ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಯಾವೊಬ್ಬ ನಾಗರಿಕರಿಗೂ ತೊಂದರೆಯಾಗುವುದಿಲ್ಲ. ಹಾಗಾಗಿ ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಿಲ್ ಜೈನ್ ಸ್ಪಷ್ಟಪಡಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಸೃಷ್ಟಿಯಾಗಿರುವ ಗೊಂದಲ ಸರಿಪಡಿಸಿ ಜನಜಾಗೃತಿ ಮೂಡಿಸಲು ಬಿಜೆಪಿ ದೇಶಾದ್ಯಂತ ಅಭಿಯಾನ ಹಮ್ಮಿಕೊಂಡಿದ್ದು, ಅದರ ಅಂಗವಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅನಿಲ್ ಜೈನ್ ಸುದ್ದಿಗೋಷ್ಠಿ ನಡೆಸಿದರು. ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆಯಿಂದ ದೇಶದ 130 ಕೋಟಿ ಜನರಿಗೆ ಯಾವುದೇ ತೊಂದರೆ ಆಗಲ್ಲ. ದೇಶದ ನಾಗರಿಕರಿಗಾಗಿ ಇದನ್ನು ಜಾರಿಗೆ ತಂದಿಲ್ಲ. ಹಾಗಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ. ಇದು ನೆರೆಯ ರಾಷ್ಟ್ರಗಳ ಅಲ್ಪಸಂಖ್ಯಾತರು ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ಬಂದಿದ್ದರೆ ಅವರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ. ಅಂತವರ ಗೌರವಯುತ ಬದುಕಿಗಾಗಿ ಅವರಿಗೆ ಪೌರತ್ವ ನೀಡುವುದಾಗಿದೆ ಎಂದರು.
ಮನಮೋಹನ್ ಸಿಂಗ್ 2003ರಲ್ಲಿ ಧಾರ್ಮಿಕ ಕಿರುಕುಳ ಅನುಭವಿಸಿ ವಲಸೆ ಬಂದಿರುವ ಬಾಂಗ್ಲಾದವರಿಗೆ ಪೌರತ್ವ ನೀಡಬೇಕೆಂದು ಮನವಿ ಮಾಡಿದ್ದರು. 2005-2006ರಲ್ಲಿ ಕಾಯ್ದೆಯನ್ನು ಯುಪಿಎ ಸರ್ಕಾರವೇ ರೂಪಿಸಿತ್ತು. ಈಗ ಅದೇ ಪಕ್ಷದ ನಾಯಕರು ವಿರೋಧ ಮಾಡುತ್ತಿರುವುದು ಯಾಕೆ? ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಇಷ್ಟೆಲ್ಲಾ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಅಷ್ಟೇ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.