ಕರ್ನಾಟಕ

karnataka

ETV Bharat / state

ಇನ್ಮುಂದೆ ಮರಳು ಬ್ಯಾಗ್​ಗಳಲ್ಲಿ ಲಭ್ಯ: ಸಚಿವ ಮುರುಗೇಶ್ ನಿರಾಣಿ

ಬ್ಯಾಗ್​ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

By

Published : Jun 30, 2021, 10:38 PM IST

murugesh
ಸಚಿವ ಮುರುಗೇಶ್ ನಿರಾಣಿ ಹೇಳಿಕೆ

ಬೆಂಗಳೂರು:ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಬ್ಯಾಗ್​ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ.

ಬ್ಯಾಗ್​ಗಳಲ್ಲಿ ಮಾರಾಟ ಮಾಡುವ ಉದ್ದೇಶ ಏನೆಂದರೆ, ಸರ್ಕಾರದ ವತಿಯಿಂದಲೇ ಕೈಗೆಟುಕವ ದರದಲ್ಲಿ ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು, ಇದರ ಪ್ರಸ್ತಾವನೆಯು ಸಹ ಸಿದ್ಧವಾಗಿದೆ. ಇದರಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗದಲ್ಲಿ ಮರಳು ಲಭ್ಯವಾಗಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಸಚಿವ ಮುರುಗೇಶ್ ನಿರಾಣಿ ಹೇಳಿಕೆ

ಬುಧವಾರ ವಿಕಾಸಸೌಧದಲ್ಲಿ ಸಚಿವ ಮುರುಗೇಶ್ ನಿರಾಣಿ, ಕಲ್ಲು ಗಣಿಗಾರಿಕೆ ಮರಳು ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಮರಳು ಮಾರಾಟಕ್ಕೂ ನಿಗಮ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಮದ್ಯವನ್ನು ಯಾವ ರೀತಿ ಕರ್ನಾಟಕ ರಾಜ್ಯ ಪಾನೀಯ ನಿಗಮದ ಮೂಲಕ ಮಾರಾಟ ಮಾಡುತ್ತಿದೆಯೋ, ಅದೇ ಮಾದರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ತನ್ನದೇ ಆದ ಸಂಸ್ಥೆಯ ಮೂಲಕ ಬ್ಯಾಗ್​ಗಳಲ್ಲಿ ಮರಳು ಮಾರಾಟ ಮಾಡಲು ಉದ್ದೇಶಿಸಿದೆ ಎಂದು ಪ್ರಕಟಿಸಿದರು.

ಮರಳು ಸಾಗಣೆ ಮಾಡುವ ವೇಳೆ ಕನಿಷ್ಠ ಶೇ.25 ರಿಂದ 30ರಷ್ಟು ಮರಳು ಅನುಪಯುಕ್ತವಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ 50 ಕೆಜಿಯ ಬ್ಯಾಗ್, 1 ಟನ್ ಹಾಗೂ ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರು ಮರಳು ಖರೀದಿಸಬಹುದು ಎಂದು ಹೇಳಿದರು.

ಪ್ರಾಯೋಗಿಕವಾಗಿ ರಾಜ್ಯದ ಐದು ಕಡೆ ಈ ಘಟಕಗಳನ್ನು ಪ್ರಾರಂಭ ಮಾಡಲಾಗುವುದು. ಮರಳು ಮಾರಾಟ ಮಾಡಲು ಬ್ಯಾಗ್‍ಗಳನ್ನು ಸಿದ್ಧಪಡಿಸುವುದು, ಸಾಗಣೆ ಸೇರಿದಂತೆ ಎಲ್ಲ ರೀತಿಯ ತರಬೇತಿಯನ್ನು ಸಂಬಂಧಪಟ್ಟವರಿಗೆ ನೀಡಲಿದ್ದೇವೆ ಎಂದು ತಿಳಿಸಿದರು.

ಬ್ಯಾಗ್ ಮೂಲಕ ಮಾರಾಟ ಮಾಡುವಾಗ ಎ, ಬಿ ಮತ್ತು ಸಿ ಶ್ರೇಣಿ ಎಂದು ವರ್ಗೀಕರಣ ಮಾಡುತ್ತೇವೆ. ಮೊದಲು ಸ್ಟಾಕ್ ಯಾರ್ಡ್‍ಗಳಲ್ಲಿ ಪ್ರತ್ಯೇಕಗೊಳಿಸಿ ನಂತರ ಅದನ್ನು ಕೈಗೆಟಕುವ ದರದಲ್ಲಿ ವಿತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಮರಳುಗಾರಿಕೆಯನ್ನು ಕೇವಲ ಆರು ತಿಂಗಳು ಮಾತ್ರ ನಡೆಸಬಹುದು. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಅವಕಾಶವಿರುವುದಿಲ್ಲ. ಬ್ಯಾಗ್‍ಗಳಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡರೆ, ವರ್ಷಪೂರ್ತಿ ಬಳಕೆ ಮಾಡಬಹುದು ಎಂದು ಸಲಹೆ ಮಾಡಿದರು.

ಬ್ಯಾಗ್​ಗಳಲ್ಲಿ ಮರಳು ಸಂಗ್ರಹಣೆಯಾದರೆ ಸಾರ್ವಜನಿಕರಿಗೆ ಗುಣಮಟ್ಟದ ಮರಳು ಸಿಗಲಿದೆ. ತಮ್ಮ ವಾಹನಗಳಲ್ಲಿ ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು. ಇದರಿಂದ ಸಾಗಾಣಿಕೆ ವೆಚ್ಚವು ಕಡಿಮೆಯಾಗಲಿದೆ ಎಂದರು.

ವರ್ಷಪೂರ್ತಿ ಮರಳು ಸಿಗದ ಕಾರಣ ಮಾರುಕಟ್ಟೆಯಲ್ಲಿ ಮರಳಿನ ದರವು ದುಪ್ಪಟ್ಟಾಗುತ್ತಿತ್ತು. ಈಗ ಇದನ್ನು ತಪ್ಪಿಸಲು ಈ ಮಾರ್ಗೋಪಾಯ ಕಂಡುಕೊಳ್ಳಲಾಗಿದೆ ಎಂದರು. ಬ್ಯಾಗ್‍ಗಳಲ್ಲಿ ಮರಳನ್ನು ಸಂಗ್ರಹಿಸಿಟ್ಟರೆ ಯಾವಾಗ ಬೇಕಾದರೂ ವಿತರಣೆ ಮಾಡಬಹುದು. ಇದಕ್ಕೆ ದರ ಕಡಿಮೆ ಇರುತ್ತದೆ. ಇದಕ್ಕೆ 50ರೂ. ಖರ್ಚಾಗಬಹುದು ಎಂದರು.

5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿಯ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ. ಬಡವರು, ಬಡತನ ರೇಖೆಗಿಂತ ಕೆಳಗಿನವರು ಗ್ರಾಪಂ ಮಟ್ಟದಲ್ಲಿ ಆಶ್ರಯ ಮನೆ ಕಲ್ಪಿಸಿಕೊಳ್ಳುವವರಿಗೆ ಉಚಿತ ಮರಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಬ್ಲಾಕ್‍ಗಳನ್ನು ಗುರುತಿಸಲು ಸೂಚನೆ:

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಉಪಸಂರಕ್ಷಣಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಮುರುಗೇಶ್ ನಿರಾಣಿ ಅವರು ತತ್‍ಕ್ಷಣವೇ ನದಿ ಪಾತ್ರಗಳಲ್ಲಿ ಒಂದು, ಎರಡು, ಮೂರನೆ ಶ್ರೇಣಿಯ ಮರಳು ಬ್ಲಾಕ್‍ಗಳನ್ನು ಗುರುತಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟರು.

ಕೆಎಸ್‍ಎಂಸಿಎಲ್, ಹೆಚ್‍ಜಿಎಂಎಲ್ ವತಿಯಿಂದ ನಾಲ್ಕು, ಐದು ಮತ್ತು ಆರನೆ ಶ್ರೇಣಿಯ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮರಳು ಬ್ಲಾಕ್‍ಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಇದು ಏಕೆ ಸಾಧ್ಯವಾಗಿಲ್ಲ. ಕೂಡಲೇ ಬ್ಲಾಕ್ ಗುರುತಿಸುವ ಕಾರ್ಯ ಮಾಡಿ ಎಂದು ಸೂಚಿಸಿದರು.

ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ಹೊಸದಾಗಿ ಟೆಂಡರ್ ಕರೆಯುವುದು ಅಥವಾ ಮರು ಟೆಂಡರ್ ಕರೆದಾದರೂ ಬ್ಲಾಕ್‍ಗಳನ್ನು ಗುರುತಿಸಬೇಕು. ಇಲ್ಲಸಲ್ಲದ ಸಬೂಬು ಹೇಳಬೇಡಿ ಎಂದು ನಿರಾಣಿ ತಾಕೀತು ಮಾಡಿದರು.

ಈಗಾಗಲೇ ನೂತನ ಮರಳು ನೀತಿ ಸಿದ್ಧವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ. ಇದು ದೇಶಕ್ಕೆ ಮಾದರಿಯಾದ ನೀತಿ ಇದಾಗಲಿದೆ ಎಂದು ಅಭಿಪ್ರಾಯಪಟ್ಟರು.

ಡಿಪಿಆರ್​ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ

ಗಣಿಬಾಧಿತ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜಿಲ್ಲಾ ಅದಿರು ನಿಧಿಯಿಂದ ದೊಡ್ಡ ದೊಡ್ಡ ಯೋಜನೆಗಳನ್ನು ರೂಪಿಸಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲು ಸಚಿವ ನಿರಾಣಿ ಸೂಚಿಸಿದರು. ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಸೇರಿದಂತೆ ಮತ್ತಿತರ ಜೊತೆ ಪ್ರತ್ಯೇಕವಾಗಿ ವಿಡಿಯೋ ಸಂವಾದ ನಡೆಸಿದ ಅವರು, ಕೂಡಲೇ ಡಿಪಿಆರ್ ಸಿದ್ದಪಡಿಸಲು ನಿರ್ದೇಶನ ನೀಡಿದರು.

ಈ ಜಿಲ್ಲೆಗಳಲ್ಲಿ ಡಿಎಂಎಪ್ ನಿಧಿಯಿಂದ ಶಿಕ್ಷಣ, ಆರೋಗ್ಯ, ಕುಡಿವ ನೀರು, ನೈರ್ಮಲೀಕರಣ, ಸಮುದಾಯ ಭವನ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ಇದೆ.ಡಿಎಂಎಫ್ ನಿಧಿ ಬಳಕೆ ಮಾಡಿಕೊಳ್ಳುವ ಸಂಬಂಧ ಸುಪ್ರೀಂಕೋರ್ಟ್​​ಗೆ ಮನವರಿಕೆ ಮಾಡಿಕೊಡಲಾಗುವುದು.

ವಿಶೇಷವಾಗಿ ಚಿತ್ರದುರ್ಗ, ಬಳ್ಳಾರಿ, ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಜಾರಿ ಮಾಡುವ ಕುರಿತಾಗಿ ಡಿಪಿಆರ್ ಸಿದ್ಧಪಡಿಸಬೇಕೆಂದು ಹೇಳಿದರು. ಇದಕ್ಕೆ ಸಮ್ಮತಿಸಿದ ಮೂರು ಜಿಲ್ಲೆಗಳ ಅಧಿಕಾರಿಗಳು ಆದಷ್ಟು ಶೀಘ್ರ ಇಲಾಖೆಗೆ ವಿಸ್ತೃತ ಯೋಜನ ವರದಿಯನ್ನು ಸಿದ್ಧಪಡಿಸುವುದಾಗಿ ಭರವಸೆ ಕೊಟ್ಟರು.

ABOUT THE AUTHOR

...view details