ಬೆಂಗಳೂರು:ಕೊರೊನಾ ಸೋಂಕಿತರನ್ನು ಪತ್ತೆ ಹಚ್ಚಲು ನೆರವಾಗುವ ಆರೋಗ್ಯ ಸೇತು ಆ್ಯಪ್ ಅನ್ನು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರಿಗೆ ಕಡ್ಡಾಯ ಮಾಡಬಹುದೇ? ಇದನ್ನು ಜಾರಿಗೊಳಿಸಲು ಕಾನೂನಿನ ಮಾನ್ಯತೆ ಇದೆಯೇ? ಎಂಬುದಕ್ಕೆ ವಿವರಣೆ ನೀಡುವಂತೆ ಹೈಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಆಕ್ಷೇಪಿಸಿ ನಗರದ ಅನಿವರ್ ಎಂಬುವರು ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹಿಂದಿನ ವಿಚಾರಣೆ ವೇಳೆ ತಿಳಿಸಿತ್ತು. ಹಾಗಿದ್ದೂ, ದೇಶದಾದ್ಯಂತ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೂರಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸರ್ಕಾರದ ಪರ ವಕೀಲರು, ಗೃಹ ಸಚಿವಾಲಯ ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯಗೊಳಿಸಿ ಯಾವುದೇ ಆದೇಶ ಹೊರಡಿಸಿಲ್ಲ. ಒಂದು ವೇಳೆ ಆ್ಯಪ್ ಬಳಕೆ ಕಡ್ಡಾಯ ಮಾಡಿ ಸರ್ಕಾರ ಅಥವಾ ಅದರ ಯಾವುದೇ ಪ್ರಾಧಿಕಾರ ಒತ್ತಾಯಪಡಿಸಿದ್ದರೆ, ಆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸಬಹುದು ಎಂದು ಸವಾಲೆಸೆದರು.
ವಾದ-ಪ್ರತಿವಾದ ಆಲಿಸಿದ ಪೀಠ, ಅರ್ಜಿದಾರರ ಆರೋಪಕ್ಕೆ ದಾಖಲೆಗಳಿದ್ದರೆ ಸಲ್ಲಿಸುವಂತೆ ಸೂಚಿಸಿ ಜುಲೈ 17ಕ್ಕೆ ವಿಚಾರಣೆ ಮುಂದೂಡಿತು.
ಇದೇ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ಪೀಠ, ಹೈಕೋರ್ಟ್ ಸಹ ಕೋರ್ಟ್ ಕಾರ್ಯಾಚರಣೆ ಸಂಬಂಧ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಆರೋಗ್ಯ ಸೇತು ಆ್ಯಪ್ ಬಳಕೆಗೆ ಸಲಹೆ ನೀಡಲಾಗಿದೆ. ಆದರೆ ಬಳಕೆಯನ್ನು ಕಡ್ಡಾಯ ಮಾಡಿಲ್ಲ. ಆದ್ದರಿಂದ ಆರೋಗ್ಯ ಸೇತು ಆ್ಯಪ್ ಅನ್ನು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರಿಗೆ ಕಡ್ಡಾಯ ಮಾಡಬಹುದೇ? ಇದನ್ನು ಜಾರಿಗೊಳಿಸಲು ಕಾನೂನಿನ ಮಾನ್ಯತೆ ಇದೆಯೇ? ಎಂಬುದಕ್ಕೆ ವಿವರಣೆ ನೀಡುವಂತೆ ತಿಳಿಸಿತು.