ಬೆಂಗಳೂರು : ಇಂದು ಮಧ್ಯಾಹ್ನ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜೆಡಿಎಸ್ನ ಮಹತ್ವಾಕಾಂಕ್ಷೆಯ ಜನತಾ ಮಿತ್ರ ಸಮಾರೋಪ ಸಮಾರಂಭವು ನಡೆಯಲಿದ್ದು, ಶುಕ್ರವಾರ ಸಂಜೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈದಾನಕ್ಕೆ ಭೇಟಿ ನೀಡಿ ವೇದಿಕೆ ಸೇರಿದಂತೆ ಅಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.
ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದ್ದು, ವೇದಿಕೆ ಹಿಂಭಾಗದಲ್ಲಿ ಅಷ್ಟೇ ದೊಡ್ಡ ಪ್ರಮಾಣದ ಎಲ್ಇಡಿ ಪರದೆಯನ್ನು ಅಳವಡಿಸಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಸಮಾರಂಭ ಆರಂಭವಾಗಲಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಭೋಜೆಗೌಡ, ಕೆ.ಎನ್.ತಿಪ್ಪೇಸ್ವಾಮಿ, ಜೆಡಿಎಸ್ನ ನಗರ ಘಟಕದ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಹಲವು ಮುಖಂಡರು ಸಮಾವೇಶದ ಸ್ಥಳವನ್ನು ವೀಕ್ಷಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಜನತಾ ಮಿತ್ರದ ಸಮಾರೋಪ ಸಮಾರಂಭ ಮಳೆಯಿಂದಾಗಿ ಮೂರು ಬಾರಿ ಮುಂದೂಡಲ್ಪಟ್ಟಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದ ಮೂಲಕ ಬೆಂಗಳೂರಿನ ಸಮಸ್ಯೆ ಅನಾವರಣವಾಗಲಿದೆ. ಸಾವಿರಾರು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಭೆಯಲ್ಲಿ ಅನಾವರಣವಾಗಲಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ಒಂದು ಲಕ್ಷ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.