ಕರ್ನಾಟಕ

karnataka

ಚಾಮರಾಜನಗರ ಆಸ್ಪತ್ರೆ ಆಕ್ಸಿಜನ್ ದುರ್ಘಟನೆ- ಇನ್ನೂ ದೊರಕದ ನ್ಯಾಯ: ರಾಜ್ಯಪಾಲರ ಭೇಟಿಯಾದ ಮೃತರ ಕುಟುಂಬ

By

Published : Feb 28, 2022, 7:07 PM IST

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2 ರ ಮಧ್ಯರಾತ್ರಿ ಆಕ್ಸಿಜನ್ ಪೂರೈಕೆಯಾಗದೆ 37 ಮಂದಿ ಮೃತರಾಗಿ ಈಗಾಗಲೇ 9 ತಿಂಗಳು ಕಳೆದಿವೆ. ಆದರೆ ಇಂದಿಗೂ ಮೃತರ ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ. ಹಿಗಾಗಿ ಮೃತರ ಕುಟುಂಬಸ್ಥರು ರಾಜ್ಯಪಾಲರನ್ನ ಭೇಟಿಯಾಗಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ಮೃತರ ಕುಟುಂಬ
ರಾಜ್ಯಪಾಲರನ್ನು ಭೇಟಿಯಾದ ಮೃತರ ಕುಟುಂಬ

ಬೆಂಗಳೂರು : ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ರೋಗಿಗಳ ಕುಟುಂಬ ಸದಸ್ಯರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ರಾಜ್ಯಪಾಲರ ಭೇಟಿಗೆ ತೆರಳುವ ಮುನ್ನ ಎಸ್​​ಡಿಪಿಐ ಸಂಘಟನೆ ಮುಖ್ಯಸ್ಥರ ಜೊತೆ ಮೃತರ ಕುಟುಂಬ ಸದಸ್ಯರು ಬೆಂಗಳೂರಿನ ಶಾಸಕರ ಭವನದಲ್ಲಿ ಸಭೆ ನಡೆಸಿದರು. ಎಸ್​​ಡಿಪಿಐ ಪ್ರಮುಖರು ಹಾಗೂ ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಈ ಸಭೆಯಲ್ಲಿ ಚಾಮರಾಜನಗರದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಹಲವು ಮಂದಿ ಭಾಗವಹಿಸಿದ್ದರು. ಇದೇ ಸಂದರ್ಭ ಅವರೆಲ್ಲ ತಮ್ಮ ಅನುಭವ ಹೇಳಿಕೊಂಡರು.

ಎಸ್​​ಡಿಪಿಐ ಸಂಘಟನೆ ಮುಖ್ಯಸ್ಥರ ಜೊತೆ ಮೃತರ ಕುಟುಂಬ ಸದಸ್ಯರ ಸಭೆ

ಇದೇ ಸಂದರ್ಭ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2 ರ ಮಧ್ಯರಾತ್ರಿ ಆಕ್ಸಿಜನ್ ಪೂರೈಕೆಯಾಗದೇ 37 ಮಂದಿ ಮೃತರಾಗಿ ಈಗಾಗಲೇ 9 ತಿಂಗಳು ಕಳೆದಿವೆ. ಘಟನೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ವೇಣುಗೋಪಾಲಗೌಡ ಅವರು ತಮ್ಮ ಪ್ರಾಥಮಿಕ ತನಿಖಾ ವರದಿಯಲ್ಲಿ ದುರ್ಘಟನೆಗೆ ಆಕ್ಸಿಜನ್ ಕೊರತೆಯ ಪ್ರಮುಖ ಕಾರಣವಾಗಿದೆ.

ಅಂದಿನ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಕುರಿತು ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತ ತೋರಿಸುವಲ್ಲಿ ಜಿಲ್ಲಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಇಷ್ಟಾದರೂ ಜಿಲ್ಲಾಧಿಕಾರಿಗಳು ಸೇರಿದಂತೆ ಯಾವ ಒಬ್ಬ ವೈದ್ಯಾಧಿಕಾರಿಯ ವಿರುದ್ಧ ಸರ್ಕಾರ ಇಲ್ಲಿಯವರೆಗೂ ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿದರು.

ಇನ್ನೂ ಬಿಡುಗಡೆ ಆಗದ ಏಕ ಸದಸ್ಯ ಆಯೋಗದ ವರದಿ:ಇನ್ನೊಂದು ಕಡೆ ಸರ್ಕಾರ ನೇಮಕ ಮಾಡಿರುವ ಏಕಸದಸ್ಯ ಆಯೋಗದ ಅಧ್ಯಕ್ಷರಾದ ಬಿ.ಎ ಪಾಟೀಲ್ ವರದಿ ಸಹ ಬಹಿರಂಗಗೊಂಡಿಲ್ಲ. ಒಟ್ಟು 37 ಮೃತರ ಕುಟುಂಬಸ್ಥರ ಪೈಕಿ ಕೇವಲ 24 ಮಂದಿಯ ಕುಟುಂಬ ಸದಸ್ಯರಿಗೆ ಅಲ್ಪ ಸ್ವಲ್ಪ ಪರಿಹಾರ ನೀಡಿದೆ. ಇನ್ನು 13 ಸಂತ್ರಸ್ತ ಕುಟುಂಬಸ್ಥರಿಗೆ ಪರಿಹಾರದ ಒಂದು ನಯಾಪೈಸೆ ಸಹ ನೀಡಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುರ್ಘಟನೆಗೆ ಬಲಿಯಾದವರಲ್ಲಿ ಶೇಕಡ 50ಕ್ಕಿಂತ ಹೆಚ್ಚು ಎಸ್.ಸಿ/ಎಸ್.ಟಿ. ಸಮುದಾಯದವರು ಹಾಗೂ ಕೂಲಿ ಕಾರ್ಮಿಕರು ಹೆಚ್ಚಾಗಿದ್ದಾರೆ. ಆಧಾರ ಸ್ಥಂಭವಾಗಿದ್ದ ಮನೆಯ ಯಜಮಾನ ಇಲ್ಲದೇ ಈ ಬಡಪಾಯಿ ಕುಟುಂಬಸ್ಥರ ಜೀವನ ಅಸ್ತವ್ಯಸ್ತವಾಗಿದ್ದು, ಸಂತ್ರಸ್ತರ ಕುಟುಂಬಸ್ಥರಲ್ಲಿ ಮಕ್ಕಳು ಸಹ ಇದ್ದು, ಆ ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಆರೈಕೆಗೆ ಬಹಳ ತೊಂದರೆ ಆಗುತ್ತಿದೆ. ಸಂತ್ರಸ್ತರ ಈ ದುಃಸ್ಥಿತಿಯನ್ನು ನೋಡಿಕೊಂಡು ಸರ್ಕಾರ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವುದು ವಿಪರ್ಯಾಸವೇ ಸರಿ.

50 ಲಕ್ಷ ಪರಿಹಾರಕ್ಕೆ ಒತ್ತಾಯ:ಸಂತ್ರಸ್ತರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ಸಂತ್ರಸ್ತ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ ಕುಟುಂಬಸ್ಯರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ತಪ್ಪಿತಸ್ಯ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಗೌರವನ್ವಿತ ರಾಜ್ಯಪಾಲರು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಮಸ್ತ ಸಂತ್ರಸ್ತರ ಪರವಾಗಿ ಮನವಿಯನ್ನು ನೀಡಲಾಗುವುದು ಹಾಗೂ ಅಂತಿಮವಾಗಿ ಸಂತ್ರಸ್ತರಿಗೆ ನ್ಯಾಯ ಸಿಗುವರೆಗೂ ಎಸ್ಡಿಪಿಐ ತನ್ನ ಹೋರಾಟ ಮುಂದುವರಿಸಲಿದೆ ಎಂದು ಅಬ್ದುಲ್ ಮಜೀದ್ ಸಮಾಲೋಚನ ಸಭೆಯಲ್ಲಿ ತಿಳಿಸಿದರು.

ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್ ದ್ವಾರಕನಾಥ್, ಚಾಮರಾಜನಗರ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಅಬ್ರಾರ್ ಅಹಮದ್, ರಾಷ್ಟ್ರೀಯ ಕಾರ್ಯದರ್ಶಿ ಅಲೋನ್ಸ್ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಭಾಸ್ಕರ್ ಪ್ರಸಾದ್, ಅಫ್ಸರ್‌ ಕೂಡ್ಲಿಪೇಟೆ, ಹೈಕೋರ್ಟ್ ವಕೀಲರಾದ ಮಜೀದ್ ಖಾನ್, ರಾಜ್ಯ ಮಾಧ್ಯಮ ಸಂಯೋಜಕರಾದ ರಿಯಾಜ್ ಕಡಂಬು, ಚಾಮರಾಜನಗರ ನಗರಸಭಾ ಸದಸ್ಯ ಮಹೇಶ್ ಹಾಗೂ ಸಂತ್ರಸ್ತ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

TAGGED:

ABOUT THE AUTHOR

...view details