ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಜಕ್ಕೂರು ಮತ್ತು ಯಲಹಂಕಕ್ಕೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆ ಕಾಮಗಾರಿಯನ್ನು ಬಿಬಿಎಂಪಿ ಮತ್ತು ರೈಲ್ವೆ ಇಲಾಖೆಯ ಸಹಯೋಗದಲ್ಲಿ ಪ್ರಾರಂಭಿಸಿ 9 ವರ್ಷ ಕಳೆದರೂ, ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸ್ಥಳಿಯ ಶಾಸಕರ ನಿರ್ಲಕ್ಷತನದಿಂದಲೇ ಕಾಮಗಾರಿಯು ಅರ್ಧಕ್ಕೆ ಸ್ಥಗಿತಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಜಕ್ಕೂರು ಮತ್ತು ಯಲಹಂಕಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ರೈಲ್ವೆ ಹಳಿಯು ಹಾದು ಹೋಗಿದ್ದು, ಇದಕ್ಕೂ ಮೊದಲು ರೈಲು ಬಂದಾಗ ರಸ್ತೆಗೆ ತಡೆ ಹಾಕಲಾಗುತ್ತಿತ್ತು. ಈ ರೈಲ್ವೆ ಕ್ರಾಸಿಂಗ್ ಗೇಟ್ ಅನ್ನು ತಪ್ಪಿಸುವ ಸಲುವಾಗಿ ಮೇಲ್ಸೇತುವೆ ಕಾಮಗಾರಿಯನ್ನು ನಿರ್ಮಾಣ ಮಾಡುವ ಕಾಮಗಾರಿಯನ್ನು 2014ರ ಬಜೆಟ್ನಲ್ಲಿ ಕೈಗೆತ್ತಿಕೊಂಡಿತು. ಆದರೆ, ಅವೈಜ್ಞಾನಿಕ ನಿರ್ಧಾರಗಳಿಂದ ಮೇಲ್ಸೇತುವೆ ಕಾಮಗಾರಿಯು ಅರ್ಧಕ್ಕೆ ಸ್ಥಗಿತಗೊಂಡಿದೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರು ಲೇನ್ಗೆ ಬದಲಾದ ಕಾಮಗಾರಿ:ಮೊದಲು ನಾಲ್ಕು ಲೇನ್ಗಳಲ್ಲಿ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಇದಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ನಡೆಸಿದ ಕಾರಣ ಕಾಮಗಾರಿಯನ್ನು ಪ್ರಾರಂಭಿಸಲಾಯಿತು. ಆದರೆ ಯಲಹಂಕ ಹಾಗೂ ಜಕ್ಕೂರು ಸುತ್ತಮುತ್ತಲು ಅಭಿವೃದ್ಧಿಯಾಗುತ್ತಿರುವ ಕಾರಣ ಆರು ಲೇನ್ಗಳ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ಮುಂದಾದರು. ಈ ಹೆಚ್ಚುವರಿ ಕಾಮಗಾರಿಗೆ ಯಾವುದೇ ಭೂಸ್ವಾಧೀನ ಪ್ರಕ್ರಿಯೆಯನ್ನು ನಡೆಸದ ಕಾರಣ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ.
ಭೂಸ್ವಾದೀನ ಪ್ರಕ್ರಿಯೆಯಲ್ಲಿ ಸಮಸ್ಯೆ:ಮೇಲ್ಸೇತುವೆಯನ್ನು ನಾಲ್ಕು ಲೇನ್ಗಳಿಂದ ಆರು ಲೇನ್ಗಳಿಗೆ ವಿಸ್ತರಣೆ ಮಾಡಿದ ಕಾಮಗಾರಿಯನ್ನು ಪ್ರಾರಂಭಿಸುವ ಮೊದಲು ಭೂಸ್ವಾದೀನ ಮಾಡಿಕೊಳ್ಳಬೇಕಾಗಿತ್ತು. ಹಾಗೆ ಮಾಡದೇ ನೇರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಹಾಗಾಗಿ ಭೂಮಿಯನ್ನು ಕಳೆದುಕೊಳ್ಳುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಶಾಸಕರು ಭೂಮಿಯನ್ನು ಕಳೆದುಕೊಳ್ಳುತ್ತಿರುವವರಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಅಧಿಕಾರಿಗಳೊಂದಿಗೆ ಸೂಕ್ತ ಮಾತುಕತೆ ನಡೆಸಿ, ಕ್ರಮ ತೆಗೆದುಕೊಂಡಿದ್ದರೆ, ಇಷ್ಟೊತ್ತಿಗೆ ಕಾಮಗಾರಿ ಪೂರ್ಣವಾಗುತ್ತಿತ್ತು ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.