ಕರ್ನಾಟಕ

karnataka

By

Published : Jan 11, 2023, 10:46 PM IST

ETV Bharat / state

‘ವಿಶೇಷ ತುರ್ತು ಪ್ರತಿಕ್ರಿಯೆ ಮೇಜಿನ ಸೇವೆ’ ಆರಂಭಿಸಿದ್ದೇವೆ: ಹೈಕೋರ್ಟ್​ಗೆ ಸರ್ಕಾರದ ಪ್ರಮಾಣಪತ್ರ

ವಿಶೇಷ ತುರ್ತು ಪ್ರತಿಕ್ರಿಯೆ ಮೇಜಿನ ಸೇವೆ’ ಆರಂಭಿಸಲಾಗಿದೆ ಎಂದು ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ - ರಾಜ್ಯ ಸರ್ಕಾರವು ಅರ್ಜಿಯಲ್ಲಿ ನಮೂದಿಸಿದ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ಸಕಾರಾತ್ಮಕ ಸ್ಪಂದನೆ.

launched-special-emergency-response-desk-service-govt
‘ವಿಶೇಷ ತುರ್ತು ಪ್ರತಿಕ್ರಿಯೆ ಮೇಜಿನ ಸೇವೆ’ ಆರಂಭಿಸಿದ್ದೇವೆ: ಸರ್ಕಾರ

ಬೆಂಗಳೂರು: ಸಂಚಾರ ದಟ್ಟಣೆ ಮಧ್ಯೆ ಗೋಲ್ಡನ್ ಅವಧಿಯಲ್ಲಿ ರೋಗಿಗಳು ಅಥವಾ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಾಗ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ‘ವಿಶೇಷ ತುರ್ತು ಪ್ರತಿಕ್ರಿಯೆ ಮೇಜಿನ ಸೇವೆ’ ಆರಂಭಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಈ ಸಂಬಂಧ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆಗೆ ಹಾಜರಾದ ಸರ್ಕಾರಿ ವಕೀಲರಾದ ಪ್ರತಿಮಾ ಹೊನ್ನಾಪುರ, ಕರ್ನಾಟಕ ರಸ್ತೆ ಸುರಕ್ಷತೆ ಪ್ರಾಧಿಕಾರದ ಜಂಟಿ ಆಯುಕ್ತ ಜೆ. ಪುರುಷೋತ್ತಮ್ ಮತ್ತು ರಾಜ್ಯ ಆರೋಗ್ಯ ಹಾಗೂ ಕಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಉಪ ಕಾರ್ಯದರ್ಶಿ ನಾಗರಾಜ್ ಸಲ್ಲಿಸಿರುವ ಪ್ರತ್ಯೇಕ ಪ್ರಮಾಣ ಪತ್ರ ಸಲ್ಲಿಸಿದರು.

ವಾಹನ ಸಾಫ್ಟ್‌ವೇರ್: ಹೊಸ ಆಂಬ್ಯುಲೆನ್ಸ್​ ನೋಂದಣಿಗೆ ಜಿಪಿಎಸ್ ಉಪಕರಣ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ‘ವಾಹನ ಸಾಫ್ಟ್‌ವೇರ್’ ಆಂಬ್ಯುಲೆನ್ಸ್​ನಲ್ಲಿ ಜಿಪಿಎಸ್ ದತ್ತಾಂಶದ ಕುರಿತು ನಿರ್ವಹಣೆ ಮಾಡಲಾಗುವುದು ಮತ್ತು ಅದನ್ನು ಕಾಲಕಾಲಕ್ಕೆ ಪರಿಶೀಲಿಸಲಾಗುವುದು. ಇನ್ನೂ 108 ಸೇವಾದಾರರನ್ನು ಆಯ್ಕೆ ಮಾಡಲು 21 ದಿನಗಳ ಅಲ್ಪಾವಧಿ ಟೆಂಡರ್ ಕರೆಯಲು ಸರ್ಕಾರ ಅನುಮತಿ ನೀಡಿದೆ.

ಸ್ಥಿರ ದೂರವಾಣಿ ಸಂಖ್ಯೆಯ ವ್ಯವಸ್ಥೆ: ಅದರಂತೆ ಜನವರಿ 9 ರಂದು ಟೆಂಡರ್ ಆಹ್ವಾನಿಸಲಾಗುವುದು. ಫೆಬ್ರವರಿ 2 ರಂದು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ. ಆ್ಯಂಬುಲೆನ್ಸ್‌ಗಳು ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳುವುದನ್ನು ತಪ್ಪಿಸಲು ಸಂಚಾರ ಪೊಲೀಸರಯಿಂದ ‘ವಿಶೇಷ ತುರ್ತು ಪ್ರತಿಕ್ರಿಯೆ ಮೇಜಿನ ಸೇವೆ’ (ಇಆರ್‌ಎಸ್‌ಎಸ್) ಮತ್ತು ಸ್ಥಿರ ದೂರವಾಣಿ ಸಂಖ್ಯೆಯ ವ್ಯವಸ್ಥೆ ಮಾಡಲಾಗಿದೆ.

ಆಂಬ್ಯುಲೆನ್ಸ್​​ನಗಳು ಸಂಚಾರ ಆರಂಭಿಸಿದಾಗ ಮತ್ತು ರೋಗಿಗಳನ್ನು ತುರ್ತು ಚಿಕಿತ್ಸೆಗೆ ರವಾನಿಸುತ್ತಿದ್ದಾಗ ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿದರೆ, ವಾಹನ ದಟ್ಟಣೆ ನಿವಾರಿಸಲು ಇಆರ್‌ಎಸ್‌ಎಸ್ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು. ಈ ಸಹಾಯವಾಣಿ ಸಂಖ್ಯೆಯನ್ನು ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪರ ಮತ್ತು ಕೋಲಾರ ಜಿಲ್ಲೆಗಳ ಎಲ್ಲ ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳ ಆಂಬ್ಯುಲೆನ್ಸ್​​ಗಳಿಗೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

ಅರ್ಜಿ ಇತ್ಯರ್ಥ ಪಡಿಸಿದ ನ್ಯಾಯಪೀಠ: ಈ ಪ್ರಮಾಣ ಪತ್ರ ದಾಖಲಿಸಿಕೊಂಡ ಹೈಕೋರ್ಟ್, ರಾಜ್ಯ ಸರ್ಕಾರವು ಅರ್ಜಿಯಲ್ಲಿ ನಮೂದಿಸಿದ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದೆ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸರ್ಕಾರದ ಸ್ಪಂದನೆ ಮತ್ತು ಕೈಗೊಂಡ ಕ್ರಮಗಳು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿತು. ಅಲ್ಲದೇ, ವೈದ್ಯಕೀಯ ತುರ್ತು ಸೇವೆಗಳನ್ನು ಸಾರ್ವಜನಿಕರಿಗೆ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಈ ಕ್ರಮಗಳನ್ನು ನಿಗದಿತ ಅವಧಿಯಲ್ಲಿ ರಾಜ್ಯ, ಜಿಲ್ಲೆ ಮತ್ತು ವಲಯ ಮಟ್ಟದಲ್ಲಿ ಸರ್ಕಾರ ಪರಿಣಾಮಕಾರಿಯಾಗಿ ಜಾರಿಗೊಳಿಸಲಿದೆ ಎಂದು ನಂಬಿಕೆ ವ್ಯಕ್ತಪಡಿಸಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.

ತುರ್ತು ಪ್ರತಿಕ್ರಿಯೆ ಮೇಜು ಸಂಖ್ಯೆಗಳು ರೋಗಿಯನ್ನು ತುರ್ತು ಸೇವೆಗಾಗಿ ರವಾನಿಸುತ್ತಿದ್ದಾಗ ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡರೆ, ರೋಗಿಗಳ ಕುಟುಂಬಸ್ಥರು, ಆಂಬ್ಯುಲೆನ್ಸ್​ ಸಿಬ್ಬಂದಿ ವಿಶೇಷ ತುರ್ತು ಪ್ರತಿಕ್ರಿಯೆ ಮೇಜು ಸಂಖ್ಯೆ 112 ಅಥವಾ ಸ್ಥಿರ ದೂರವಾಣಿ ಸಂಖ್ಯೆಗಳು 080-22943131, 080-22943030, 080-22943663, 080-22943684ಗೆ ಕರೆ ಮಾಡಿ ಸಂಚಾರ ದಟ್ಟಣೆ ನಿವಾರಿಸಲು ಕೋರಬಹುದಾಗಿದೆ ಎಂದು ಪ್ರಮಾಣ ಪತ್ರದಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ:ಅಮೆರಿಕದಲ್ಲಿ ತಾಂತ್ರಿಕ ದೋಷದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ: ವ್ಯವಸ್ಥೆ ವಿರುದ್ಧ ಹರಿಹಾಯ್ದ ಪ್ರಯಾಣಿಕರು

ABOUT THE AUTHOR

...view details