ಬೆಂಗಳೂರು:ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಸಿದ್ಧತೆ ಪ್ರಾರಂಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಪರಾಜಿತ ಕ್ಷೇತ್ರದ ಅಭ್ಯರ್ಥಿಗಳ ಸಭೆ ನಡೆಸಿದ್ದು, ಪರಾಜಿತ ಅಭ್ಯರ್ಥಿಗಳಿಗೆ 30 ಬೂತ್ಗಳ ಟಾರ್ಗೆಟ್ ನೀಡಲಾಗಿದೆ.
ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಮಾಜಿ ಸಿಎಂ ಯಡಿಯೂರಪ್ಪ ಕೂಡ ಚುನಾವಣಾ ತಂತ್ರಗಾರಿಕೆ ರೂಪಿಸಲು ಅಖಾಡಕ್ಕಿಳಿದಿದ್ದಾರೆ. ಶನಿವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪರಾಜಿತ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಜೊತೆ ಸಭೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರೂ ಪಾಲ್ಗೊಂಡರು. ಇತ್ತ ಸಿಎಂ ಬೊಮ್ಮಾಯಿ ಕೂಡ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ತಂತ್ರಗಾರಿಕೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, 2018ರಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳ ಜತೆ ಕಟೀಲ್, ಯಡಿಯೂರಪ್ಪ ಸಮಾಲೋಚನೆ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಸೋತ ಕ್ಷೇತ್ರಗಳಲ್ಲಿ ಪಕ್ಷದ ಸ್ಥಿತಿ, ಸಾಮರ್ಥ್ಯ, ಮುಂದಿನ ತಂತ್ರಗಾರಿಕೆ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು.