ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮತ್ತೊಮ್ಮೆ ಲಾಕ್ಡೌನ್ ಹೇರಿಕೆ ಮಾಡಲಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದೀಗ ಸಚಿವ ಆರ್.ಅಶೋಕ್ ಅದಕ್ಕೆ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಲಾಕ್ಡೌನ್ ಹೇರಿಕೆ ಇಲ್ಲ ಎಂದಿದ್ದಾರೆ. ಸಚಿವ ಸಂಪುಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾಹಿತಿ ಹೊರಹಾಕಿದರು.
ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಬಿಬಿಎಂಪಿ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದು, ಈಗಾಗಲೇ 100 ಆ್ಯಂಬುಲೆನ್ಸ್ ಸೇವೆ ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಎರಡು ವಾರ್ಡ್ಗಳಿಗೆ ಒಂದು ಆ್ಯಂಬುಲೆನ್ಸ್ ನೀಡಲಾಗುವುದು ಎಂದಿರುವ ಅವರು, ಖಾಸಗಿ ಆಸ್ಪತ್ರೆಗಳೊಂದಿಗೆ ನಾನೇ ಸಭೆ ನಡೆಸಿ, 5 ಸಾವಿರ ಬೆಡ್ ನೀಡಲು ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ನಾಳೆ ಖಾಸಗಿ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿ, ಅವರೊಂದಿಗೆ ಚರ್ಚೆ ನಡೆಸುವೆ ಎಂದಿರುವ ಅಶೋಕ್, ಸೋಂಕಿತರನ್ನ 6-8 ಗಂಟೆಯೊಳಗೆ ಆಸ್ಪತ್ರೆಗೆ ದಾಖಲು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.