ಕರ್ನಾಟಕ

karnataka

ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ: ಬಿ ಎಸ್ ಯಡಿಯೂರಪ್ಪ

By ETV Bharat Karnataka Team

Published : Nov 23, 2023, 3:36 PM IST

Updated : Nov 23, 2023, 4:36 PM IST

B S Yediyurappa: ವಿಜಯೇಂದ್ರ, ಆರ್ ಅಶೋಕ್ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಬಿಎಸ್​ವೈ ಹೇಳಿದ್ದಾರೆ.

ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಬಿಎಸ್ ವೈ
ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಬಿಎಸ್ ವೈ

ಬೆಂಗಳೂರು:ಯಾರೂ ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ನೀಡಲಾದ ವಿಧಾನಸೌಧ ಕಚೇರಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ರಮೇಶ್ ಜಾರಕಿಹೊಳಿ ನಿವಾಸಕ್ಕೆ ವಿಜಯೇಂದ್ರ ಹೋಗಿದ್ದರ ಬಗ್ಗೆ ಪ್ರತಿಕ್ರಿಯಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರ್.ಅಶೋಕ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಮಾಜಿ ಸಚಿವ ವಿ ಸೋಮಣ್ಣ ಜೊತೆ ಕೂಡ ಮಾತನಾಡುತ್ತೇವೆ. ಸೋಮಣ್ಣ ಕೂಡ ಒಳ್ಳೆಯ ಸಂಘಟಕ. ಮುಂದಿನ ದಿನಗಳಲ್ಲಿ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಆರ್. ಅಶೋಕ್ ಅವರನ್ನು ಪ್ರತಿಪಕ್ಷ ನಾಯಕ, ವಿಜಯೇಂದ್ರನನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಮಾಜಿ ಸಿಎಂ ಬೊಮ್ಮಾಯಿ‌ ಎಲ್ಲರೂ ಸೇರಿ ಪಕ್ಷವನ್ನು ಮುನ್ನಡೆಸುತ್ತೇವೆ. ಇಂದು ಚುನಾವಣೆ ನಡೆದರು ನಾವು ಗೆಲ್ಲುತ್ತೇವೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು. ಜಾತಿ ಗಣತಿ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸರ್ಕಾರ ಏನಂತ ತೀರ್ಮಾನ‌ ಮಾಡಲಿ. ಆಮೇಲೆ ನೋಡೋಣ ಎಂದರು.

ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಪ್ರಸ್ತಾಪ ಎಂದ ಬೊಮ್ಮಾಯಿ: ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ರಾಜಕೀಯ ಲಾಭ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವಿಷಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಾತಿ ಜನಗಣತಿಯ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಗೊಂದಲದ ಗೂಡು ಮಾಡಿದ್ದಾರೆ. ಆರಂಭದಲ್ಲಿ ಜಾತಿಗಣತಿ ಅಂದರು, ಆಮೇಲೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ವರದಿ ಅಂದರು. ಸರ್ಕಾರಿ ಆದೇಶದಲ್ಲಿ ಸಾಮಾಜಿಕ ಶೈಕ್ಷಣಿಕ ವರದಿ ಅಂತ ಬರೆದಿದ್ದಾರೆ ಎಂದು ಬೊಮ್ಮಾಯಿ ಟೀಕಿಸಿದರು.

ಹಿಂದುಳಿದ ವರ್ಗಗಳ ಆಯೋಗ ಮಾಡಿರುವುದು ಸರಿಯಾಗಿ ಸಮೀಕ್ಷೆ ಆಗಿಲ್ಲ, ಸದಸ್ಯರು, ಅಧ್ಯಕ್ಷರಿಗೆ ಸಾಮ್ಯತೆ ಇರಲಿಲ್ಲ, ರಾಜಕೀಯ ಹಸ್ತಕ್ಷೇಪ ಇತ್ತು, ಇಷ್ಟೆಲ್ಲ ನಡೆದಿದ್ದರೂ ಸಿದ್ದರಾಮಯ್ಯ ಸುಮ್ಮನಿದ್ದರು. ಆಗ ವರದಿ ಪಡೆದಿಲ್ಲ. ಈಗ ಚುನಾವಣೆ ಬರುತ್ತಿದೆ ಎಂದು ರಾಜಕೀಯ ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಸ್ಪಷ್ಟ ವರದಿ ಬಂದ ಮೇಲೆ ನಮ್ಮ ತೀರ್ಮಾನ ತಿಳಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದರು.

ರಮೇಶ್​ ಜಾರಕಿಹೊಳಿ ಭೇಟಿ ಮಾಡಿದ ವಿಜಯೇಂದ್ರ: ಇದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಮೇಶ್​ ಜಾರಕಿಹೊಳಿ, ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿಗೆ ಸೂಚಿಸಿದ್ದೇವೆ ಎಂದರು.

ವಿಜಯೇಂದ್ರ ಮತ್ತು ತಮ್ಮ ಮಧ್ಯೆ ನಡೆದ ಚರ್ಚೆಯನ್ನು ಬಹಿರಂಗ ಪಡಿಸಲು ಇಚ್ಛಿಸುವುದಿಲ್ಲ. ವಿಜಯೇಂದ್ರ ಅವರು ಈಗ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಅವರ ಬಗ್ಗೆ ನಾವು ಪ್ರಶ್ನೆ ಮಾಡಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಗೆಲುವಿಗಾಗಿ ನಾವೆಲ್ಲ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ, ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕರಾಗಿ ಒಪ್ಪಿಕೊಂಡಿದ್ದೇವೆ. ಬಿಜೆಪಿಯಲ್ಲಿ ಪಕ್ಷ ಸಂಘಟನೆ ಶುರು ಮಾಡುತ್ತೇವೆ. ಈಗ ನಮ್ಮ ಟಾಸ್ಕ್ ಮೋದಿಯವರನ್ನು ಮತ್ತೆ ದೇಶದ ಪ್ರಧಾನಿ ಮಾಡೋದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲೋಕಸಭೆ ಚುನಾವಣೆ: ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ- ರಮೇಶ್ ಜಾರಕಿಹೊಳಿ

Last Updated : Nov 23, 2023, 4:36 PM IST

ABOUT THE AUTHOR

...view details