ಕರ್ನಾಟಕ

karnataka

By

Published : Nov 3, 2022, 6:59 PM IST

Updated : Nov 3, 2022, 10:56 PM IST

ETV Bharat / state

ವಿಧಾನ ಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್

ವಿಧಾನ ಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು:ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಹೈಕೋರ್ಟ್​ನ ಈ ಆದೇಶದಿಂದ ಚಿಕ್ಕಮಗಳೂರು ಕ್ಷೇತ್ರದಿಂದ ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ಬಿಜೆಪಿ ಎಂ.ಕೆ.ಪ್ರಾಣೇಶ್ ಪೇಚಿಗೆ ಸಿಲುಕಿದಂತಾಗಿದೆ.

ವಿಧಾನಪರಿಷತ್‌ ಚುನಾವಣೆಯಲ್ಲಿ 6 ಮತಗಳ ಅಂತರದಲ್ಲಿ ಸೋಲುಂಡಿದ್ದ ಕಾಂಗ್ರೆಸ್ ಪಕ್ಷದ ಗಾಯತ್ರಿ ಶಾಂತೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಹೇಮಂತ್ ಚಂದನ್ ಗೌಡರ್‌ರವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಸಂವಿಧಾನದ ಕಲಂ 243(6) ಮತ್ತು ಕೆಎಂಸಿ ಕಾಯಿದೆ ಪ್ರಕಾರ ನಾಮನಿರ್ದೇಶಿತ ಸದಸ್ಯರಿಗೆ ಮುನಿಸಿಪಾಲಿಟಿ ಸಭೆಗಳಲ್ಲೂ ಸಹ ಮತದಾನ ಮಾಡುವ ಹಕ್ಕಿಲ್ಲ, ಅವರು ಸಲಹೆ-ಸೂಚನೆಗಳನ್ನು ನೀಡಬಹುದಷ್ಟೇ. ಹಾಗಾಗಿ ವಿಧಾನಪರಿಷತ್ ಚುನಾವಣೆಯಲ್ಲೂ ಸಹ ಮತದಾನದ ಹಕ್ಕು ಇರುವುದಿಲ್ಲ ಎಂದು ನ್ಯಾಯಪೀಠ ಆದೇಶ ನೀಡಿದೆ.

ಅರ್ಜಿದಾರರ ಪರ ವಕೀಲರು, ಚಿಕ್ಕಮಗಳೂರು ಕ್ಷೇತ್ರದಿಂದ ನಡೆದ ಚುನಾವಣೆಯ ಮತದಾರರ ಪಟ್ಟಿಗೆ 4 ಪಟ್ಟಣ ಪಂಚಾಯ್ತಿಗಳ 12 ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಿರುವುದು ಕಾನೂನುಬಾಹಿರ ಕ್ರಮ. ಸಂವಿಧಾನದ ನಿಯಮಗಳ ಪ್ರಕಾರ ನಾಮನಿರ್ದೇಶಿತ ಸದಸ್ಯರಿಗೆ ಸ್ಥಳೀಯ ಸಂಸ್ಥೆಗಳ ಸಭೆಗಳಲ್ಲಿ ಭಾಗವಹಿಸಬಹುದೇ ಹೊರತು, ಅವರಿಗೆ ಮತದಾನದ ಹಕ್ಕಿರುವುದಿಲ್ಲ. ಹಾಗಾಗಿ ಕಾನೂನು ಬಾಹಿರವಾಗಿ ಅವರಿಗೆ ಮತದಾನದ ಹಕ್ಕು ನೀಡಿರುವುದರಿಂದ ಆ ಮತಗಳ ಆಧಾರದ ಮೇಲೆ ಎಂ.ಕೆ.ಪ್ರಾಣೇಶ್ ಗೆಲುವು ಪಡೆದಿದ್ದಾರೆ ಎಂದು ವಾದಿಸಿದ್ದರು.

ಆದರೆ ಚುನಾವಣಾ ಆಯೋಗ ಮತ್ತು ಪ್ರಾಣೇಶ್ ಪರ ವಕೀಲ ಶರತ್ ದೊಡ್ಡವಾಡ, ನಾಮನಿರ್ದೇಶಿತರ ಸದಸ್ಯರಿಗೆ ಸ್ಥಳೀಯ ಸಂಸ್ಥೆಗಳ ಸಭೆಗಳಲ್ಲಿ ಮತದಾನದ ಹಕ್ಕಿಲ್ಲ ಎಂದಾಕ್ಷಣ ವಿಧಾನಪರಿಷತ್ ಚುನಾವಣೆಯಲ್ಲೂ ಮತದಾನದ ಹಕ್ಕಿಲ್ಲವೆಂದು ಹೇಳಲಾಗದು. ಸ್ಥಳೀಯ ಸಂಸ್ಥೆಗಳ ಸಭೆ ಬೇರೆ ಮತ್ತು ವಿಧಾನಪರಿಷತ್ ಚುನಾವಣೆಯೇ ಬೇರೆ. ನಾಮನಿರ್ದೇಶಿತರಿಗೆ ವಿಧಾನಪರಿಷತ್‌ಗೆ ಚುನಾವಣೆಯಲ್ಲಿ ಮತದಾನದ ಹಕ್ಕಿಲ್ಲವೆಂದು ಎಲ್ಲೂ ನಿರ್ಬಂಧ ಹೇರಿಲ್ಲ ಎಂದು ಹೇಳಿದ್ದರು.

ಪ್ರಕರಣದ ಹಿನ್ನೆಲೆ:ಕೇಂದ್ರ ಚುನಾವಣಾ ಆಯೋಗ 2021ರ ನ.9ರಂದು ಚಿಕ್ಕಮಗಳೂರು ಸೇರಿದಂತೆ ರಾಜ್ಯದ 20 ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ 25 ಸದಸ್ಯ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಿತ್ತು. ಆ ಚುನಾವಣೆಯಲ್ಲಿ ಎಂ.ಕೆ.ಪ್ರಾಣೇಶ್ 1182 ಮತಗಳನ್ನು ಮತ್ತು ಗಾಯಿತ್ರಿ ಅವರು 1176 ಮತಗಳನ್ನು ಪಡೆದಿದ್ದರು. ಎಂ.ಕೆ.ಪ್ರಾಣೇಶ್ 6 ಮತಗಳ ಅಂತರದಲ್ಲಿ ಗೆಲುವು ಪಡೆದಿದ್ದರು.

ಆದರೆ ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಗಾಯತ್ರಿ ಶಾಂತೇಗೌಡ, ಮೂಡಿಗೆರೆ, ಎನ್.ಆರ್.ಪುರ. ಶೃಂಗೇರಿ ಮತ್ತು ಕೊಪ್ಪ ಟೌನ್ ಪಂಚಾಯ್ತಿಗಳ 12 ನಾಮನಿರ್ದೇಶಿತ ಸದಸ್ಯರಿಗೆ ಕಾನೂನು ಬಾಹಿರವಾಗಿ ಮತದಾನದ ಹಕ್ಕು ನೀಡಿರುವುದರಿಂದ ಪ್ರತಿಸ್ಪರ್ಧಿ ಗೆಲುವು ಸಾಧಿಸಿದ್ದಾರೆ. ಆದರೆ ಮೂಲತಃ ಸಂವಿಧಾನದ ನಿಯಮಗಳಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಎಂಎಲ್​ಸಿ ಚುನಾವಣೆಯಲ್ಲಿ ಮತದಾನದ ಹಕ್ಕಿಲ್ಲ. ಪ್ರತಿವಾದಿಯ ಆಯ್ಕೆ ಅಕ್ರಮ ಹಾಗೂ ಕಾನೂನು ಬಾಹಿರ. ಹಾಗಾಗಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲವೆಂದು ಸಾರಬೇಕೆಂದು ಕೋರಿದ್ದರು.

ಚುನಾವಣಾ ತಕರಾರು ಅರ್ಜಿ ಇನ್ನು ಬಾಕಿ:ಬಿಜೆಪಿಯ ಎಂಎಲ್​ಸಿ ಎಂ.ಕೆ.ಪ್ರಾಣೇಶ್ ಆಯ್ಕೆ ಸಿಂಧುತ್ವ ಕೋರಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ಹೈಕೋರ್ಟ್‌ನ ಮತ್ತೊಂದು ಪೀಠದಲ್ಲಿ ವಿಚಾರಣಾ ಹಂತದಲ್ಲಿದೆ. ಹೀಗಾಗಿ ಅದು ಇತ್ಯರ್ಥವಾಗುವವರೆಗೆ ಹೈಕೋರ್ಟ್‌ನ ಏಕಸದಸ್ಯಪೀಠ ನೀಡಿರುವ ತೀರ್ಪು ಪರಿಣಾಮ ಬೀರುವುದಿಲ್ಲ

(ಓದಿ: ಬೀದಿಬದಿ ಮಕ್ಕಳ ಶಿಕ್ಷಣದ ಕುರಿತು ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ)

Last Updated : Nov 3, 2022, 10:56 PM IST

ABOUT THE AUTHOR

...view details