ಕರ್ನಾಟಕ

karnataka

ETV Bharat / state

ಈ ವರ್ಷ ಬೇಸಿಗೆ ರಜೆ ಕೊಡಲ್ಲ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬದಲಾವಣೆ ಇಲ್ಲ: ಸಚಿವ ಅಶ್ವತ್ಥ ನಾರಾಯಣ - ಶೈಕ್ಷಣಿಕ ವರ್ಷದ ಬಗ್ಗೆ ಸಚಿವರಿಂದ ಮಾಹಿತಿ

2021-22ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ, ತರಗತಿಗಳು ಆರಂಭವಾಗುತ್ತವೆ. ಆಫ್‌ಲೈನ್‌ ಮತ್ತು ಆನ್‌ಲೈನ್‌ ತರಗತಿಗಳು ನಡೆಯಲಿವೆ ಎಂದು ಸಚಿವ ‌ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

No Summer holyday this year says Higher Education Minister
ಸಚಿವ ‌ಅಶ್ವತ್ಥ ನಾರಾಯಣ

By

Published : Apr 10, 2021, 10:38 PM IST

ಬೆಂಗಳೂರು: ಕೋವಿಡ್‌ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ಹೇಳಿದರು.

ನಗರದ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್‌, ಡಿಪ್ಲೋಮಾ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಎಲ್ಲಾ ವಿಭಾಗದ ಪರೀಕ್ಷೆಗಳು ಯಥಾವತ್‌ ನಡೆಯುತ್ತವೆ. ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷ ನಿಲ್ಲುವುದಿಲ್ಲ:ಮುಂದಿನ ವರ್ಷ, ಅಂದರೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ, ತರಗತಿಗಳು ಆರಂಭವಾಗುತ್ತವೆ. ಆಫ್‌ಲೈನ್‌ ಮತ್ತು ಆನ್‌ಲೈನ್‌ ತರಗತಿಗಳು ನಡೆಯಲಿವೆ. ಮೊದಲು ಆನ್‌ಲೈನ್‌ ತರಗತಿಗಳು ಆರಂಭವಾಗುತ್ತವೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕಾಗುತ್ತದೆ. ಯಾರು ಕಾಲೇಜಿಗೆ ಬರುತ್ತಾರೋ ಅವರ ಸುರಕ್ಷತೆಗೆ ಕಾಲೇಜಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳಲಾಗುವುದು. ತರಗತಿ ಕೊಠಡಿಗಳ ಸ್ಯಾನಿಟೈಸೇಷನ್‌, ಸ್ವಚ್ಛತೆ, ಕೋವಿಡ್‌ ಪರೀಕ್ಷೆ, ದೈಹಿಕ ಅಂತರ ಹಾಗೂ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಹೇಳಿದರು.

1.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌:ಕೋವಿಡ್‌ ಕಾರಣಕ್ಕಾಗಿ ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದರಿಂದ ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಕಲಿಯಬಹುದು. ಇದಕ್ಕೆ ನೆರವಾಗುವಂತೆ ಈ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.60 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್‌, ಪಿಸಿಗಳನ್ನು ನೀಡಲಾಗಿದೆ. ಕಳೆದ ವರ್ಷ 1.10 ಲಕ್ಷ ವಿದ್ಯಾರ್ಥಿಗಳಿಗೆ ಕೊಡಲಾಗಿತ್ತು. ತರಗತಿ ಕೊಠಡಿಗಳನ್ನೇ ಸ್ಟುಡಿಯೋಗಳನ್ನಾಗಿ ಪರಿವರ್ತಿಸಲಾಗಿದೆ. ಎಲ್ಲವೂ ಸ್ಮಾರ್ಟ್‌ ಕ್ಲಾಸ್‌ ರೂಮ್​ಗಳಾಗಿವೆ. ಇದರ ಜೊತೆಗೆ ಮನೆಯಿಂದಲೂ ವ್ಯಾಸಂಗ ಮುಂದುವರಿಸಬಹುದು ಎಂದು ಮಾಹಿತಿ ನೀಡಿದರು.

ಈಗಾಗಲೇ ಮುಂದಿನ ಶೈಕ್ಷಣಿಕ ವರ್ಷದ ನಾಲ್ಕೈದು ತಿಂಗಳು ನಷ್ಟವಾಗಿದೆ. ಇನ್ನೂ ತಡ ಆಗುವುದು ಬೇಡ. ಒಂದು ವೇಳೆ ತಡವಾದರೆ ಓದು, ಪರೀಕ್ಷೆ, ತೇರ್ಗಡೆ, ಉದ್ಯೋಗ, ಮುಂದಿನ ವ್ಯಾಸಂಗದ ಚೈನ್‌ ಕಟ್‌ ಆಗಿಬಿಡುತ್ತದೆ. ಹಾಗೆ ಆಗುವುದು ಬೇಡ ಎಂದರು.

ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯಲ್ಲಿ ಸರಿಯಾಗಿ ಕಂಟೆಂಟ್‌ ಅಪ್‌ಲೋಡ್‌ ಮಾಡಲಾಗುತ್ತಿಲ್ಲ ಎಂಬ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕೂಡಲೇ ಅದನ್ನು ಸರಿ ಮಾಡುತ್ತೇವೆ. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಇಡೀ ದೇಶದಲ್ಲೇ ಮೊಟ್ಟ ಮೊದಲಿಗೆ ಇಂತಹ ಕಲಿಕಾ ವ್ಯವಸ್ಥೆಯನ್ನು ಜಾರಿಗೆ ತಂದ ರಾಜ್ಯ ಕರ್ನಾಟಕ. ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.

For All Latest Updates

TAGGED:

ABOUT THE AUTHOR

...view details