ಕರ್ನಾಟಕ

karnataka

ಸಂಚಾರಿ ವಿಜಯ್‌ ನಿಧನಕ್ಕೆ ಅಶ್ವತ್ಥ ನಾರಾಯಣ, ಹೆಚ್​​ಡಿಕೆ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ

By

Published : Jun 15, 2021, 9:25 AM IST

ನಟ ಸಂಚಾರಿ ವಿಜಯ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಸಂತಾಪ ಸೂಚಿಸಿದ್ದಾರೆ.

Many celebrities have condoled the death of actor Sanjay Vijay
ಅಗಲಿದ ಸಂಚಾರಿ ವಿಜಯ್‌

ಬೆಂಗಳೂರು:ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಸಂಚಾರಿ ವಿಜಯ್‌ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶನಿವಾರ ರಾತ್ರಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್‌ ಬದುಕಿ ಬರುತ್ತಾರೆ ಎಂಬ ವಿಶ್ವಾಸ, ನಂಬಿಕೆ ನನಗಿತ್ತು. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಂತೆ ನಾನು ಕೂಡ ಪ್ರಾರ್ಥನೆ ಮಾಡಿದ್ದೆ. ಸೋಮವಾರ ಆಸ್ಪತ್ರೆಗೂ ಭೇಟಿ ನೀಡಿದಾಗ ವೆಂಟಿಲೇಟರ್‌ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಉಸಿರಾಡುತ್ತಿದ್ದರು. ಹೀಗಾಗಿ ಅವರು ಬದುಕುಳಿಯುತ್ತಾರೆಂಬ ನಿರೀಕ್ಷೆ ಇತ್ತು. ಕೆಲ ದಿನಗಳ ಚಿಕಿತ್ಸೆ ನಂತರ ಅವರು ಮನೆಗೆ ಮರಳಲಿದ್ದಾರೆಂಬ ವಿಶ್ವಾಸ ಬಂದಿತ್ತು. ಆದರೆ, ಎಲ್ಲರ ನಿರೀಕ್ಷೆ ಹುಸಿ ಮಾಡಿ ಅವರು ಅಗಲಿದ್ದಾರೆ. ಇದು ನನಗೆ ವೈಯಕ್ತಿಕವಾಗಿ ಬಹಳಷ್ಟು ದುಃಖ ಉಂಟು ಮಾಡಿದೆ.

ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಹಿರಿಮೆ ಅವರದ್ದು. ʼನಾನು ಅವನಲ್ಲ… ಅವಳುʼ ಚಿತ್ರದಲ್ಲಿ ಅವರದ್ದು ಅಮೋಘ ನಟನೆ. ಅಷ್ಟೇ ಅಲ್ಲ ಅವರು ನಟಿಸಿದ ಎಲ್ಲ ಪಾತ್ರಗಳಲ್ಲೂ ಜೀವಿಸುತ್ತಿದ್ದರು. ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಭರಿಸಲಾಗದ ನಷ್ಟ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದ ಸದಸ್ಯರಿಗೆ, ಅಭಿಮಾನಿಗಳಿಗೆ ಹಾಗೂ ಚಿತ್ರರಂಗಕ್ಕೆ ದಯಪಾಲಿಸಲಿ ಎಂದು ಡಿಸಿಎಂ ಪ್ರಾರ್ಥನೆ ಮಾಡಿದ್ದಾರೆ.

ಹೆಚ್​ಡಿಕೆ ಸಂತಾಪ: ವೈವಿಧ್ಯಮಯ ಪಾತ್ರಗಳ ಬೆನ್ನೇರಿ ಸಂಚರಿಸುತ್ತಿದ್ದ, ಸಾಮಾಜಿಕ ಕಳಕಳಿಯನ್ನೂ ಹೊಂದಿದ್ದ, ಅಪರೂಪದ ವ್ಯಕ್ತಿತ್ವದ ಸಂಚಾರಿ ವಿಜಯ್ ನಿರ್ಗಮನ ದುಃಖ ತರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ನಟ ಶಂಕರ್ ನಾಗ್ ಇದ್ದಿದ್ದರೆ ಕನ್ನಡ ಚಿತ್ರರಂಗ ಮಹತ್ತರ ಸ್ಥಾನಕ್ಕೇರುತ್ತಿತ್ತು ಎಂದು ನಾವೆಲ್ಲ ಇಂದಿಗೂ ಬೇಸರಿಸಿಕೊಳ್ಳುತ್ತೇವೆ. ಭರವಸೆಯ ನಟ ವಿಜಯ್ ಕೂಡ ಅಂಥದ್ದೇ ನಿರಾಶೆ ಮೂಡಿಸಿಬಿಟ್ಟರು ಎಂದು ಹೇಳಿದ್ದಾರೆ.

ಸರಳ, ಸಜ್ಜನಿಕೆಯ ವಿಜಯ್‌ ಅವರು ಕೋವಿಡ್‌ ಪರಿಹಾರ ಕಾರ್ಯಗಳಲ್ಲಿಯೂ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು ಎಂದು ಅವರ ಸ್ನೇಹಿತರು ಹೇಳಿದ್ದಾರೆ. ಇದು ಅವರ ಜನಪರ ನಿಲುವಿಗೆ ಹಿಡಿದ ಕನ್ನಡಿ. ವಿಜಯ್‌ ಸಾವಿನ ನೋವು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಿಲಿ. ಸಂಚಾರಿ ವಿಜಯ್‌ ಅವರ ಕುಟುಂಬಸ್ಥರ ದುಃಖ ನಮ್ಮದೂ ಆಗಿದೆ ಎಂದು ಟ್ವೀಟ್ ಮೂಲಕ ಧೈರ್ಯ ತುಂಬಿದ್ದಾರೆ.

ಡಿ.ಕೆ.ಶಿವಕುಮಾರ್ ಸಂತಾಪ:ಸಂಚಾರಿ ವಿಜಯ್ ಅವರದು ಇನ್ನೂ ಚಿಕ್ಕ ವಯಸ್ಸು. ಈಗಷ್ಟೇ ಚಿತ್ರರಂಗದಲ್ಲಿ ನೆಲೆ ನಿಲ್ಲುತ್ತಿದ್ದರು. ಯಾವುದೇ ಹಿನ್ನೆಲೆ ಬೆಂಬಲ ಇಲ್ಲದೆ ತನ್ನ ಕಲೆ, ಪ್ರತಿಭೆ ಮೂಲಕ ಬೆಳೆಯುತ್ತಿದ್ದ ವಿಜಯ್ ಅವರ ಸಾವಿನ ಸುದ್ದಿ ಕೇಳಿ ನೋವಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ.

ಮಾಡಿದ್ದು ಕೆಲವೇ ಚಿತ್ರಗಳಾದರೂ ತಮ್ಮ ಅಮೋಘ ನಟನೆ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ತಮ್ಮ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿಯನ್ನೂ ಗಳಿಸಿದ್ದರು. ಕೋವಿಡ್ ಸಂಕಷ್ಟದಲ್ಲಿ ತಮ್ಮ ಸ್ನೇಹಿತರ ಜತೆಗೂಡಿ ಬಡವರಿಗೆ ಆಹಾರ ಕಿಟ್ ನೀಡುವುದು, ಆಕ್ಸಿಜನ್ ಸರಬರಾಜು ಮಾಡುವುದು ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡಿ ಗಮನ ಸೆಳೆದಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಅವರ ಬದುಕು ಈ ರೀತಿ ಅಕಾಲಿಕ ಅಂತ್ಯ ಕಂಡಿರುವುದು ದುರಂತ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಅವರ ಅಂಗಾಂಗಗಳ ದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದು, ವಿಜಯ್ ಅವರ ಸಾವಿನಲ್ಲೂ ಸಾರ್ಥಕತೆ ಮೆರೆದು ಸಮಾಜಕ್ಕೆ ಸ್ಫೂರ್ತಿಯಾಗಿದ್ದಾರೆ. ವಿಜಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮುಖಂಡರ ಸಂತಾಪ:

ನಟ ಸಂಚಾರಿ ವಿಜಯ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಸಂತಾಪ ಸೂಚಿಸಿದ್ದಾರೆ.

ABOUT THE AUTHOR

...view details