಥಿತಿ ಈಗ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಅತ್ಯಂತ ತುರ್ತಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳೆಲ್ಲವೂ ಭರ್ತಿಯಾಗಿವೆ ಎಂಬ ಮಾಹಿತಿ ಇದೆ. ಇದು ಬೆಂಗಳೂರು ಮಾತ್ರವಲ್ಲ ರಾಜ್ಯದ ಇತರೆಡೆಗಳಲ್ಲಿಯೂ ಸಹ ಇದೇ ಸನ್ನಿವೇಶ ಎದುರಾಗಿದೆ. ಈಗ ಲಭ್ಯವಿರುವ ಹಾಸಿಗೆಗಳಿಗಿಂತ 10 ಪಟ್ಟು ಹೆಚ್ಚಿಗೆ ಹಾಸಿಗೆಗಳನ್ನು ಸಿದ್ದಪಡಿಸಿಕೊಳ್ಳುವ ಅನಿವಾರ್ಯತೆ ಇದೆ. ಹಾಸಿಗೆಗಳನ್ನು ಸಿದ್ಧಪಡಿಸುವ ಕೆಲಸ ಸಮರೋಪಾದಿಯಲ್ಲಿ ನಡೆಯಬೇಕು ಎಂದಿದ್ದಾರೆ.

ರಾಜ್ಯಾದ್ಯಂತ ಲಭ್ಯವಿರುವ 5 ಸ್ಟಾರ್ ಮತ್ತು 3 ಸ್ಟಾರ್ ಆಸ್ಪತ್ರೆಗಳು ಹಾಗೂ ಹೋಟೆಲ್‍ಗಳನ್ನು ಸರ್ಕಾರ ಆದೇಶ ಅಥವಾ ಸುಗ್ರೀವಾಜ್ಞೆಯ ಮೂಲಕ ತಕ್ಷಣವೇ ತನ್ನ ವಶಕ್ಕೆ ತೆಗೆದುಕೊಂಡು ಅವುಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಕೋವಿಡ್-19 ಚಿಕಿತ್ಸಾ ಕೇಂದ್ರ ಅಥವಾ ಆಸ್ಪತ್ರೆಗಳನ್ನಾಗಿ ಪರಿವರ್ತಿಸಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯದ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಸಮಯೋಚಿತ ಮತ್ತು ಪರಿಣಾಮಕಾರಿಯಾದ ವ್ಯವಸ್ಥೆ ರೂಪಿಸಲು ಅತ್ಯಂತ ಗಂಭೀರವಾದ ಕ್ರಮಗಳ ಬಗ್ಗೆ ಆಲೋಚನೆ ನಡೆಯಬೇಕೆ ಹೊರತು, ಕೇವಲ ಮೇಲ್ಪದರದ ಅಥವಾ ವಿಂಡೋ ಡ್ರೆಸ್ಸಿಂಗ್ ನಡೆಯಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

ABOUT THE AUTHOR

...view details