ಬೆಂಗಳೂರು : 371ಜೆ ಅಡಿ ಆದಷ್ಟು ಬೇಗ ಹೈದರಾಬಾದ್ ಕರ್ನಾಟಕ ಭಾಗದ ಸರ್ಕಾರದ ಎಲ್ಲಾ ಇಲಾಖೆಗಳ ಉದ್ಯೋಗದಲ್ಲಿ ಶೇ.75-85ರಷ್ಟು ಹಾಗೂ ಉಳಿದ ಜಿಲ್ಲೆಗಳಲ್ಲಿ ಶೇ.8ರಷ್ಟು ಮೀಸಲಾತಿ ಪ್ರಮಾಣ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ನಿಯಮ 72ರಡಿ ಗಮನ ಸೆಳೆಯುವ ಸೂಚನೆಯಡಿ ವಿಷಯ ಮಂಡಿಸಿದ ಕಾಂಗ್ರೆಸ್ ಸದಸ್ಯ ಯು.ಬಿ ವೆಂಕಟೇಶ್, ಹೈದರಾಬಾದ್ ಕರ್ನಾಟಕ ಭಾಗದ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಉದ್ಯೋಗದಲ್ಲಿ ಮೀಸಲಾತಿ ಪ್ರಮಾಣ ಶೇ.100ಕ್ಕೆ 100ರಷ್ಟು ಹಾಗೂ ಉಳಿದ ಜಿಲ್ಲೆಗಳಲ್ಲಿ ಶೇ.8ರಷ್ಟನ್ನು ಅನುಷ್ಠಾನಕ್ಕೆ ತರುವಲ್ಲಿ ವಿಳಂಬ ಧೋರಣೆ ತಾಳಿದ್ದು, ಕೂಡಲೇ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಸರ್ಕಾರದ ಗಮನ ಸೆಳೆದರು.
ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013ರ ಕಂಡಿಕೆ 3ರಲ್ಲಿ ಹೈದ್ರಾಬಾದ್-ಕರ್ನಾಟಕ ಪ್ರದೇಶದಲ್ಲಿರುವ ಸಿವಿಲ್ ಸೇವಾ ಹುದ್ದೆಗಳಲ್ಲಿನ ಗ್ರೂಪ್-ಎ (ಕಿರಿಯ ಶ್ರೇಣಿ) ಮತ್ತು ಗ್ರೂಪ್-ಬಿ ಹುದ್ದೆಗಳಲ್ಲಿ ಶೇ.75ರಷ್ಟು ಹುದ್ದೆಗಳನ್ನು, ಗ್ರೂಪ್-ಸಿ ಹುದ್ದೆಗಳಲ್ಲಿ ಶೇ.80ರಷ್ಟು ಹಾಗೂ ಗ್ರೂಪ್-ಡಿ ಹುದ್ದೆಗಳಲ್ಲಿ ಶೇ.85ರಷ್ಟು ಹುದ್ದೆಗಳನ್ನು ಹೈದ್ರಾಬಾದ್-ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಹಾಗೆಯೇ ಮೇಲಿನ ಆದೇಶದ ಕಂಡಿಕೆ 13ರಲ್ಲಿ ರಾಜ್ಯಮಟ್ಟದ ಕಚೇರಿ ಮತ್ತು ಸಂಸ್ಥೆಗಳಲ್ಲಿನ ಎಲ್ಲಾ ವೃಂದದ ಹುದ್ದೆಗಳಲ್ಲಿ ಶೇ.8ರಷ್ಟು ಹುದ್ದೆಗಳನ್ನು ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಅದರಂತೆ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ಈಗಾಗಲೇ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿರುತ್ತದೆ.
ಯಾವುದೇ ಇಲಾಖೆಯಲ್ಲಿ ಮೇಲಿನ ಅವಕಾಶದಂತೆ ಮೀಸಲಾತಿ ನಿಗದಿಪಡಿಸದೇ ಇರುವ ಬಗ್ಗೆ ದೂರು ಸ್ವೀಕೃತವಾದಲ್ಲಿ ಅಂತಹ ಇಲಾಖೆಗಳಿಂದ ವರದಿ ಪಡೆದು ಮೀಸಲಾತಿ ನಿಗದಿಪಡಿಸುವಂತೆ ನಿರ್ದೇಶನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.