ಬೆಂಗಳೂರು: ಕೇಂದ್ರ ಸರ್ಕಾರದ ಸಹಭಾಗಿತ್ವದೊಂದಿಗೆ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನ ಬೆಳವಾಡಿ ಬಳಿ ನಿರ್ಮಿಸಲು ಉದ್ದೇಶಿಸಿರುವ ಮೈಸೂರು ಮೆಗಾ ಸಿಲ್ಕ್ ಕ್ಲಸ್ಟರ್ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸೂಚನೆ ನೀಡಿದ್ದಾರೆ.
ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ವಿಕಾಸಸೌಧದಲ್ಲಿ ಕ್ಲಸ್ಟರ್ನ ಸದಸ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಸಹಭಾಗಿತ್ವದ ಈ ಮಹತ್ವಾಕಾಂಕ್ಷೆ ಯೋಜನೆ ಭೂಮಿ ಗೊಂದಲದಿಂದ ಸಾಕಷ್ಟು ವಿಳಂಬವಾಗಿದೆ.
ಪ್ರಸ್ತುತ ಈ ಯೋಜನೆ ಅನುಷ್ಠಾನಕ್ಕೆ ಇದ್ದ ಅಡ್ಡಿ ಆತಂಕಗಳು ಬಗೆಹರಿದಿವೆ, ಆ ಭಾಗದ ಸಂಸದರಾದ ಪ್ರತಾಪ್ ಸಿಂಹ ಅವರು ಉತ್ಸುಕರಾಗಿದ್ದು, ಕೇಂದ್ರ, ರಾಜ್ಯದೊಂದಿಗೆ ಸಮನ್ವಯ ಸಾಧಿಸಲು ಅನುಕೂಲವಾಗಿದೆ, ಕೇಂದ್ರ ಸರ್ಕಾರ ಈಗ ಮೊದಲ ಕಂತಿನ ಅನುದಾನ ಬಿಡುಗಡೆಗೊಳಿಸಿದ್ದು, ಅಧಿಕಾರಿಗಳು ಮತ್ತು ಕ್ಲಸ್ಟರ್ನ ಸದಸ್ಯರು ಕಾರ್ಯಪ್ರವೃತರಾಗಿ ಶೀಘ್ರವಾಗಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದರು.