ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಸಂಸದರು ಈಗ ಕೇಂದ್ರ ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸುತ್ತಿದ್ದಾರೆ. ಬಿಜೆಪಿಯಿಂದ ಗೆದ್ದಿರುವ 25 ಲೋಕಸಭಾ ಸದಸ್ಯರ ಪೈಕಿ ಸುಮಾರು 18 ಸಂಸದರು ಪ್ರಧಾನಿ ಮೋದಿ ಸಂಪುಟ ಸೇರಲು ತಮ್ಮದೇ ಆದ ನೆಟ್ವರ್ಕ್ಗಳ ಮೂಲಕ ಕಸರತ್ತು ನಡೆಸಿದ್ದಾರೆ.
ಶೋಭಾ ಕರಂದ್ಲಾಜೆ, ಡಿ.ವಿ ಸದಾನಂದಗೌಡ, ಅನಂತಕುಮಾರ ಹೆಗಡೆ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ಪಿ.ಸಿ.ಗದ್ದಿಗೌಡರ್, ಶಿವಕುಮಾರ್ ಉದಾಸಿ, ವಿ.ಶ್ರೀನಿವಾಸ ಪ್ರಸಾದ್ ಲಾಬಿ ನಡೆಸುತ್ತಿರುವವರಲ್ಲಿ ಪ್ರಮುಖರು. ರಾಜ್ಯದಲ್ಲಿ ಬಿಜೆಪಿ ಸಂಸದರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ಕೇಂದ್ರದಲ್ಲಿ ಸಚಿವ ಸ್ಥಾನ ಕೊಡಿಸಲು ಒತ್ತಡ ಹಾಕುತ್ತಿದ್ದಾರೆ. ಕೇಂದ್ರದಲ್ಲಿ ತಮಗೆ ಸಂಪರ್ಕವಿರುವ ಬಿಜೆಪಿ ವರಿಷ್ಠರ ಜತೆ ಸಹ ಮಾತುಕತೆ ನಡೆಸಿ ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆ. ಇನ್ನು ಕೆಲವರು ಸಂಘ ಪರಿವಾರದ ಮೂಲಕವೂ ಲಾಬಿಯಲ್ಲಿ ತೊಡಗಿದ್ದಾರೆಂದು ಹೇಳಲಾಗುತ್ತಿದೆ.
ಲಿಂಗಾಯತ ಸಮುದಾಯದಿಂದ ಬೆಳಗಾವಿ ಸಂಸದ ಸುರೇಶ ಅಂಗಡಿ, ಹಾವೇರಿಯ ಶಿವಕುಮಾರ ಉದಾಸಿ, ದಾವಣಗೆರೆಯ ಜಿ.ಎಂ.ಸಿದರದೇಶ್ವರ್, ಶಿವಮೊಗ್ಗದಿಂದ ಬಿ.ವೈ.ರಾಘವೇಂದ್ರ, ತುಮಕೂರಿನ ಜಿ.ಎಸ್.ಬಸವರಾಜು ಪ್ರಯತ್ನ ನಡೆಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದಿಂದ ಧಾರವಾಡ ಸಂಸದ ಪ್ರಹ್ಲಾದ್ ಜೋಷಿ, ಉತ್ತರ ಕನ್ನಡದ ಅನಂತಕುಮಾರ್ ಹೆಗಡೆ. ಒಕ್ಕಲಿಗರ ಕೋಟಾದಿಂದ ಡಿ.ವಿ.ಸದಾನಂದಗೌಡ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಸಚಿವ ಸ್ಥಾನದ ಮೇಲೆ ಆಸೆ ಇಟ್ಟುಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.