ಕರ್ನಾಟಕ

karnataka

ಮದರಸಾಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸಬೇಕು: ಸಚಿವ ಜಮೀರ್ ಅಹಮದ್ ಖಾನ್

By ETV Bharat Karnataka Team

Published : Aug 28, 2023, 10:34 PM IST

ರಾಜ್ಯದ ಎಲ್ಲಾ ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡವನ್ನು ಕಡ್ಡಾಯವಾಗಿ ಕಲಿಸಲೇಬೇಕು ಎಂದು ಅಧಿಕಾರಿಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್
ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು :ಮದರಸಾಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ, ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ರಾಜ್ಯದಲ್ಲಿ 1,265 ವಕ್ಫ್‌ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ 100 ಮದರಸಾಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲಾ ಮದರಸಾಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ಧಪಡಿಸಿ ಎಂದು ಅಧಿಕಾರಿಗಳಿಗೆ ಹೇಳಿದರು. ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರೆ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಸಿಗಲಿವೆ ಎಂದು ಜಮೀರ್​ ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ

ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನದ ಮೊತ್ತ 20 ಲಕ್ಷ ರೂ.ನಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲು ಹಾಗೂ ಐಐಟಿ, ಎನ್​ಐಟಿ ಸೇರಿದಂತೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ 2 ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ 4 ಲಕ್ಷ ರೂ.ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದರಿ ಶಾಲೆಗಳ 9, 10 ಹಾಗೂ 12ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು. ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂಆರ್ ಕೋಡ್ ಸಹ ಮುದ್ರಿಸಿದ್ದು, ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿದರೆ ವಿಡಿಯೋಸಮೇತ ಮಾಹಿತಿ ಲಭ್ಯ ವಾಗಲಿದೆ.

ಕಳೆದ ಎರಡು ವರ್ಷಗಳಲ್ಲಿ ಅಲ್ಪಸಂಖ್ಯಾತ ನಿರ್ದೇಶನಾಲಯ ವತಿಯಿಂದ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು. ಎಷ್ಟು ಮೊತ್ತದ ಕಾಮಗಾರಿ ಕೈಗೊಳ್ಳಲಾಗಿದೆ? ಎಷ್ಟು ಮೊತ್ತ ಪಾವತಿಗೆ ಬಾಕಿ ಇದೆ? ಕಾಮಗಾರಿ ಪ್ರಮಾಣ ವೆಷ್ಟು? ಗುತ್ತಿಗೆ ದಾರರಿಗೆ ಪಾವತಿಸಿರುವ ಮೊತ್ತವೆಷ್ಟು? ಕುರಿತು ಸಮಗ್ರ ವರದಿ ನೀಡುವಂತೆ ಸಚಿವರು ತಿಳಿಸಿದರು.

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್, ವಖ್ಫ್ ಮಂಡಳಿ ಕಾರ್ಯನಿರ್ವಾಹಕ ಖಾನ್ ಫರ್ವಜ್ ಇದ್ದರು.

ಇದನ್ನೂ ಓದಿ :ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಆದೇಶ ಅಂತಿಮವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ABOUT THE AUTHOR

...view details