ಕರ್ನಾಟಕ

karnataka

ಸದನದೊಳಗೆ ಹೋರಾಟ ನಡೆಸಲು ಜೆಡಿಎಸ್ ಪ್ಲಾನ್: ಯಾರಾಗಲಿದ್ದಾರೆ ಪಕ್ಷದ ಉಪನಾಯಕ..?

By

Published : Jun 29, 2023, 5:34 PM IST

ಸದನದೊಳಗೆ ಹೋರಾಟ ಮಾಡಲು ಜೆಡಿಎಸ್ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಸ್ತ್ರ ಪ್ರಯೋಗಿಸಲು ಹೆಚ್​. ಡಿ. ಕುಮಾರಸ್ವಾಮಿ ಜೋರಾಗಿಯೇ ತಯಾರಿ ನಡೆಸುತ್ತಿದ್ದಾರೆ.

JDS
ಹೆಚ್​.ಡಿ. ಕುಮಾರಸ್ವಾಮಿ

ಬೆಂಗಳೂರು:ರಾಜ್ಯ ವಿಧಾನಸಭೆ ಅಧಿವೇಶನ ಜುಲೈ 3ರಿಂದ ಆರಂಭವಾಗುತ್ತಿದ್ದು, ಸದನದ ಒಳಗೆ ಹೋರಾಟ ಮಾಡಲು ಜೆಡಿಎಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 19 ಸ್ಥಾನಕ್ಕೆ ಕುಸಿತ ಕಂಡರೂ ದೃತಿಗೆಡದ ಜೆಡಿಎಸ್ ವರಿಷ್ಠರು ರಾಜ್ಯದಲ್ಲಿ ಮತ್ತೆ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಅದಕ್ಕೂ ಮುನ್ನ ಅಧಿವೇಶನ ಆರಂಭವಾಗುತ್ತಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಸಜ್ಜುಗೊಳ್ಳುತ್ತಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್‌ನ ಶಾಸಕಾಂಗ ಪಕ್ಷ ಉಪನಾಯಕ ಸ್ಥಾನಕ್ಕೆ ಹಿರಿಯ ಶಾಸಕ ಸಿ. ಬಿ. ಸುರೇಶ್ ಬಾಬು ಅವರನ್ನು ಆಯ್ಕೆ ಮಾಡಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಹಿರಿಯ ನಾಯಕ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಅವರು ಶಾಸಕಾಂಗ ಪಕ್ಷದ ಉಪನಾಯಕರಾಗಿದ್ದರು. ಆದರೆ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರು ಪರಾಭವಗೊಂಡಿದ್ದು, ಆ ಸ್ಥಾನ ಖಾಲಿ ಉಳಿದಿದೆ.

ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ. ಬಿ. ಸುರೇಶ್‌ಬಾಬು ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ರಾಜಕೀಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಿಸಲು ಅದೇ ಸಮುದಾಯದ ನಾಯಕನನ್ನು ಬಳಸಿಕೊಳ್ಳುವ ಪ್ರಯತ್ನ ಇದಾಗಿದೆ. ಆ ಮೂಲಕ ಸಮುದಾಯದ ಅಸ್ತ್ರವನ್ನು ಪ್ರಯೋಗಿಸಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಚ್.ಡಿ. ಕುಮಾರಸ್ವಾಮಿ ಅವರು ಶಾಸಕಾಂಗ ಪಕ್ಷದ ನಾಯಕರಾದರೆ, ಸುರೇಶ್ ಬಾಬು ಅವರು ಉಪನಾಯಕರಾಗಲಿದ್ದಾರೆ. ಸುರೇಶ್ ಬಾಬು ಉಪನಾಯಕರಾಗಿ ಆಯ್ಕೆ ಮಾಡುವ ಸಂಬಂಧ ಈಗಾಗಲೇ ಚರ್ಚೆಗಳು ನಡೆದಿವೆ. ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸದನದೊಳಗೆ ಅಸ್ತ್ರ ಪ್ರಯೋಗಿಸಲು ಹೆಚ್​ಡಿಕೆ ಸಿದ್ಧತೆ: ಕುಮಾರಸ್ವಾಮಿ ಅವರಿಗೆ ರಾಜಕೀಯವಾಗಿ ಸಿದ್ದರಾಮಯ್ಯ ಅವರು ಬದ್ಧ ವೈರಿಯಾಗಿದ್ದು, ಅವಕಾಶ ಸಿಕ್ಕಾಗಲೆಲ್ಲಾ ಟೀಕಾಪ್ರಹಾರ ನಡೆಸುತ್ತಲೇ ಬಂದಿದ್ದಾರೆ. ಸದನದಲ್ಲಿಯೂ ತಿರುಗೇಟು ನೀಡಲು ಸಮುದಾಯದ ನಾಯಕರಿಗೆ ಅವಕಾಶ ನೀಡಲಾಗಿದೆ. ಸದನದಲ್ಲಿ ಪಕ್ಷವನ್ನು ಸಮರ್ಥಿಸಿಕೊಂಡು ಮುನ್ನಡೆಸಲು ಮುಖ್ಯಮಂತ್ರಿಗಳ ಸಮುದಾಯದ ನಾಯಕರಿಗೆ ಅವಕಾಶ ನೀಡಿರುವುದು ರಾಜಕೀಯವಾಗಿ ಲಾಭವಾಗಲಿದೆ ಎಂಬ ಲೆಕ್ಕಾಚಾರದೊಂದಿಗೆ ಈ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಗೊಂದಲವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿರುವ ಕುಮಾರಸ್ವಾಮಿ ಅವರು, ಸದನದಲ್ಲಿ ಆಡಳಿತ ಪಕ್ಷಕ್ಕೆ ಬಿಸಿಮುಟ್ಟಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿಗಳಿಂದ ಸರ್ಕಾರಕ್ಕೆ ಆಗುವ ನಷ್ಟ, ಜನ ಸಮಾನ್ಯರಿಗೆ ಆಗುವ ತೊಂದರೆ, ಗೊಂದಲ ಎದುರಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರು, ಹೀಗೆ ಮತ್ತಿತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೆಚ್ ಡಿಕೆ ಅಧಿವೇಶನದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ:ಮುಸ್ಲಿಂರಿಗೆ ಹಿಂದಿನ ಸರ್ಕಾರದಿಂದ ಆತಂಕ, ಭಯವಿತ್ತು ಹೀಗಾಗಿ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ: ಗೃಹ ಸಚಿವ ಜಿ ಪರಮೇಶ್ವರ್

ABOUT THE AUTHOR

...view details