ಕರ್ನಾಟಕ

karnataka

ಮಾಸಾಶನಕ್ಕಾಗಿ 5 ಕಿ.ಮೀ ದೂರ ತೆವಳಿದ ವೃದ್ಧೆ; ಗ್ಯಾರಂಟಿ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೇ?-ಹೆಚ್​​ಡಿಕೆ

By ETV Bharat Karnataka Team

Published : Jan 14, 2024, 3:38 PM IST

ದಾವಣಗೆರೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದ ವೃದ್ಧೆಯೊಬ್ಬರು ಮಾಸಾಶನಕ್ಕಾಗಿ ತೆವಳಿಕೊಂಡು ಅಂಚೆ ಕಚೇರಿಗೆ ಬಂದ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

old-woman-crawls-5-km-for-monthly-pension-hd-kumaraswamy-outraged
ಗ್ಯಾರಂಟಿ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೇ ಎಂದ ಹೆಚ್​​ಡಿಕೆ

ಬೆಂಗಳೂರು:ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಗ್ಯಾರಂಟಿ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂತಹ ಅಶಕ್ತರನ್ನು ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಸಾಶನ ನೀಡಬೇಕು,‌ ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆತಗ್ಗಿಸುವಂತೆ ಮಾಡಿದೆ, ಹಾಗೂ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ. ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ಧಾಪ್ಯ ವೇತನ, ವಿಕಲಚೇತನರ ಮಾಸಾಶನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿ ಇರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ 2000 ರೂ. ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರ್ಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ, ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಧಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಸಾಶನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರ್ಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ಕಾಂಗ್ರೆಸ್ ಸರ್ಕಾರ ಕಣ್ತೆರೆದು ನೋಡಲಿ ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಮಾಸಾಶನ ಪಡೆಯಲು 2 ಕಿಮೀ ತೆವಳಿಕೊಂಡು ಪೋಸ್ಟ್​ ಆಫೀಸ್​​ಗೆ​ ಬಂದ ವೃದ್ಧೆ

ABOUT THE AUTHOR

...view details