ಬೆಂಗಳೂರು: ಸುದ್ದಿಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗೆ ಗುಪ್ತಚರ ಇಲಾಖೆ ಅಧಿಕಾರಿ ಆಗಮಿಸಿದ್ದನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಇಂದು ಸಂಜೆ ಸುದ್ದಿಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ಗುಪ್ತಚರ ಇಲಾಖೆ ಮತ್ತು ಕ್ರೈಮ್ ಬ್ರ್ಯಾಂಚ್ ಅಧಿಕಾರಿ ಕಾತ್ಯಾಯಿನಿ ಹಾಗೂ ಮತ್ತೋರ್ವ ಅಧಿಕಾರಿ ಆಗಮಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಸಭಾಂಗಣದಲ್ಲಿ ಕುಳಿತಿದ್ದರು.
ಇದನ್ನು ಗಮನಿಸಿದ ಕೆಪಿಸಿಸಿ ಸಿಬ್ಬಂದಿ, ಮಾಜಿ ಮೇಯರ್ ರಾಮಚಂದ್ರಪ್ಪ ಅವರಿಗೆ ಮಾಹಿತಿ ತಲುಪಿಸಿದ್ದಾರೆ. ಕೂಡಲೇ ಅಧಿಕಾರಿಗಳು ಇದ್ದ ಸ್ಥಳಕ್ಕೆ ಆಗಮಿಸಿದ ರಾಮಚಂದ್ರಪ್ಪ ಅವರು, ತಾವು ಇಲ್ಲಿಗೆ ಆಗಮಿಸುವಂತೆ ಇಲ್ಲ ಎಂದು ತಾಕೀತು ಮಾಡಿದ್ದಾರೆ. ಕೂಡಲೇ ಅಧಿಕಾರಿಗಳು ಸಭಾಂಗಣದಿಂದ ಆಚೆಗೆ ತೆರಳಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ಕೊನೆಯಲ್ಲಿ ಮಾತನಾಡಿ, ಗುಪ್ತಚರ ಇಲಾಖೆ ಅಧಿಕಾರಿ ಒಬ್ಬರು ಕಾಂಗ್ರೆಸ್ ಪತ್ರಿಕಾಗೋಷ್ಠಿ ಮಾಹಿತಿ ಪಡೆಯಲು ಆಗಮಿಸಿದ್ದರು ಎಂದರೆ, ಬಿಟ್ ಕಾಯಿನ್ ವಿಚಾರದಲ್ಲಿ ಸರ್ಕಾರವೇ ನೇರವಾಗಿ ಶಾಮೀಲಾಗಿದೆ ಎಂದು ಹೇಳುವುದಕ್ಕೆ ಬೇರೆ ಉದಾಹರಣೆ ಬೇಕಿಲ್ಲ ಎಂದರು.