ಬೆಂಗಳೂರು: ಸಾಲಕ್ಕೆ ಪ್ರತಿಯಾಗಿ ಮೊಬೈಲ್ ಕಿತ್ತಿಟ್ಟುಕೊಂಡ ಯುವಕನನ್ನು ಹತ್ಯೆಗೈದಿದ್ದ ಆರೋಪಿಗಳು ಸಂಪಿಗೆಹಳ್ಳಿ ಠಾಣೆಗೆ ಶರಣಾಗಿದ್ದಾರೆ. ಫಾರೂಕ್ ಖಾನ್ ಕೊಲೆಯಾದ ಯುವಕ. ಸುಹೈಲ್ ಖಾನ್, ಮುಬಾರಕ್ ಹಾಗೂ ಅಲಿ ಅಕ್ರಂ ಕೊಲೆ ಆರೋಪಿಗಳು.
ಪ್ರಕರಣದ ಸಂಪೂರ್ಣ ವಿವರ: ಭಾನುವಾರ(ಸೆ.17) ಮಧ್ಯಾಹ್ನ ಸಂಪಿಗೆಹಳ್ಳಿಯ ಅರ್ಕಾವತಿ ಲೇಔಟ್ನಲ್ಲಿ ಫಾರೂಕ್ ಖಾನ್ ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆಗೈಯ್ಯಲಾಗಿತ್ತು. ಕೊಲೆಯಾದ ಫಾರೂಕ್ ಖಾನ್ನಿಂದ ಸುಹೈಲ್ ಖಾನ್ 10 ಸಾವಿರ ರೂ. ಸಾಲ ಪಡೆದಿದ್ದನಂತೆ. ಸಾಲ ವಾಪಸ್ ಕೊಡುವುದು ವಿಳಂಬವಾದಾಗ ಸುಹೈಲ್ನ ಮೊಬೈಲ್ ಫೋನ್ನನ್ನು ಫಾರೂಕ್ ಹಾಗೂ ಆತನ ಸ್ನೇಹಿತ ಸದ್ದಾಂ ಕಿತ್ತಿಟ್ಟುಕೊಂಡಿದ್ದರಂತೆ. ಅಲ್ಲದೇ ನೀನು ಹಣ ಕೊಡದಿದ್ದರೆ ಪೊಲೀಸರಿಗೆ ದೂರು ಕೊಡುತ್ತೇನೆ ಎಂದು ಸುಹೈಲ್ಗೆ ಫಾರೂಕ್ ಎಚ್ಚರಿಕೆ ನೀಡಿದ್ದನಂತೆ.
ಮೊಬೈಲ್ ಫೋನ್ನಲ್ಲಿ ಸುಹೈಲ್ ತಾಯಿಯ ಫೋಟೋ ಇತ್ತು. ಆದ್ದರಿಂದ ಮೊಬೈಲ್ ಹಿಂದಿರುಗಿಸುವಂತೆ ಸುಹೈಲ್ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದನಂತೆ. ಆದರೆ ಮೊಬೈಲ್ ಕೊಡದೇ ಫಾರೂಕ್ ಆಟವಾಡಿಸುತ್ತಿದ್ದನಂತೆ. ಹೀಗಾಗಿ ಭಾನುವಾರ ವಾರ್ನಿಂಗ್ ಕೊಡುವ ಸಲುವಾಗಿ ಫಾರೂಕ್ನನ್ನು ಸುಹೈಲ್ ಖಾನ್ ಹಾಗೂ ಇತರೆ ಆರೋಪಿಗಳು ಆಟೋದಲ್ಲಿ ಅರ್ಕಾವತಿ ಲೇಔಟಿಗೆ ಕರೆದೊಯ್ದಿದ್ದರು.
ಅಲ್ಲಿ ಆರೋಪಿಗಳು ಹೆದರಿಸಲೆಂದು ಫಾರೂಕ್ನ ಕೈಗೆ ಚಾಕುವಿನಿಂದ ಇರಿದಿದ್ದರು. ಬಳಿಕ ಫಾರೂಕ್ ಪ್ರತಿರೋಧಿಸಿದಾಗ ಕೈ ತಪ್ಪಿ ಚಾಕು ಆತನ ಕುತ್ತಿಗೆ ಸೀಳಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಫಾರೂಕ್ ನರಳಾಡುತ್ತಿದ್ದ. ಆದರೆ ಆತ ಬದುಕಿದರೆ ತಮ್ಮ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗುತ್ತದೆ ಎಂದು ತಿಳಿದ ಆರೋಪಿಗಳು ಆತನನ್ನ ಹತ್ಯೆಗೈದಿದ್ದರು.