ಕರ್ನಾಟಕ

karnataka

By ETV Bharat Karnataka Team

Published : Sep 25, 2023, 6:54 AM IST

Updated : Sep 25, 2023, 9:02 AM IST

ETV Bharat / state

ಇಂದು ರಾಜ್ಯಾದ್ಯಂತ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ 'ಜನತಾ ದರ್ಶನ'; ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ರಾಜ್ಯಾದ್ಯಂತ ಇಂದು ಏಕಕಾಲಕ್ಕೆ ಜಿಲ್ಲಾ ಮಟ್ಟದ 'ಜನತಾ ದರ್ಶನ' ನಡೆಸಲು ಸರ್ಕಾರ ನಿರ್ಧರಿಸಿದೆ. ಸಾರ್ವಜನಿಕರ ದಿನನಿತ್ಯದ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವುದು ಇದರ ಉದ್ದೇಶ.

Representative image
ಪ್ರಾತಿನಿಧಿಕ ಚಿತ್ರ

ಬೆಂಗಳೂರು:ಇಂದು (ಸೋಮವಾರ) ರಾಜ್ಯದೆಲ್ಲೆಡೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ 'ಜನತಾ ದರ್ಶನ' ನಡೆಯಲಿದೆ. ಆಡಳಿತಕ್ಕೆ ಚುರುಕು ಮುಟ್ಟಿಸುವುದು ಹಾಗೂ ಜನಸ್ಪಂದನೆಗಾಗಿ ಈ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ. ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ.

ಆಯಾಯ ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಸರ್ಕಾರ ಪ್ರಯತ್ನಿಸಲಿದೆ. ಆಡಳಿತಕ್ಕೆ ವೇಗ ನೀಡಲು, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ದಿನಗಳ ಹಿಂದೆ ಜನತಾ ದರ್ಶನ ಏರ್ಪಡಿಸುವ ಕುರಿತು ಸೂಚನೆ ನೀಡಿದ್ದರು.

ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣ ಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದು ಏನು ಪ್ರಯೋಜನ? ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಜನತಾ ದರ್ಶನ ನಡೆಸಬೇಕು ಎಂದು ಅವರು ಸೂಚನೆ ನೀಡಿದ್ದರು.

ಹೇಗಿರಲಿದೆ ಜನತಾದರ್ಶನ?:ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ.

ಇವರೆಲ್ಲರ ನಡುವೆ ಸಮನ್ವಯ ಸಾಧಿಸಿ ಜನತಾ ದರ್ಶನ ಅರ್ಥಪೂರ್ಣವಾಗಿ ಮತ್ತು ಫಲಪ್ರದವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿಗಳದ್ದಾಗಿರುತ್ತದೆ. ಪ್ರತಿ ಜಿಲ್ಲೆಯಲ್ಲೂ ಜನತಾ ದರ್ಶನ ನಡೆಯುವ, ನಡೆಸುವ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ತಿಳುವಳಿಕೆ ನೀಡಲಾಗಿದೆ.

ನಿಗದಿತ ಸ್ಥಳದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಜನತಾ ದರ್ಶನ ಆರಂಭವಾಗಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಇಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಈ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರಥಮ ಆದ್ಯತೆಯಾಗಿರುತ್ತದೆ. ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಸಾರ್ವಜನಿಕರ ಅಹವಾಲುಗಳು ಸ್ಥಳದಲ್ಲೇ ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವರ್ಗಾವಣೆಗೊಳ್ಳುತ್ತವೆ. ಎಲ್ಲದಕ್ಕೂ ಕಾಲ ಮಿತಿಯಲ್ಲಿ ಪರಿಹಾರ ಒದಗಿಸುವ ಮತ್ತು ಸಾರ್ವಜನಿಕರು ನೀಡಿದ ಅಹವಾಲಿನ ಸ್ಥಿತಿಗತಿಯನ್ನು ಅರ್ಜಿದಾರರಿಗೆ ಮನವರಿಕೆ ಮಾಡಿಸುವ ಜವಾಬ್ದಾರಿ ಕೂಡ ಜಿಲ್ಲಾಡಳಿತದ ಮೇಲಿರುತ್ತದೆ.

ಸಾರ್ವಜನಿಕರ ಅಹವಾಲು ಎಲ್ಲಿ ದಾಖಲಾಗುತ್ತವೆ?:ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ 'ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ' (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ. ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್​ಗೆ ಅರ್ಜಿಗಳ ವಿಲೇವಾರಿ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂಬ ಸೂಚನೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.

ಡಿಸಿಯಿಂದ ತಾಲೂಕು ಮಟ್ಟದ ಜನತಾ ದರ್ಶನ:ಇಂದು ಇಡೀ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ 15 ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲೂಕನ್ನು ಆರಿಸಿಕೊಂಡು ತಾಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎಂಬ ಆದೇಶವನ್ನೂ ಹೊರಡಿಸಲಾಗಿದೆ.

ಉದ್ದೇಶವೇನು?:ಸಾರ್ವಜನಿಕರು ಪದೇ ಪದೆ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದು ತಪ್ಪುತ್ತದೆ. ಅರ್ಜಿದಾರರ ದೂರು ಸತ್ಯವಾಗಿದ್ದು, ಯಾವುದೇ ದುರುದ್ದೇಶದಿಂದ ಕೂಡಿರದಿದ್ದರೆ ಅಂತಹ ಅರ್ಜಿಗಳಿಗೆ ಸೂಕ್ತ ಪರಿಹಾರ ಒದಗಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನು ಇದಕ್ಕೆ ಹೊಣೆಗಾರರನ್ನಾಗಿಸಿ ಸರ್ಕಾರ ಕ್ರಮ ಜರುಗಿಸಲಿದೆ.

ಇದನ್ನೂ ಓದಿ:ನಾಳೆ ಚಿಂಚೋಳಿಯಲ್ಲಿ ಜನತಾ ದರ್ಶನ ಸದುಪಯೋಗ ಪಡೆಯಿರಿ: ಡಿಸಿ ಫೌಜಿಯಾ ತರುನ್ನುಮ್

Last Updated : Sep 25, 2023, 9:02 AM IST

ABOUT THE AUTHOR

...view details