ಬೆಂಗಳೂರು: ಕೋವಿಡ್ ಕಾರಣಕ್ಕೆ ಶೈಕ್ಷಣಿಕ ವರ್ಷವೇ ಶೂನ್ಯ ವರ್ಷವಾಗುತ್ತಾ ಅಂತ ಪೋಷಕರು-ವಿದ್ಯಾರ್ಥಿಗಳು ಆತಂಕದಲ್ಲಿದ್ದರು. ಆದರೆ ಕೋವಿಡ್ ತೀವ್ರತೆ ಕಡಿಮೆಯಾದ ಕಾರಣ ಜನವರಿ 1ರಿಂದ ರಾಜ್ಯದಾದ್ಯಂತ ಎಸ್ಎಸ್ಎಸ್ಸಿ ಹಾಗೂ ದ್ವಿತೀಯ ಪಿಯು ಕಾಲೇಜು ಆರಂಭವಾಗಿವೆ.
ಮೊದಲ ದಿನ ಶುರುವಿನಲ್ಲಿ ಬೆರಳೆಣಿಕೆಯಷ್ಟಿದ್ದ ವಿದ್ಯಾರ್ಥಿಗಳು ದಿನಕಳೆದಂತೆ ಸಂಖ್ಯೆ ಏರಿಕೆಯಾಗುತ್ತಿದೆ. ಸರ್ಕಾರಿ ಶಾಲಾ-ಕಾಲೇಜು ಮಾತ್ರವಲ್ಲದೇ ಖಾಸಗಿಯಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ಕಿಡ್ ಇಂಟರ್ ನ್ಯಾಷನಲ್ ಸ್ಕೂಲ್ನ ಸಂಯೋಜಕಿ ಶಾಂತಲಾ ದೇವಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಯಲ್ಲಿರುವ ನಾನ್ ಟೀಚಿಂಗ್ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲಾಗಿದೆ. ತರಗತಿಗೆ ಶೇ. 70ರಷ್ಟು ಹಾಜರಾತಿ ಇದೆ ಎಂದರು. ಇನ್ನು ಶಿಕ್ಷಕರಿಗೆ ಕೋವಿಡ್ ಪರೀಕ್ಷೆಯಿಂದ ಹಿಡಿದು ತರಗತಿಯಲ್ಲೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ಇನ್ನು ರಾಜ್ಯದಲ್ಲಿರುವ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 4,24,250 ವಿದ್ಯಾರ್ಥಿಗಳ ಪೈಕಿ ಇಂದು 2,42,886 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ. 57.25 ಹಾಜರಿ) ಅಂತೆಯೇ 16,850 ಪ್ರೌಢ ಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,77,051 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ. 51.34 ಹಾಜರಾತಿ) ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
6ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಇಂದು 6,30,557 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಪ್ರಸ್ತುತ ವರ್ಷದ ಶಾಲಾರಂಭದ ಐದನೇ ದಿನವಾದ ಇಂದು ವಿದ್ಯಾರ್ಥಿಗಳ ಹಾಜರಾತಿ ಯಥಾಸ್ಥಿತಿಯಲ್ಲಿ ಮುಂದುವರೆದಿದ್ದು, ಶಾಲಾ ಕಾಲೇಜುಗಳನ್ನು ಆರಂಭಿಸಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರಲ್ಲಿ ಕೊರೊನಾ ಸೋಂಕು ದೃಢ