ಬೆಂಗಳೂರು :ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡುವ ವ್ಯವಸ್ಥೆ ಇರುವುದು ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಇಂದು ನಗರದ ಲಾಲ್ಬಾಗ್ನ ಡಾ. ಎಂ ಹೆಚ್ ಮರೀಗೌಡ ಸಭಾಂಗಣದಲ್ಲಿ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆ ವಿ ನಾಗರಾಜು ಪದಗ್ರಹಣ ಸ್ವೀಕರಿಸಿದರು. ಸಮಾರಂಭದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾವು ಬೆಳೆಗಾರರಿಗೆ ನಿಗಮದಿಂದ ಹೆಚ್ಚಿನ ಪ್ರಯೋಜನ ಆಗಬೇಕಿದೆ. ತಳಿ ಆಯ್ಕೆಯಿಂದ ಮಾರುಕಟ್ಟೆ ಒದಗಿಸುವ ತನಕ ನಿಗಮವು ಬೆಳೆಗಾರ ಮತ್ತು ಗ್ರಾಹಕರಿಗೆ ಸೇತುವೆಯಂತೆ ಕಾರ್ಯ ನಿರ್ವಹಿಸಬೇಕಿದೆ.
ವಯಸ್ಸಿನ ಬೇಧವಿಲ್ಲದೆ ಎಲ್ಲರೂ ತಿನ್ನುವ ಮಾವಿನಹಣ್ಣಿಗೆ ವಿದೇಶಿ ಮಾರುಕಟ್ಟೆ ಒದಗಿಸುವ ಕೆಲಸ ಆಗಬೇಕು. ನಿಗಮಕ್ಕೆ ಹೆಚ್ಚಿನ ಅನುದಾನ ಸೇರಿ ಎಲ್ಲಾ ರೀತಿಯ ನೆರವನ್ನೂ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಾಗರಾಜು ಮಾತನಾಡಿ, ಸಹಕಾರ ಕ್ಷೇತ್ರದಲ್ಲಿನ ಅನುಭವ ಮತ್ತು ಮಾವು ಬೆಳೆಗಾರರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸುವುದಾಗಿ ಹಾಗೂ ತಮಗೆ ಈ ಅವಕಾಶ ದೊರಕಿಸಿಕೊಟ್ಟಿರುವ ಸಿಎಂ ಮತ್ತು ಸಚಿವ ಸುಧಾಕರ್ ಅವರ ನಂಬಿಕೆಗೆ ಚ್ಯುತಿಯಾಗದಂತೆ ಕಾರ್ಯ ನಿರ್ವಹಿಸುತ್ತೇನೆ ಎಂದರು.
ನಿಗಮದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಮುಖಂಡರಾದ ರಾಮಲಿಂಗಪ್ಪ, ಚನ್ನ ಕೃಷ್ಣಾರೆಡ್ಡಿ, ನಾರಾಯಣಸ್ವಾಮಿ, ನಂಜುಂಡಪ್ಪ, ನಿಗಮದ ವ್ಯವಸ್ಥಾಪಕ ನಿರ್ದೇಶಕ ನಾಗರಾಜು, ಹಿರಿಯ ತಜ್ಞ ಹಿತ್ತಲಮನಿ ಹಾಗೂ ಮಾವು ಬೆಳೆಗಾರರು ಉಪಸ್ಥಿತರಿದ್ದರು.