ಕರ್ನಾಟಕ

karnataka

By ETV Bharat Karnataka Team

Published : Sep 2, 2023, 6:48 PM IST

ETV Bharat / state

ಬನ್ನೇರುಘಟ್ಟ, ಮೈಸೂರು ಮೃಗಾಲಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್.. ಬೀದರ್​​ನಲ್ಲಿ ಮೃಗಾಲಯ ಸ್ಥಾಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲು ಖಂಡ್ರೆ ಸೂಚನೆ

ಸರ್ಕಾರ ಬನ್ನೇರುಘಟ್ಟ, ಮೈಸೂರು ಮೃಗಾಲಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಹಾಕಿಕೊಂಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.

Minister Ishwar Khandre Meeting
Minister Ishwar Khandre Meeting

ಬೆಂಗಳೂರು : ಮೈಸೂರಿನಲ್ಲಿರುವ ಜಗದ್ವಿಖ್ಯಾತ ಚಾಮರಾಜೇಂದ್ರ ಮೃಗಾಲಯ ಮತ್ತು ಬೆಂಗಳೂರು ಹೊರ ವಲಯ ಬನ್ನೇರುಘಟ್ಟದಲ್ಲಿರುವ ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಮಹಾ ಯೋಜನೆ (ಮಾಸ್ಟರ್ ಪ್ಲಾನ್) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಮೃಗಾಲಯಗಳ ಬಗ್ಗೆ ವಿಶ್ವಾದ್ಯಂತ ಉತ್ತಮ ಹೆಸರಿದೆ. ಮೃಗಾಲಯದಲ್ಲಿರುವ ಪ್ರಾಣಿಗಳ ಸಂತಾನೋತ್ಪತ್ತಿಯ ಪ್ರಮಾಣವೂ ಉತ್ತಮವಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ವನ್ಯಮೃಗಗಳ ರಕ್ಷಣೆಗೆ ಮತ್ತು ಇಂದಿನ ಮಕ್ಕಳಿಗೆ ವಿವಿಧ ಪ್ರಾಣಿ ಸಂಕುಲ ಮತ್ತು ಸಸ್ಯ ಸಂಕುಲದ ಬಗ್ಗೆ ಮಾಹಿತಿ ನೀಡುವ ಮೃಗಾಲಯಗಳನ್ನು ಇನ್ನೂ ಹೆಚ್ಚು ಮಾಹಿತಿಪೂರ್ಣ ಮತ್ತು ಪ್ರೇಕ್ಷಕ ಸ್ನೇಹಿಯಾಗಿ ಮಾಡಲು ಸಮಗ್ರ ನೀತಿ ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದರು. ಗದಗ, ಕಲಬುರಗಿಯಲ್ಲಿರುವ ಮೃಗಾಲಯಗಳನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದ್ದು, ಈ ಬಗ್ಗೆ ಸಮಗ್ರ ವರದಿ ತಯಾರಿಸಿ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ನಡೆದ ಸಭೆ

ಬೀದರ್ ಜಿಲ್ಲೆಯಲ್ಲಿ ದಟ್ಟ ಅಡವಿ ಇಲ್ಲದ ಕಾರಣ ಮಕ್ಕಳಿಗೆ ವನ್ಯ ಮೃಗಗಳ ಬಗ್ಗೆ ನೈಜ ಮಾಹಿತಿ ಇಲ್ಲ. ಬೀದರ್​ನಲ್ಲಿ ಕೃಷ್ಣ ಮೃಗಗಳ ಸಂರಕ್ಷಿತ ಪ್ರದೇಶ ನಿರ್ಮಿಸುವ ಬಗ್ಗೆ ಈ ಬಾರಿಯ ಬಜೆಟ್​​ ನಲ್ಲಿ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು, ಇದರ ಜೊತೆಗೆ ಜಿಲ್ಲೆಯಲ್ಲಿ ಮೃಗಾಲಯ ಸ್ಥಾಪನೆ ಮಾಡಿದರೆ, ಇಂದಿನ ಪೀಳಿಗೆಗೆ ವನ್ಯ ಮೃಗಗಳನ್ನು ನೋಡಲು ಮತ್ತು ಅವುಗಳ ಬಗ್ಗೆ ತಿಳಿಯಲು ಅವಕಾಶ ಆಗುತ್ತದೆ. ಈ ಹಿನ್ನೆಲೆಯಲ್ಲಿ ಮೃಗಾಲಯ ಸ್ಥಾಪನೆಗೆ ಕ್ರಿಯಾ ಯೋಜನೆ ರೂಪಿಸುವಂತೆ ಆದೇಶಿಸಿದರು. ಇದೇ ಸಂದರ್ಭದಲ್ಲಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ವಾರ್ತಾ ಪತ್ರವನ್ನು ಸಚಿವರು ಬಿಡುಗಡೆ ಮಾಡಿದರು.

ಪರಿಸರ ಪ್ರವಾಸೋದ್ಯಮಕ್ಕೆ ಹೊಸ ನೀತಿ:ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮತ್ತೊಂದು ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದರೂ, ಅದರ ಸಮರ್ಪಕ ಬಳಕೆ ಆಗಿಲ್ಲ. ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೊಸ ನೀತಿ ತರುವ ಅಗತ್ಯವಿದೆ ಎಂದು ಅವರು ಹೇಳಿದರು.

ಮೈಸೂರು ಮೃಗಾಲಯ ವಾರ್ತಾ ಪತ್ರ, ವಾರ್ಷಿಕ ವರದಿ ಬಿಡುಗಡೆ ಮಾಡಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸಾಹಸ ಪ್ರವಾಸೋದ್ಯಮವನ್ನೂ ಪರಿಸರ ಪ್ರವಾಸೋದ್ಯಮದ ಭಾಗ ಮಾಡಬಹುದು. ಆಗ ಇದು ಹೆಚ್ಚು ಜನರನ್ನು ಆಕರ್ಷಿಸುತ್ತದೆ. ರಿವರ್ ರಾಫ್ಟಿಂಗ್, ಚಾರಣವೇ ಮೊದಲಾದ ಪರಿಸರ ಸಂಬಂಧಿತ ಪ್ರವಾಸೋದ್ಯಮಕ್ಕೆ ಇಂದಿನ ಯುವಜನರಲ್ಲಿ ಹೆಚ್ಚಿನ ಆಸಕ್ತಿ ಇದೆ. ಹೀಗಾಗಿ ಅರಣ್ಯ ಪ್ರದೇಶದೊಳಗೆ ಇರಬಹುದಾದ ಇಂತಹ ತಾಣಗಳಲ್ಲಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಹೊಸ ನೀತಿ ರೂಪಿಸಲು ವರದಿ ಸಲ್ಲಿಸುವಂತೆ ತಿಳಿಸಿದರು. ಈ ಸಂಬಂಧ ಪರಿಸರ ತಜ್ಞರು, ಪ್ರವಾಸೋದ್ಯಮ ಇಲಾಖೆ ಮತ್ತಿತರ ಬಾಧ್ಯಸ್ಥರೊಂದಿಗೆ ಚರ್ಚಿಸಿ ರೂಪುರೇಷೆ ರೂಪಿಸುವಂತೆ ತಿಳಿಸಿದರು.

ಕರ್ನಾಟಕದಲ್ಲಿ 300 ಕಿ.ಮೀ.ಗೂ ಹೆಚ್ಚಿನ ಕರಾವಳಿ ಇದ್ದು, ಇಲ್ಲಿಯೂ ಪರಿಸರ ಪ್ರವಾಸೋದ್ಯಮಕ್ಕೆ ಅವಕಾಶಗಳು ಹೆಚ್ಚಾಗಿವೆ. ಈ ಸಾಮರ್ಥ್ಯದ ಸದ್ಬಳಕೆಗೆ ಹೆಚ್ಚಿನ ಹಣಕಾಸಿನ ಹೂಡಿಕೆ ಬೇಕಾಗುತ್ತದೆ. ಬಂಡವಾಳ ಆಕರ್ಷಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆಯೂ ಸಮಗ್ರ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ:ಸೆಪ್ಟೆಂಬರ್ 4ರಂದು ಬರಪೀಡಿತ ತಾಲೂಕಗಳ ಹೆಸರು ಘೋಷಣೆ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details