ಬೆಂಗಳೂರು :'ರೂಲ್ ಮೇಕರ್ಸ್ ಆರ್ ದ ರೂಲ್ ಬ್ರೇಕರ್ಸ್' ಇದು ಪ್ರಸಿದ್ಧ ನಾಣ್ಣುಡಿ.. ಇದಕ್ಕೆ ನಮ್ಮ ರಾಜ್ಯವೂ ಹೊರತಾಗಿಲ್ಲ. ರಾಜ್ಯದ ಹಲವು ಜನಪ್ರತಿನಿಧಿಗಳು ಕೂಡ ಕಾನೂನು ಉಲ್ಲಂಘಿಸಿದ ಆರೋಪಕ್ಕೆ ಸಿಲುಕಿದ್ದು, ಅವರ ವಿರುದ್ಧ ಹಲವು ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ನ್ಯಾಯಾಂಗ ಮುಂದಾಗಿದೆ.
ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಅನಗತ್ಯ ಮುಂದೂಡಿಕೊಂಡು ಬರಲಾಗುತ್ತಿದೆ ಎಂಬ ಆರೋಪ ಹಿಂದಿನಿಂದಲೂ ಇದೆ. ಈ ಹಿನ್ನೆಲೆ ಸುಪ್ರೀಂಕೋರ್ಟ್ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತ ಇತ್ಯರ್ಥಪಡಿಸಲು ನೀಡಿದ ಆದೇಶದಂತೆ ಎಲ್ಲ ರಾಜ್ಯಗಳಲ್ಲಿಯೂ 'ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ' ಸ್ಥಾಪಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಒಂದು ವಿಶೇಷ ನ್ಯಾಯಾಲಯವನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಸ್ಥಾಪಿಸಲಾಗಿದೆ.
ಹೈಕೋರ್ಟ್ ಮೇಲ್ವಿಚಾರಣೆ :ವಿಶೇಷ ನ್ಯಾಯಾಲಯದಲ್ಲಿಯೂ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ಶೀಘ್ರ ಇತ್ಯರ್ಥವಾಗುತ್ತಿಲ್ಲ ಎಂಬ ಹಿನ್ನೆಲೆ ಸುಪ್ರೀಂಕೋರ್ಟ್ ಎಲ್ಲ ಹೈಕೋರ್ಟ್ಗಳಿಗೆ ಮೇಲ್ವಿಚಾರಣೆ ನಡೆಸಲು ಸೂಚಿಸಿದೆ. ಅದರಂತೆ ರಾಜ್ಯ ಹೈಕೋರ್ಟ್ ಸೆಪ್ಟೆಂಬರ್ 21ರಂದು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದ್ದು, ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಹೇಗೆ ಶೀಘ್ರವಾಗಿ ಇತ್ಯರ್ಥಪಡಿಸಬಹುದು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದೆ.
ಈ ನಿಟ್ಟಿನಲ್ಲಿ ಹೈಕೋರ್ಟ್ಗೆ ಸಹಾಯ ನೀಡಲು ಅಮಿಕಸ್ ಕ್ಯೂರಿ ಆಗಿ ಹಿರಿಯ ವಕೀಲ ಆದಿತ್ಯ ಸೋಂಧಿ ಅವರನ್ನು ನೇಮಿಸಿದ್ದು, ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ವಾದಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ಸೂಚನೆಯಂತೆ ಪ್ರಕರಣಗಳ ವಸ್ತುಸ್ಥಿತಿ ಪರಿಶೀಲಿಸುವ ಹಾಗೂ ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಮುಖ್ಯ ನ್ಯಾಯಮೂರ್ತಿಗಳು ಪ್ರಕರಣಗಳ ಮೇಲ್ವಿಚಾರಣೆ ನಡೆಸಲಿದ್ದಾರೆ.