ಕರ್ನಾಟಕ

karnataka

ETV Bharat / state

ಮುಚ್ಚಿರುವ ಇಂದಿರಾ ಕ್ಯಾಂಟೀನ್​ಗಳ ಮುಂದೆ ಧರಣಿ ಕೂರುತ್ತೇನೆ: ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್​ ಸರ್ಕಾರ ಬೆಂಗಳೂರು ನಗರದ 198 ವಾರ್ಡ್​ಗಳಲ್ಲಿ ಇಂದಿರಾ ಕ್ಯಾಂಟೀನ್​ಗಳನ್ನು ನಿರ್ಮಿಸಿತ್ತು. ಈ ಪೈಕಿ ಈಗ 40 ಕ್ಯಾಂಟೀನ್​ಗಳು ಮುಚ್ಚಿವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

By

Published : Nov 4, 2022, 7:09 AM IST

Opposition leader Siddaramayya
ಪಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಹಾಗೂ ಮಹಾನಗರದ ಕೆಲವೆಡೆ ಇಂದಿರಾ ಕ್ಯಾಂಟೀನ್ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಸರಣಿ ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆದು ಗುಣಮಟ್ಟದ ತಿಂಡಿ-ಊಟ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಇದಕ್ಕೆ ತಪ್ಪಿದ್ದಲ್ಲಿ ತಾವೇ ಬಂದು ಮುಚ್ಚಿರುವ ಇಂದಿರಾ ಕ್ಯಾಂಟೀನ್​ಗಳ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದಿರಾ ಕ್ಯಾಂಟೀನ್​ಗಳಿಗೆ ಬರುತ್ತಿರುವ ಜನರ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವುದು ಒಂದು ನೆಪ ಮಾತ್ರ. ರಾಜ್ಯ ಬಿಜೆಪಿ ಸರ್ಕಾರ ದುರುದ್ದೇಶದಿಂದ ಕ್ಯಾಂಟೀನ್ ತಿಂಡಿ-ಊಟದ ಗುಣಮಟ್ಟವನ್ನು ಕೆಡಿಸುತ್ತಿದೆ. ಇದರ ಜೊತೆಗೆ ಕ್ಯಾಂಟೀನ್ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದೆ ಸತಾಯಿಸುತ್ತಿದೆ.

ನಮ್ಮ ಸರ್ಕಾರ ಬೆಂಗಳೂರು ನಗರದ ಎಲ್ಲ 198 ವಾರ್ಡ್​ಗಳಲ್ಲಿ ಇಂದಿರಾ ಕ್ಯಾಂಟೀನ್​ಗಳನ್ನು ಪ್ರಾರಂಭಿಸಿತ್ತು. ಅವುಗಳಲ್ಲೀಗ 40 ಕ್ಯಾಂಟಿನ್​ಗಳು ಮುಚ್ಚಿವೆ. ಬೆಂಗಳೂರು ನಗರವೂ ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿನ ಕ್ಯಾಂಟೀನ್​ಗಳನ್ನು ಕೂಡಾ ಒಂದೊಂದಾಗಿ ಮುಚ್ಚಲಾಗುತ್ತಿದೆ. ಕ್ಯಾಂಟೀನ್ ಗುತ್ತಿಗೆಯ ನವೀಕರಣಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ. ಕಳೆದ ಆರು ತಿಂಗಳುಗಳಿಂದ ಬಿಬಿಎಂಪಿಗೆ ಕ್ಯಾಂಟೀನ್ ವೆಚ್ಚದ ಸಹಾಯಧನವನ್ನೂ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಗುತ್ತಿಗೆದಾರರು ಯಾವುದೇ ಕ್ಷಣದಲ್ಲಿ ಉಳಿದ ಕ್ಯಾಂಟೀನ್​ಗಳಿಗೆ ಆಹಾರ ಪೂರೈಕೆ ನಿಲ್ಲಿಸಬಹುದು.

ನಾವು ಇಂದಿರಾ ಕ್ಯಾಂಟೀನ್​ಗಾಗಿ 2017-18ರಲ್ಲಿ ರೂ. 100 ಕೋಟಿ ಮತ್ತು 2018-19ರಲ್ಲಿ ರೂ.145 ಕೋಟಿಗಳನ್ನು ಬಜೆಟ್​ನಲ್ಲಿ ನೀಡಿದ್ದೆವು. 2022-23ರ ಬಿಜೆಪಿ ಸರ್ಕಾರ ಬಜೆಟ್​ನಲ್ಲಿ ಹಣ ನೀಡದೆ ಖರ್ಚಿನ ಭಾರವನ್ನು ಬಿಬಿಎಂಪಿ ತಲೆ ಮೇಲೆ ಹೊರಿಸಿರುವುದೇ ಈಗಿನ ಹಣದ ಕೊರತೆಗೆ ಕಾರಣ. ಬೆಲೆ ಏರಿಕೆಯಿಂದಾಗಿ ಬೆಂಗಳೂರು ಮಹಾನಗರದಲ್ಲಿ ಒಂದು ಊಟಕ್ಕೆ ಇಂದು 50-60 ರೂಪಾಯಿ ನೀಡಬೇಕಾಗಿದೆ. ನಗರದ ಬಡವರು ಮತ್ತು ಬೇರೆ ಊರುಗಳಿಂದ ಬಂದವರಿಗೆ ಅಕ್ಷಯಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಮುಚ್ಚಿ ಅವರ ಶಾಪಕ್ಕೆ ಯಾಕೆ ತುತ್ತಾಗುತ್ತೀರಿ ರಾಜ್ಯ ಬಿಜೆಪಿ? ಎಂದು ಸಿದ್ದರಾಮಯ್ಯ ಟ್ವೀಟ್‌ಗಳ ಮೂಲಕ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಹಾವೇರಿ: ಇಂದಿರಾ ಕ್ಯಾಂಟೀನ್ ಪುನಾರಂಭಿಸುವಂತೆ ಸ್ಥಳೀಯರ ಆಗ್ರಹ

ABOUT THE AUTHOR

...view details